ಸೋಮವಾರಪೇಟೆ ಏ.22 : ಸುಮಾರು 960 ವರ್ಷಗಳ ಇತಿಹಾಸವಿರುವ ಸುಗ್ಗಿಕಟ್ಟೆಯಲ್ಲಿ ಯಡೂರು ಗ್ರಾಮದ ವಾರ್ಷಿಕ ಶ್ರೀ ಸಬ್ಬಮ್ಮ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು.
ಗ್ರಾಮೀಣ ಸಂಸ್ಕøತಿಯನ್ನು ಬಿಂಬಿಸುವ ಸಾಂಪ್ರದಾಯಿಕ ಪೂಜಾ ಕಾರ್ಯಗಳು ನಡೆದವು. ಶುಕ್ರವಾರ ರಾತ್ರಿ ಸುಗ್ಗಿಕಟ್ಟೆಯಲ್ಲಿ ದೇವಿಗೆ ಎಡೆ ಇಟ್ಟ ಗ್ರಾಮಸ್ಥರು ಊರಿನ ಸಮೃದ್ಧಿಗಾಗಿ ಸಾಮೂಹಿಕ ಪೂಜೆ ಸಲ್ಲಿಸಿದರು. ಉತ್ತಮ ಮಳೆಯಾಗಿ ಬರಗಾಲದ ಆತಂಕದಿಂದ ಕೃಷಿಕರನ್ನು ಮುಕ್ತಗೊಳಿಸುವಂತೆ ದೇವಿಯಲ್ಲಿ ಪ್ರಾರ್ಥಿಸಿದರು.
ನಂತರ ಪಟಾಕಿ ಸಿಡಿಸುತ್ತ, ವಾದ್ಯಗೋಷ್ಠಿಯಲ್ಲಿ ಗ್ರಾಮಸ್ಥರು ಸುಗ್ಗಿಕಟ್ಟೆ ಪ್ರದಕ್ಷಿಣೆ ಹಾಕಿದರು. ಎಡೆಯ ಸಾಮೂಹಿಕ ಭೋಜನ ನೆರವೇರಿತು.
ಶನಿವಾರ ಬೆಳಿಗ್ಗೆ ಗ್ರಾಮದ ದೇವರಬಾವಿಯಲ್ಲಿ ಬಸವಣ್ಣ ದೇವರ ಗಂಗಾಸ್ನಾನ ನಡೆಯಿತು. ನಂತರ ಬಸವಣ್ಣ ದೇವರನ್ನು ಅಡ್ಡಪಲ್ಲಕ್ಕಿಯಲ್ಲಿ ಕುಳ್ಳಿರಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಪ್ರತಿ ಮನೆಯವರು ಈಡುಗಾಯಿಯೊಂದಿಗೆ ಪೂಜೆ ಸಲ್ಲಿಸಿದರು. ಸುಗ್ಗಿಕಟ್ಟೆಯಲ್ಲಿ ಗ್ರಾಮಸ್ಥರ ಸಾಮೂಹಿಕ ಕುಣಿತದೊಂದಿಗೆ, ದೇವತಕ್ಕರ ಮೆರವಣಿ ನಡೆಯಿತು.
ಈ ಸಂದರ್ಭ ವೈ.ಡಿ.ನಾಗೇಶ್, ಎ.ವಿ.ಕಾರ್ತಿಕ್, ಎ.ಟಿ.ನಾಗರಾಜು, ದಯಾನಂದ, ಜಯರಾಮ್, ಚಂದ್ರ, ಧನುಂಜಯ ದೇವರ ಒಡೆಕಾರರಾಗಿ ಕರ್ತವ್ಯ ನಿರ್ವಹಿಸಿದರು. ಯಡೂರು ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ವಿಜುಕುಮಾರ್, ಕಾರ್ಯದರ್ಶಿ ಹೇಮಂತ್ ಕಾರ್ಯನಿರ್ವಹಿಸಿದರು.
ಭಾನುವಾರ ಮಲ್ಲಸುಗ್ಗಿ, ಸೋಮವಾರ ಹಗಲು ಸುಗ್ಗಿ, ಮಂಗಳವಾರ ಮಾರಿ ಕಳುಹಿಸುವ ಕಾರ್ಯದೊಂದಿಗೆ ಸುಗ್ಗಿ ಉತ್ಸವ ಮುಕ್ತಾಯಗೊಳ್ಳಲಿದೆ.









