ಮಡಿಕೇರಿ ಮಾ.16 : ದೇಶ ಮತ್ತು ಸಮಾಜದ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಪಕ್ಷದ ವಕ್ತಾರರು ಹಾಗೂ ವಿಧಾನಪರಿಷತ್ ಸದಸ್ಯರಾದ ತೇಜಸ್ವಿನಿ ರಮೇಶ್ ಅಭಿಪ್ರಾಯಪಟ್ಟಿದ್ದಾರೆ.
ಕುಶಾಲನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಎಸ್ ಸಿ ಮೋರ್ಚಾ ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಸ್ ಸಿ ಸಮುದಾಯವನ್ನು ಮುಖ್ಯ ವಾಹಿನಿಗೆ ತರಲು ಹಲವು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತಂದಿದೆ ಎಂದರು. ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನೇ ತರುವ ನಿಟ್ಟಿನಲ್ಲಿ ಎಲ್ಲರ ಬೆಂಬಲ ಅಗತ್ಯ ಎಂದರು.
ಈ ಸಂದರ್ಭ ಮಾತನಾಡಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಕೆ.ಜಿ.ಬೋಪಯ್ಯ ಕಾಂಗ್ರೆಸ್ ಸರ್ಕಾರದ ಸಂದರ್ಭ ಎಸ್ಸಿ ಸಮುದಾಯವನ್ನು ಭಯದ ವಾತಾವರಣದಲ್ಲಿ ಇರಿಸುವ ಮೂಲಕ ಕೇವಲ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದರು ಎಂದು ಹೇಳಿದರು.
ಬಿಜೆಪಿ ಸರಕಾರ ಬಂದ ನಂತರ ಡಾ. ಅಂಬೇಡ್ಕರ್ ಅವರಿಗೆ ಹೆಚ್ಚಿನ ಗೌರವ ಸಂದಿದೆ ಎಂದರು.
ಬಿಜೆಪಿ ಯಾವುದೇ ವರ್ಗಕ್ಕೆ ಸೀಮಿತ ಪಕ್ಷ ಅಲ್ಲ ಎಂದ ಕೆ.ಜಿ ಬೋಪಯ್ಯ, ಪ್ರತಿಯೊಂದು ಸಮುದಾಯಕ್ಕೂ ಸ್ಪಂದಿಸುವ ಮೂಲಕ ಆಡಳಿತ ನಡೆಸುತ್ತಿದೆ ಎಂದರು. ಮುಂದಿನ ಚುನಾವಣೆ ಸವಾಲಿನ ಚುನಾವಣೆಯಾಗಿದ್ದು ಅತ್ಯಂತ ಮಹತ್ವದ್ದಾಗಿದೆ ಎಂದರು.
ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕರಾದ ಎಂ ಪಿ ಅಪ್ಪಚುರಂಜನ್ ಮಾತನಾಡಿ ಬಿಜೆಪಿ ಸರಕಾರ ಬಂದ ನಂತರ ದಲಿತರಿಗೆ ಕೊಡಗು ಜಿಲ್ಲೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ಅವಕಾಶ ಲಭಿಸಿದೆ. ಕೆಲವೆಡೆ ವಿಶೇಷವಾಗಿ ಪರಿಶಿಷ್ಟ ಜಾತಿ ಪಂಗಡದ ವಿದ್ಯಾರ್ಥಿಗಳಿಗೆ ಶಿಕ್ಷಣ ಕಲ್ಪಿಸುವ ನಿಟ್ಟಿನಲ್ಲಿ ಶಾಲೆಗಳನ್ನು ತೆರೆಯಲಾಗಿದೆ. ಜಿಲ್ಲೆಯಲ್ಲಿ 600 ಕೋಟಿಗೂ ಮಿಕ್ಕಿ ಹಣವನ್ನು ಎಸ್ಸಿ ಸಮುದಾಯ ಜನಾಂಗಕ್ಕೆ ಬಳಕೆ ಮಾಡುವ ಯೋಜನೆ ರೂಪುಗೊಂಡಿದೆ ಎಂದರು.
ಅಕ್ರಮ ಸಕ್ರಮದಲ್ಲಿ ಜಿಲ್ಲೆಯಲ್ಲಿ ಹನ್ನೆರಡು ಸಾವಿರ ಜನರಿಗೆ ಹಕ್ಕುಪತ್ರ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಾಜಿ ವಿಧಾನ ಪರಿಷತ್ ಸದಸ್ಯ ಎಸ್ ಜಿ ಮೇದಪ್ಪ, ಬಿ ಬಿ ಭಾರತೀಶ್, ಮನು ಕುಮಾರ್ ರೈ, ಕುಶಾಲನಗರ ಪುರಸಭೆ ಅಧ್ಯಕ್ಷರಾದ ಜಯವರ್ಧನ್, ಸೋಮವಾರಪೇಟೆ ಪುರಸಭೆ ಅಧ್ಯಕ್ಷರಾದ ಚಂದ್ರು ಜಿಲ್ಲಾ ಎಸ್ ಸಿ ಮೋರ್ಚಾದ ಅಧ್ಯಕ್ಷರಾದ ಎಸ್ ಎ ಪ್ರತಾಪ್, ಪ್ರಮುಖರಾದ ಪರಮಾನಂದ, ದಿವಾಕರ್, ಮಂಜುಳಾ, ಜಿಲ್ಲಾ ತಾಲೂಕು ಮತ್ತು ವಿವಿಧ ಹಂತಗಳ ಪದಾಧಿಕಾರಿಗಳ, ಪ್ರಮುಖರು ಇದ್ದರು.
ಎಸ್ ಸಿ ಮೋರ್ಚಾದ ಜಿಲ್ಲಾ ಅಧ್ಯಕ್ಷ ಎಸ್ ಎ ಪ್ರತಾಪ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಮಾರಂಭಕ್ಕೆ ಮೊದಲು ಕುಶಾಲನಗರ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮುಖ್ಯ ರಸ್ತೆಯಲ್ಲಿ ಕಾರ್ಯಕರ್ತರು ಕಾರ್ಯಕ್ರಮ ನಡೆಯುವ ಸಭಾಂಗಣ ತನಕ ಬೃಹತ್ ಮೆರವಣಿಗೆ ತೆರಳಿದರು.










