ಮಡಿಕೇರಿ ಮೇ 16 : ಕಾಂಗ್ರೆಸ್ ಪಕ್ಷದ ಇಬ್ಬರು ಅಭ್ಯರ್ಥಿಗಳ ಗೆಲುವಿನಲ್ಲಿ ಜಿಲ್ಲೆಯ ಮಹಿಳಾ ಮತದಾರರ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಮಹಿಳೆಯರು ಕಾಂಗ್ರೆಸ್ ಗೆ ಉತ್ತಮ ಸ್ಪಂದನೆ ನೀಡಿದ್ದಾರೆ ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತರ ಶ್ರಮ ಮತ್ತು ಎಐಸಿಸಿಯಿಂದ ಆಗಮಿಸಿದ್ದ ಮಹಿಳಾ ವೀಕ್ಷಕರ ಮಾರ್ಗದರ್ಶನ ಇಬ್ಬರು ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಿದೆ. ಕಾಂಗ್ರೆಸ್ ಪಕ್ಷ ಪ್ರತಿ ಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ ಸೇರಿದಂತೆ ಗ್ಯಾರಂಟಿ ಕಾರ್ಡ್ ಮೂಲಕ ನೀಡಲಾದ ಭರವಸೆಗಳನ್ನು ಈಡೇರಿಸಲಾಗುವುದು ಎಂದರು.
ಇಬ್ಬರು ನೂತನ ಶಾಸಕರು ಕೊಡಗಿನ ಅಭಿವೃದ್ಧಿಗಾಗಿ ಶ್ರಮಿಸಲಿದ್ದಾರೆ. ಮಹಿಳಾ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯಲಿದ್ದು, ಜಿಲ್ಲಾ ಉಸ್ತುವಾರಿಯಾಗಿ ಬರುವುದು ಖಚಿತವೆಂದು ಸುರಯ್ಯ ಅಬ್ರಾರ್ ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದ ಪ್ರಮುಖ ನೆರವಂಡ ಉಮೇಶ್ ಮಾತನಾಡಿ, ಪ್ರತಿಸ್ಪರ್ಧಿಗಳ ಉರುಳಿಲ್ಲದ ಆರೋಪ ಮತ್ತು ಅಪಪ್ರಚಾರಗಳಿಗೆ ಜಿಲ್ಲೆಯ ಜನ ತಕ್ಕ ಉತ್ತರ ನೀಡಿದ್ದಾರೆ ಎಂದರು.
ಕೊಡಗಿನಲ್ಲಿರುವ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪಂಗಡದವರು, ಮಹಿಳೆಯರು ಸೇರಿದಂತೆ ವಿವಿಧ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದವರು ಕೂಡ ಕಾಂಗ್ರೆಸ್ ಅಭ್ಯರ್ಥಿಗಳ ಪರ ದುಡಿದು ಅಭ್ಯರ್ಥಿಗಳ ಗೆಲುವಿಗೆ ಕಾರಣಕರ್ತರಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಎ.ಎಸ್.ಪೊನ್ನಣ್ಣ ಅವರ ಗೆಲುವಿನಲ್ಲಿ ಸಂಕೇತ್ ಪೂವಯ್ಯ ಅವರ ಶ್ರಮ ಅಪಾರವಾಗಿದೆ. ಕಾಂಗ್ರೆಸ್ ಪಕ್ಷ ಬಿಟ್ಟು ಹೋದವರು ತಮ್ಮ ರಾಜಕೀಯ ಭವಿಷ್ಯವನ್ನು ಹಾಳುಮಾಡಿಕೊಂಡರು ಎಂದು ತಿಳಿಸಿದರು.
ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಕೊಟ್ಟಮುಡಿ ಮಾತನಾಡಿ, ಕೊಡಗಿನ ಮತದಾರರು ಉತ್ತಮವಾದ ಅಭ್ಯರ್ಥಿಗಳನ್ನು ಆಯ್ಕೆಮಾಡಿದ್ದು, ಎಲ್ಲಾ ಜನಾಂಗವನ್ನು ಒಗ್ಗೂಡಿಸಿ ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳುತ್ತೇವೆ. ಆ ಮೂಲಕ ಕಾಂಗ್ರೆಸ್ ಭದ್ರಕೋಟೆಯನ್ನು ಉಳಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ನಗರಾಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಬೆಳ್ಯಪ್ಪ ಹಾಗೂ ಡಿಸಿಸಿ ಸದಸ್ಯೆ ಸುಮಿತಾ ಮಾದಪ್ಪ ಉಪಸ್ಥಿತರಿದ್ದರು.











