ಮಡಿಕೇರಿ ಮಾ.20 : ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ರಾಜ್ಯ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರು ಸೋಮವಾರ ನಗರದ ಹಿಲ್ ರಸ್ತೆಯಲ್ಲಿ ಇರುವ ನಗರಸಭಾ ಹಿರಿಯ ಪ್ರಾಥಮಿಕ ಶಾಲೆ, ಮಹದೇವಪೇಟೆಯ ನಗರಸಭಾ ಹಿರಿಯ ಪ್ರಾಥಮಿಕ ಶಾಲೆ, ಸಂತ ಜೋಸೆಫರ ಕಾಲೇಜು ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ವೀಕ್ಷಿಸಿದರು.
ರ್ಯಾಂಪ್ ವ್ಯವಸ್ಥೆ ಮಾಡಬೇಕು. ಜೊತೆಗೆ ರೈಲಿಂಗ್ಸ್ ಇರಬೇಕು. ಗಾಲಿ ಕುರ್ಚಿ ವ್ಯವಸ್ಥೆ ಮಾಡಬೇಕು. ಒಂದು ಮತಗಟ್ಟೆಯಲ್ಲಿ 80 ವರ್ಷ ಮೇಲ್ಪಟ್ಟವರು ಎಷ್ಟು ಮಂದಿ ಇದ್ದಾರೆ ಎಂಬುದನ್ನು ಖಾತರಿ ಪಡಿಸಿಕೊಳ್ಳಬೇಕು ಎಂದು ಪಿ.ಎಸ್.ವಸ್ತ್ರದ್ ಅವರು ಬಿಎಲ್ಒಗಳಿಗೆ ಸೂಚಿಸಿದರು.
ಕಳೆದ ಬಾರಿ ಶೇ.60 ಕ್ಕಿಂತ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಿಗೆ ತೆರಳಿ ಮಾಹಿತಿ ಪಡೆದ ಸ್ವೀಪ್ ನೋಡಲ್ ಅಧಿಕಾರಿ ಅವರು ವೋಟರ್ ಹೆಲ್ಫ್ಲೈನ್ ಆ್ಯಪ್ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಕೆಲವು ಸಂದರ್ಭದಲ್ಲಿ ಮತದಾರರ ಗುರುತಿನ ಚೀಟಿ ಇದ್ದರೂ ಸಹ, ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಮಾಹಿತಿ ನೀಡುವಂತಾಗಬೇಕು ಎಂದರು.
ಮತಗಟ್ಟೆ ಕೇಂದ್ರಗಳಲ್ಲಿ ಕುಡಿಯುವ ನೀರು ವ್ಯವಸ್ಥೆ ಮಾಡಬೇಕು. ಯಾರೂ ಸಹ ಬಿಸಿಲಿಗೆ ಸಾಲಿನಲ್ಲಿ ಸಾಲಾಗಿ ನಿಲ್ಲದೆ, ನೆರಳಿನಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಬೇಕು ಎಂದು ಪಿ.ಎಸ್.ವಸ್ತ್ರದ್ ಅವರು ಹೇಳಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಎಲ್ಲರೂ ಮತದಾನ ಮಾಡುವಂತಾಗಲು ಮನವರಿಕೆ ಮಾಡಬೇಕು. ಎಷ್ಟೇ ಕೆಲಸದ ಒತ್ತಡ ಇದ್ದರೂ ಸಹ ಪ್ರಜಾಪ್ರಭುತ್ವ ಬಲಪಡಿಸಲು ಅರ್ಹರೆಲ್ಲರೂ ಮತದಾನ ಮಾಡಬೇಕು. ಆ ನಿಟ್ಟಿನಲ್ಲಿ ಮತ್ತಷ್ಟು ಜಾಗೃತಿ ಮೂಡಿಸುವಂತೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಅವರು ಸಲಹೆ ಮಾಡಿದರು.
