ಮಡಿಕೇರಿ ಜೂ.21 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ 9ನೇ ಯೋಗ ದಿನಾಚರಣೆಯು ನಗರದ ಗೌಡ ಸಮಾಜದಲ್ಲಿ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೊಡಗು ವೈದ್ಯಕೀಯ ಶಿಕ್ಷಣ, ಜಿಲ್ಲಾ ಪೊಲೀಸ್, ಯುವ ಸಬಲೀಕರಣ ಮತ್ತು ಕ್ರೀಡೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಸಮಾಜ ಕಲ್ಯಾಣ, ಪದವಿ ಪೂರ್ವ ಶಿಕ್ಷಣ, ಎನ್ಎಸ್ಎಸ್ ಮತ್ತು ಎನ್ಸಿಸಿ ಘಟಕ, ನೆಹರು ಯುವ ಕೇಂದ್ರ, ಕೊಡಗು ಯುವ ಒಕ್ಕೂಟ, ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಯೋಗ ಭಾರತಿ, ಪ್ರಣವ ಯೋಗ ಕೇಂದ್ರ, ಪತಂಜಲಿ ಯೋಗ ಶಿಕ್ಷಣ, ಆರ್ಟ್ ಆಪ್ ಲಿವಿಂಗ್, ಸ್ಕೌಟ್ಸ್ ಮತ್ತು ಗೈಡ್ಸ್, ನೀಮಾ ಸಂಸ್ಥೆ ಹೀಗೆ ಸರ್ಕಾರಿ ಮತ್ತು ಸರ್ಕಾರೇತರ ವಿವಿಧ ಸಂಸ್ಥೆಗಳ ಸಹಕಾರದಲ್ಲಿ ವಸುದೈವ ಕುಟುಂಬಕ್ಕಾಗಿ ಯೋಗ ಆ ಹೆಸರಿನಲ್ಲಿ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಆರೋಗ್ಯವೇ ಭಾಗ್ಯವಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಯೋಗ ಸಹಕಾರಿಯಾಗಿದೆ ಎಂದು ಹೇಳಿದರು.
ಯೋಗ ಮತ್ತು ವ್ಯಾಯಾಮ ಮಾಡುವುದರಿಂದ ಪ್ರತಿನಿತ್ಯ ಚಟುವಟಿಕೆಯಿಂದ ಇರಲು ಸಾಧ್ಯ. ಆ ನಿಟ್ಟಿನಲ್ಲಿ ಉತ್ತಮ ಆರೋಗ್ಯಕ್ಕೆ ಯೋಗ ಮತ್ತು ವ್ಯಾಯಾಮ ಮಾಡುವುದು ಅತ್ಯಗತ್ಯ ಎಂದು ತಿಳಿಸಿದರು.
ಯೋಗ ಶಿಕ್ಷಕ ಮಹೇಶ್ ಕುಮಾರ್ ಮಾತನಾಡಿ, ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಕಳೆದ 15 ದಿನಗಳಿಂದ ಯೋಗ ಪೂರ್ವಾಭ್ಯಾಸ ನಡೆಸಿ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಲಾಗಿದೆ ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ ಮಾತನಾಡಿ, ಅಂತರರಾಷ್ಟ್ರೀಯ 9ನೇ ಯೋಗ ದಿನಾಚರಣೆಗೆ ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಸರ್ಕಾರೇತರ ಸಂಸ್ಥೆಯ ಪ್ರತಿನಿಧಿಗಳು ಹೀಗೆ ಎಲ್ಲರೂ ಜಿಲ್ಲಾಡಳಿತದ ಜೊತೆ ಕೈಜೋಡಿಸಿ ಯಶಸ್ಸುಗೊಳಿಸಿದ್ದಾರೆ ಎಂದು ತಿಳಿಸಿದರು.
ಸೂರ್ಯ ನಮಸ್ಕಾರ, ವೃಕ್ಷಾಸನ, ಪಾದಹಸ್ತಾಸನ, ಉದ್ರ್ವಾಸನ, ತಾಡಾಸನ, ಅರ್ಧ ಮತ್ಸೇಂದ್ರಾಸನ, ಭುಜಂಗಾಸನ, ಪವನಮುಕ್ತಾಸನ, ಭದ್ರಾಸನ, ತ್ರಿಕೋನಾಸನ, ಉಷ್ಟ್ರಾಸನ, ವಜ್ರಾಸನ, ಶಲಭಾಸನ, ಶಶಾಂಕಾಸನ, ಮಂಡೂಕಾಸನ, ವಕ್ರಾಸನ, ಮಕರಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಶವಾಸನ, ಕಪಾಲಭಾತಿ, ಶೀತಲಿ ಪ್ರಾಣಾಯಾಮ, ಭ್ರಾಮರಿ ಪ್ರಾಣಾಯಾಮ, ಧ್ಯಾನ, ನಾಡಿಶೋಧ ಪ್ರಾಣಾಯಾಮ ಹೀಗೆ ಹಲವು ರೀತಿಯ ಯೋಗ ಮಾಡಲಾಯಿತು.
ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಯೋಗ ಶಿಕ್ಷಕರಾದ ಮಹೇಶ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಯ್ಯ, ಪೌರಾಯುಕ್ತ ವಿಜಯ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಆರ್ಸಿಎಚ್ ಅಧಿಕಾರಿ ಡಾ.ಗೋಫಿನಾಥ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ವೈದ್ಯರಾದ ಡಾ.ರಾಜಾರಾಂ, ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ರೆಡ್ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.









