ಮಡಿಕೇರಿ ಮಾ.29 : ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದು ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹ ಗೊಳಿಸಿರುವುದನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಅವರ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪ್ರಮುಖರು ಹಾಗೂ ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಪಿ.ಸಿ.ಹಸೈನಾರ್ ಹಾಜಿ ಬಿಜೆಪಿ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಸಮುದಾಯಕ್ಕೆ ಮೀಸಲಾತಿ ವಿಚಾರದಲ್ಲಿ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.
ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ಒಕ್ಕಲಿಗ ಮತ್ತು ಲಿಂಗಯತ ಸಮುದಾಯಕ್ಕೆ ಶೇ.10 ಮಿಸಲಾತಿಯನ್ನು ನೀಡಿ ಮುಸಲ್ಮಾನರಿಗೆ ಶೇ.5ಕ್ಕೆ ಏರಿಸಬೇಕಿತ್ತು. ಆದರೆ ಇತರ ಸಮುದಾಯದ ಓಲೈಕೆಗಾಗಿ ಮುಸಲ್ಮಾನರ 2ಬಿ ಅಡಿಯಲ್ಲಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದು ಮಾಡಿ ಜನರಲ್ಲಿ ಗೊಂದಲ ಮೂಡಿಸಿರುವುದು ಸರಿಯಾದ ಕ್ರಮವಲ್ಲ ಎಂದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವುದನ್ನು ತೀವ್ರವಾಗಿ ಖಂಡಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಸರ್ಕಾರಕ್ಕೆ ಮೀಸಲಾತಿಯನ್ನು ರದ್ದು ಮಾಡಲು ಅಧಿಕಾರವಿಲ್ಲ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ರಚನೆ ಮಾಡಲಾಗಿದೆ. ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಜಾತಿ ಜನಗಣತಿಯ ಆಧಾರದ ಮೇಲೆ ಮೀಸಲಾತಿಯನ್ನು ನೀಡಬೇಕೆಂದು ಸರ್ವೆ ಕಾರ್ಯ ನಡೆಸಲಾಗಿತ್ತು. ಆದರೆ ವರದಿ ಸಲ್ಲಿಕೆಯಾಗಿರಲಿಲ್ಲ. ರಾಜ್ಯ ಬಿಜೆಪಿ ಸರ್ಕಾರದ ಅವೈಜ್ಞಾನಿಕ ಕ್ರಮದಿಂದಾಗಿ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಮುಸಲ್ಮಾನರಿಗಾಗಿ ಇದ್ದ ಮೀಸಲಾತಿಯನ್ನು ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಕೆಪಿಸಿಸಿ ವಕ್ತಾರ ಟಿ.ಎಂ.ಶಾಹೀದ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಎಸ್.ಸಿ.ಘಟಕದ ಅಧ್ಯಕ್ಷ ಜಯೇಂದ್ರ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ, ಮುಖಂಡ ಪಿ.ಎಂ.ಖಾಸಿಂ, ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅಬ್ದುಲ್ ರಹಮಾನ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ, ಮಡಿಕೇರಿ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎಂ.ಯಾಕುಬ್, ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್, ನಗರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್, ನಗರಸಭಾ ಮಾಜಿ ಅಧ್ಯಕ್ಷರಾದ ಜುಲೈಕಾಬಿ, ಪ್ರಮುಖರಾದ ಲಿಯಾಕತ್ ಆಲಿ, ಸುಹೇಲ್, ಆಶಿಪ್, ಫಾರೂಖ್, ರವುಫ್, ಅಜೀಜ್, ಸಲೀಂ, ಫಯಾಜ್, ಕೌಸರ್, ಪ್ರಕಾಶ್ ಆಚಾರ್ಯ, ಜಗದೀಶ್, ಖಲೀಲ್ ಭಾಷ, ರಿಯಾಜ್, ಸೌಕತ್ತಾಲಿ, ಹಸೈನ್, ಇಬ್ರಾಹಿಂ, ಜಫ್ರುಲ್ಲಾ, ಎಂ.ಎಂ.ಇಬ್ರಾಹಿಂ, ದಿವ್ಯ, ಮುಮ್ತಾಜ್ ಬೇಗಂ, ಮುನೀರ್ ಮಾಚಾರ್, ಹಫೀದ್, ಕುರೈಶಿ, ಶಾಫಿ ಕೊಟ್ಟಮುಡಿ ಹಾಗೂ ಪದಾಧಿಕಾರಿಗಳಾದ ರಶೀದ್, ಮೈದು, ಮಿನಾಜ್ ಪ್ರವೀಣ್, ಯಶ್ ದೋಲ್ಪಾಡಿ, ಅಶ್ರಫ್, ಹಬೀದ್ ಹಾಗೂ ಕಾರ್ಯಕರ್ತರು, ಎಸ್ಸಿ ಘಟಕದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.









