ಮಡಿಕೇರಿ ಜ.10 : ನ್ಯಾಯಮೂರ್ತಿ ಸದಾಶಿವ ಆರೋಗದ ವರದಿಯನ್ನು ತಕ್ಷಣವೇ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಆಗ್ರಹಿಸಿ (ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ) ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಬೇಡಿಕೆಯ ಈಡೇರಿಕೆಗಾಗಿ ಆಗ್ರಹಿಸಿದರು.
ಈ ಸಂದರ್ಭ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಮಾತನಾಡಿ, ಸಾಮಾಜಿಕ ಪರಿವರ್ತನೆಗೆ ಹೋರಾಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪರಿಶಿಷ್ಟರಲ್ಲೇ ಅತ್ಯಂತ ದುರ್ಬಲರಾದ ವರ್ಗಗಳಿಗೆ ವಿಶೇಷ ರಕ್ಷಣೆ ಹಾಗೂ ಮೀಸಲಾತಿ ಅಗತ್ಯತೆಗಳನ್ನು ಜನಸಂಖ್ಯೆ ಆಧಾರದಲ್ಲಿಯೂ ಮತ್ತು ಆರ್ಥಿಕ ಹಿಂದುಳಿದಿರುವಿಕೆಯನ್ನು ಆಧರಿಸಿ ಪ್ರತಿಪಾದಿಸಿದ್ದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಜನಪರ ಸಂಘಟನೆಗಳೆಲ್ಲಾ ಒಂದಾಗಿ ಪರಿಶಿಷ್ಟ ಒಳಮೀಸಲಾತಿ ಜಾರಿಯಾಗಬೇಕೆಂದು ಹೋರಾಟ ಮಾಡಿದ್ದರ ಪರಿಣಾಮ ಈ ಹಿಂದಿನ ಧರ್ಮಸಿಂಗ್ ನೇತೃತ್ವದ ಸರ್ಕಾರ ಒಂದು ಆಯೋಗವನ್ನು ರಚನೆ ಮಾಡಿ ಆ ಆಯೋಗದ ಅಧ್ಯಕ್ಷರನ್ನಾಗಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಅವರನ್ನು ನೇಮಕ ಮಾಡಿತ್ತು. ನ್ಯಾಯಮೂರ್ತಿ ಸದಾಶಿವರವರು ಏಳು ವರ್ಷಕ್ಕೂ ಹೆಚ್ಚುಕಾಲ ಪರಿಶಿಷ್ಟ ಜಾತಿಗಳ ಸಾಮಾಜಿಕ ಶೈಕ್ಷಣಿಕ ಮತ್ತು ಉದ್ಯೋಗದ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿ 2012ರಲ್ಲಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿತ್ತು. ವರದಿ ಸಲ್ಲಿಕೆಯಾಗಿ 10 ವರ್ಷಗಳೇ ಕಳೆದರು ಯಾವುದೇ ಸರ್ಕಾರ ವರದಿಯನ್ನು ಅಂಗೀಕರಿಸಿ, ಕೇಂದ್ರಕ್ಕೆ ಕಳುಹಿಸಿರುವುದಿಲ್ಲ ಎಂದು ಆರೋಪಿಸಿದರು.
ಸರ್ಕಾರ ಪರಿಶಿಷ್ಟ ಜಾತಿ, ಪಂಗಡಗಳ ಭೂ ಪರಭಾರೆ ನಿಷೇದ ಕಾಯ್ದೆಗೆ ಆನ್ವಯವಾಗುವಂತೆ ತಿದ್ದುಪಡಿ ಮಾಡಬೇಕು, ಪರಿಶಿಷ್ಟ ಜಾತಿ, ವರ್ಗಗಳ ಅಭಿವೃದ್ಧಿಗಾಗಿ ಎಸ್ಸಿಪಿ/ಟಿಎಸ್ಪಿ ಯೋಜನೆಯಡಿಯಲ್ಲಿ ಮೀಸಲಿಟ್ಟ ಹಣವನ್ನು ವಾಪಸ್ ಪಡೆಯಲು ಸರ್ಕಾರ ರಚಿಸಿರುವ 7(ಡಿ)ಕಾಯ್ದೆಯನ್ನು ರದ್ದುಪಡಿಸಬೇಕು, ಪರಿಶಿಷ್ಟ ಜಾತಿಗಳ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸೌಲಭ್ಯ ಪಡೆಯುತ್ತಿರುವವರನ್ನು ಶಿಕ್ಷೆಗೆ ಗುರಿಪಡಿಸಬೇಕು, ಸುಳ್ಳು ಪ್ರಮಾಣ ಪತ್ರ ನೀಡುವ ಅಧಿಕಾರಿಗಳ ವಿರುದ್ಧ ದೌರ್ಜನ್ಯ ತಡೆ ಕೇಸು ದಾಖಲಿಸಿ, ಶಿಕ್ಷೆಗೆ ಗುರಿಪಡಿಸಬೇಕು, ರಾಜ್ಯ ಸರ್ಕಾರಿ ನೌಕರರ ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು, ಬಗರ್ ಹುಕುಂಸಾಗುವಳಿದಾರರಿಗೆ ಸಾಗುವಳಿ ಚೀಟಿ ನೀಡಬೇಕು, ಸರ್ಕಾರಿ ಭೂಮಿಯಲ್ಲಿ ಮನೆಗಳನ್ನು ಕಟ್ಟಿಕೊಂಡಿರುವ ಬಡವರಿಗೆ ಹಕ್ಕುಪತ್ರ ನೀಡಬೇಕು, ನಿವೇಶನ ರಹಿತ ಬಡವರಿಗೆ ವಾಸಕ್ಕೆ ಯೋಗ್ಯವಾದ ಭೂಮಿಯನ್ನು ಖರೀದಿಸಿ ನಿವೇಶನ ಹಕ್ಕುಪತ್ರ ನೀಡಬೇಕು, ವಸತಿ ಯೋಜನೆಯಡಿ ನೀಡುವ ಸಹಾಯಧನ ರೂ.5 ಲಕ್ಷ ನೀಡಬೇಕು, ಪರಿಶಿಷ್ಟ ಜಾತಿ ಬೇಡ, ಜಂಗಮ ಸಮುದಾಯದ ಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ವಸತಿ ಶಾಲೆ ಪ್ರಾರಂಭಿಸಬೇಕೆಂದು ಒತ್ತಾಯಿಸಿದರು.
ರಘು ಜಿಲ್ಲಾ ಸಂಘಟನಾ ಸಂಚಾಲಕರಾದ ಎಂ. ಮನೋಜ್, ರಘು ಜಿಲ್ಲಾ ದಲಿತ ಮಹಿಳಾ ಒಕ್ಕೂಟದ ಸಂಚಾಲಕಿ ಪವಿತ್ರ ಶಿವಕುಮಾರ್, ಸಂಘಟನಾ ಸಂಚಾಲಕಿ ಪದ್ಮಾವತಿ, ಖಜಾಂಚಿ ಭಾಗ್ಯವತಿ, ವಿರಾಜಪೇಟೆ ತಾಲೂಕು ಸಂಚಾಲಕಿ ರೇಖಾ ಹಾಗೂ ಪ್ರಮುಖರಾದ ಮಂಜುಳಾ, ಬೋಜ, ಕುಳಿಯ, ರವಿ, ಶಿವಕುಮಾರ್, ಅನಂತಕುಮಾರ್ ಮತ್ತಿತರ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಬೇಡಿಕೆಯ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಡೇಗೌಡ ಅವರ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು.















