ಕುಶಾಲನಗರ ಜ.21 : 12ನೇ ಶತಮಾನದ ವಚನಕಾರರಲ್ಲಿ ಶಿವಶರಣ ಅಂಬಿಗರ ಚೌಡಯ್ಯ ವಿಭಿನ್ನರೀತಿಯ ವಚನ ಸಾಹಿತ್ಯಕ್ಕೆ ಹೆಗ್ಗಳಿಕೆ ಪಡೆದ ಮಹಾನ್ ಸಂತ. ಇತರೆ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿ ನಿರ್ದೇಶಕ ಎಂ.ಎನ್ ವೆಂಕಟನಾಯಕ್ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕುಶಾಲನಗರ ತಾಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಶಿವಶರಣ ಅಂಬಿಗರ ಚೌಡಯ್ಯರ ಜನ್ಮ ದಿನಾಚರಣೆಯಲ್ಲಿ ಸಂಕ್ಷಿಪ್ತ ಜೀವನ ಚರಿತ್ರೆಯನ್ನು ಸಭೆಗೆ ತಿಳಿಸಿದರು.
ಬಸವಣ್ಣನವರ ಅನುಭವ ಮಂಟಪದಲ್ಲಿ ಸಮಾನ ಭೂಮಿಕೆಯಲ್ಲಿ ಸ್ಥಾನ ಪಡೆದು ಕಾಯಕವೇ ಕೈಲಾಸ ಎಂಬ ತತ್ತ್ವದಡಿ ನಡೆದು ಬಂದ ವ್ಯಕ್ತಿ ಹಾಗೂ ಆಚಾರ-ವಿಚಾರಗಳಲ್ಲಿ ದ್ವಂದ್ವ ಬದುಕನ್ನು ಸಾಗಿಸುವವರ ವಿರುದ್ಧ ಧ್ವನಿ ಎತ್ತಿದ ಮಹಾನ್ ಚೇತನ ಎಂದರು. ಅಂಬಿಗರ ಚೌಡಯ್ಯ ಭಾವಸಾಗರವನ್ನು ದಾಟಿಸುವ ಅಂಬಿಗ ಎಂಬ ಹೆಗ್ಗಳಿಕೆ ಪಡೆದ ಮಹಾನ್ ವ್ಯಕ್ತಿ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಢಿಸಿಕೊಂಡು ಬದುಕು ಹಸನಾಗಿಸಿಕೊಳ್ಳಬೇಕಿದೆ ಎಂದು ವೆಂಕಟನಾಯಕ್ ಹೇಳಿದರು.
ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪುಷ್ಪಗಳನ್ನು ಸಲ್ಲಿಸಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, 12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಇಡೀ ಸಮಾಜದ ವ್ಯವಸ್ಥೆ ಹಾಗೂ ಅನಿಷ್ಟ ಪದ್ಧತಿಗಳನ್ನು ತೊಡೆದು ಹಾಕಲು ಕಂಕಣತೊಟ್ಟ ಅದೆಷ್ಟೋ ಮಹನೀಯರು ತಮ್ಮಜೀವನವನ್ನು ಧಾರೆ ಎರೆದಿದ್ದಾರೆ. ಸಾಮಾನ್ಯರಿಗೂ ಅರ್ಥವಾಗುವ ರೀತಿಯಲ್ಲಿ ಸರಳವಾದ ವಚನಗಳ ಹಾಗೂ ಆಡು ಭಾವಗಳ ಮೂಲಕ ಸಮಾಜದ ಏಳಿಗೆಗಾಗಿ ಶ್ರಮಿಸಿದವರಲ್ಲಿ ಅಂಬಿಗರ ಚೌಡಯ್ಯ ಸಹ ಒಬ್ಬರು. ಇವರು ತಮ್ಮಕಾಯಕದ ಮೂಲಕ ಸಮಾಜವನ್ನು ತಿದ್ದಲು ಪ್ರಯತ್ನಿಸಿದಂತಹ ಮಹಾಪುರಷ ಎಂದು ಬಣ್ಣಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯಕ್ರಮ ಸಂಯೋಜಕ ಮಣಜೂರು ಮಂಜುನಾಥ್ ಮಾತನಾಡಿ, ಅಂಬಿಗರ ಚೌಡಯ್ಯರವರು ತಾನು ಕೇವಲ ತುಂಬಿದ ಹೊಳೆಯಲ್ಲಿ ದೋಣಿಗೆ ಹುಟ್ಟುಹಾಕುವ ಅಂಬಿಗ ಮಾತ್ರವಲ್ಲ, ಭವಸಾಗರದಲ್ಲೂ ಹುಟ್ಟು ಹಾಕುವ ಕೌಶಲ್ಯವುಳ್ಳವ ಎಂದು ಹೇಳಿಕೊಳ್ಳುವುದರಲ್ಲಿ ತನ್ನ ಅನುಭಾವ ದೃಷ್ಟಿಯನ್ನು ಪ್ರಕಟಿಸಿದ್ದಾರೆ ಎಂದರು.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ಕನ್ನಡ ಸಂಘದ ಉಸ್ತುವಾರಿ ಶಿಕ್ಷಕ ಕೆ.ಗೋಪಾಲಕೃಷ್ಣ, ಶಿಕ್ಷಕರಾದ ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಕೆ.ಬಿ.ನಯನ ಇದ್ದರು.