ನಗರದ ಹಿಲ್ ರಸ್ತೆಯಲ್ಲಿರುವ ನಗರಸಭೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನದ ಜಾಗೃತಿ ಕುರಿತು ಚಿತ್ರಿಸಲಾಗಿರುವ ಕಲಾಚಿತ್ರವನ್ನು ಗಮನಿಸಿ ಪಿ.ಎಸ್.ವಸ್ತ್ರದ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
‘ನನ್ನ ದೇಶ ನನ್ನ ಹಕ್ಕು, ಬಳಸಿ ಬಳಸಿ, ವೋಟರ್ ಹೆಲ್ಫ್ಲೈನ್ ಆ್ಯಪ್ ಬಳಸಿ, ಬನ್ನಿ ಆಚರಿಸೋಣ ಪ್ರಜಾಪ್ರಭುತ್ವ ಹಬ್ಬ, ನಿಮ್ಮ ಮತ ದೇಶಕ್ಕೆ ಹಿತ, ಹೀಗೆ ಹಲವು ಸಂದೇಶಗಳನ್ನು ಒಳಗೊಂಡ ಚಿತ್ರಕಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಬಳಿಕ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರು ಮತದಾನ ಹೆಚ್ಚಳಕ್ಕೆ ಪ್ರತಿಯೊಬ್ಬರೂ ಜಾಗೃತಿ ಮೂಡಿಸುವಂತಾಗಬೇಕು. ಸ್ವೀಪ್ ಚಟುವಟಿಕೆಗಳನ್ನು ಉತ್ತಮವಾಗಿ ಇದುವರೆಗೆ ಕೈಗೊಳ್ಳಲಾಗಿದೆ. ಚುನಾವಣೆ ಹತ್ತಿರ ಬರುತ್ತಿದ್ದು, ಸ್ವೀಪ್ ಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚಿಸುವಂತೆ ರಾಜ್ಯ ನೋಡಲ್ ಅಧಿಕಾರಿ ಅವರು ಸಲಹೆ ಮಾಡಿದರು.
ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ಕಡಿಮೆ ಮತದಾನವಾಗಿರುವ ಮತಗಟ್ಟೆ ಕೇಂದ್ರಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಮತಗಟ್ಟೆ ಕೇಂದ್ರಗಳಲ್ಲಿನ ಶೌಚಾಲಯ ಸ್ವಚ್ಛವಾಗಿರಬೇಕು ಎಂದರು.
ಮತದಾನದ ಮಹತ್ವ ಸಾರುವ ನಿಟ್ಟಿನಲ್ಲಿ ಹಾಲಿನ ಪ್ಯಾಕೇಟ್, ಎಲ್ಪಿಜಿ, ಬಸ್ ಟಿಕೆಟ್ ಹಾಗೂ ಇತರೆ ಕಡೆಗಳಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಬಹುದಾಗಿದೆ ಎಂದು ಅವರು ಸಲಹೆ ಮಾಡಿದರು.
ಸ್ವೀಪ್ ಸಮಿತಿ ಜಿಲ್ಲಾ ಅಧ್ಯಕ್ಷರು ಹಾಗೂ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಮಾಹಿತಿ ನೀಡಿ ಅಕ್ಟೋಬರ್ ತಿಂಗಳಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ, ನವೆಂಬರ್ ತಿಂಗಳಲ್ಲಿ ವಾಕ್ಥಾನ್, ಹಾಡಿಗಳಿಗೆ ಭೇಟಿ, ಡಿಸೆಂಬರ್ ತಿಂಗಳಲ್ಲಿ ರಾಜ್ಯ ಚುನಾವಣಾಧಿಕಾರಿಯ ಭೇಟಿ, ಕಾಫಿ ಮೇಳ ಮತ್ತು ಉದ್ಯೋಗ ಮೇಳ ಸಂದರ್ಭದಲ್ಲಿ ವಿದ್ಯುನ್ಮಾನ ಮತಯಂತ್ರ, ವಿವಿ ಪ್ಯಾಟ್ ಮಹತ್ವ ಸಾರುವ ಫಲಪುಷ್ಪ ಪ್ರದರ್ಶನ, ರಾಷ್ಟ್ರೀಯ ಮತದಾರರ ದಿನದಂದು ಮತದಾನದ ಮಹತ್ವ ಕುರಿತು ಜಾಗೃತಿ ಹೀಗೆ ಹಲವು ಕಾರ್ಯಕ್ರಮಗಳನ್ನು ಸ್ವೀಪ್ ಸಮಿತಿ ವತಿಯಿಂದ ಏರ್ಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಸ್ವೀಪ್ ಸಮಿತಿಯ ರಾಜ್ಗೋಪಾಲ್, ನಗರಸಭೆ ಪೌರಾಯುಕ್ತರಾದ ವಿಜಯ್, ತಹಶೀಲ್ದಾರ್ ಕಿರಣ್, ಬಿಎಲ್ಒಗಳು, ಹಾಗೆಯೇ ಸಭಾ ಕಾರ್ಯಕ್ರಮ ಸಂದರ್ಭದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬಾನಾ ಎಂ.ಷೇಕ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ತಾ.ಪಂ.ಇಒಗಳ ಅಪ್ಪಣ್ಣ, ಜಯಣ್ಣ, ವಿಕಲಚೇತನರ ಅಧಿಕಾರಿ ವಿಮಲ, ಸದಾಶಿವ ಪಲ್ಲೇದ್, ನವೀನ್ ಇತರರು ಇದ್ದರು.





