ಮಡಿಕೇರಿ ಫೆ.9 : ದಕ್ಷಿಣ ಕೊಡಗಿನ ಕಿರುಗೂರು ಗ್ರಾ.ಪಂ ವ್ಯಾಪ್ತಿಯ ಹೊಳೆಕೆರೆ ಭಾಗದ ಹೊಳೆಗೆ ಸೇತುವೆ ಮತ್ತು ತಡೆಗೋಡೆ ನಿರ್ಮಾಣಕ್ಕೆ 3.65 ಕೋಟಿ ರೂ. ಮಂಜೂರಾಗಿದೆ ಎಂದು ಗ್ರಾ.ಪಂ ಸದಸ್ಯ ಚೆಪ್ಪುಡಿರ ರಾಕೇಶ್ ದೇವಯ್ಯ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಳೆಯ ಸೇತುವೆ ಕುಸಿದು ಸಂಚಾರಕ್ಕೆ ಅಡಚಣೆಯಾಗಿದೆ ಎಂದು ಕೆಲವರು ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು. ಆದರೆ ನೂತನ ಸೇತುವೆ ನಿರ್ಮಾಣಕ್ಕೆ ಈಗಾಗಲೇ ಯೋಜನೆ ತಯಾರಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚಿಸಲಾಗಿದೆ. ಶಾಸಕ ಕೆ.ಜಿ.ಬೋಪಯ್ಯ ಅವರು ಸೇತುವೆ ಮತ್ತು ತಡೆಗೋಡೆ ಕಾಮಗಾರಿಯ ವರದಿಯನ್ನು ಮುಖ್ಯಮಂತ್ರಿಗಳ ಕಚೇರಿಗೆ ತಲುಪಿಸಿದ್ದು, ಅನುಮೋದನೆ ದೊರೆತು ಹಣ ಮಂಜೂರಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಗ್ರಾಮಸ್ಥರ ಸಮಸ್ಯೆಗಳಿಗೆ ಗ್ರಾ.ಪಂ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದ್ದು, ಹಳೆಯ ಸೇತುವೆ ಕುಸಿದಿರುವ ಬಗ್ಗೆ ನಮಗೂ ಬೇಸರವಿದೆ. ಹೊಳೆಯಿಂದ ನಿಯಮ ಬಾಹಿರವಾಗಿ ಮರಳು ತೆಗೆದಿರುವುದೇ ಸೇತುವೆ ಕುಸಿಯಲು ಕಾರಣ ಎಂದು ಆರೋಪಿಸಿರುವ ರಾಕೇಶ್ ದೇವಯ್ಯ, ಯಾರೂ ಸೇತುವೆ ವಿಚಾರದಲ್ಲಿ ಗೊಂದಲ ಸೃಷ್ಟಿಸಬಾರದು, ಅಲ್ಲದೆ ಇಲ್ಲಿರುವುದು ಪೈಸಾರಿ ಜಾಗ ಅಲ್ಲ ಎನ್ನುವುದನ್ನು ಮನವರಿಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಈ ಭಾಗದಲ್ಲಿ ನೂತನ ರಸ್ತೆ ನಿರ್ಮಾಣ ಮಾಡಲು ಶಾಸಕರ ನಿಧಿಯಲ್ಲಿ 20 ಲಕ್ಷ ರೂ. ಲಭ್ಯವಿತ್ತು. ಆದರೆ ಕೆಲವರು ಕಾಮಗಾರಿಗೆ ಅಸಹಕಾರ ನೀಡಿದ್ದರು. ವಿಪರ್ಯಾಸವೆಂದರೆ ಸಹಕಾರ ನೀಡದೆ ಇದ್ದವರು ಪ್ರತಿಭಟನೆ ನಡೆಸಿದ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ರಾಕೇಶ್ ದೇವಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.







