ಮಡಿಕೇರಿ ಜೂ.23 : ತಾನು ನೀಡಿದ ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಾಗದೆ ವಿಚಲಿತಗೊಂಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಗೂಬೆ ಕೂರಿಸುವ ಮೂಲಕ ಮುಗ್ಧ ಜನರನ್ನು ವಂಚಿಸುತ್ತಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ ಆರೋಪಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಚುನಾವಣೆ ಸಂದರ್ಭ ನೀಡಿದ ಭರವಸೆಯಂತೆ 10 ಕೆಜಿ ಅಕ್ಕಿಯನ್ನು ವಿತರಿಸಲು ಸಾಧ್ಯವಾಗದ ಕಾಂಗ್ರೆಸ್ ಸರ್ಕಾರ ಕೇಂದ್ರದ ಕಡೆ ಬೆರಳು ತೋರಿಸುತ್ತಿರುವುದು ಹಾಸ್ಯಾಸ್ಪದವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಈ ಹಿಂದಿನಿoದಲೂ 5 ಕೆಜಿ ಅಕ್ಕಿಯನ್ನು ನೀಡುವ ಮೂಲಕ ನುಡಿದಂತೆ ನಡೆದುಕೊಳ್ಳುತ್ತಿದೆ. ಆದರೆ ಸುಳ್ಳು ಗ್ಯಾರಂಟಿಗಳನ್ನು ನೀಡಿರುವ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿ ಹಾಕಲು ಕೇಂದ್ರದ ವಿರುದ್ಧ ಆರೋಪಗಳನ್ನು ಮಾಡುತ್ತಿದೆ. ಇದು ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ತಂತ್ರವಾಗಿದೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಇತರ ರಾಜ್ಯಗಳಲ್ಲಿ ಕೂಡ ಯಾವುದೇ ಮುಂದಾಲೋಚನೆ ಮತ್ತು ಪೂರ್ವ ತಯಾರಿ ಇಲ್ಲದೆ ನೀಡಿದ ಗ್ಯಾರಂಟಿಗಳನ್ನು ಈಡೇರಿಸಲಾಗದೆ ವರ್ಷವೇ ಕಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಕೆಲವು ಗ್ಯಾರಂಟಿಗಳನ್ನು ಮಾತ್ರ ಷರತ್ತುಬದ್ಧವಾಗಿ ಜಾರಿಗೆ ತರುತ್ತಿದೆ. ಆದರೆ ಇವುಗಳೆಲ್ಲವೂ ಚುನಾವಣೆ ನಂತರ ಸ್ಥಗಿತಗೊಳ್ಳುವ ಮೂಲಕ ಜನ ವಂಚನೆಗೊಳಗಾಗುವುದು ಖಚಿತವೆಂದು ಮಹೇಶ್ ಜೈನಿ ಆರೋಪಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಎಲ್ಲರಿಗೂ 10 ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ಘೋಷಿಸಿ ಜನರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ಆದರೆ ಅಧಿಕಾರಕ್ಕೆ ಬಂದ ನಂತರ ಗೋಸುಂಬೆಯoತೆ ಬಣ್ಣ ಬದಲಾಯಿಸುತ್ತಿದೆ ಎಂದು ಟೀಕಿಸಿರುವ ಅವರು, ಬಿಜೆಪಿ ಜನಜಾಗೃತಿಯ ಮೂಲಕ ಕಾಂಗ್ರೆಸ್ ಬಣ್ಣವನ್ನು ಬಯಲು ಮಾಡಲಿದೆ ಎಂದು ತಿಳಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳ ಘೋಷಣೆ ಮೂಲಕ ಅಧಿಕಾರಕ್ಕೆ ಬಂದಿದೆಯೇ ಹೊರತು, ಬಿಜೆಪಿ ಆಡಳಿತದ ವಿರುದ್ಧದ ಜನಾಭಿಪ್ರಾಯದಿಂದಲ್ಲ. ಬಿ.ಎಸ್.ಯಡ್ಡಿಯೂರಪ್ಪ ಹಾಗೂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲಾ ರಂಗದಲ್ಲೂ ಯಶಸ್ವೀ ಆಡಳಿತ ನಡೆಸಿ ರಾಜ್ಯದ ಜನರ ಮನ ಗೆದ್ದಿತ್ತು. ಭಾರತೀಯ ಜನತಾ ಪಕ್ಷ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿತವೆಂದು ಅನೇಕ ಚುನಾವಣಾ ಸಮೀಕ್ಷೆಗಳು ವರದಿ ಮಾಡಿದ ಬೆನ್ನಲ್ಲೆ, ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳನ್ನು ಘೋಷಿಸಿತು. ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ನಿರ್ನಾಮವಾಗಲಿದೆ ಎನ್ನುವ ಆತಂಕದಲ್ಲಿ ಈಡೇರಿಸಲು ಸಾಧ್ಯವಾಗದ ಗ್ಯಾರಂಟಿಗಳನ್ನು ಘೋಷಿಸಿ, ಗೆಲುವಿಗಾಗಿ ವಾಮಮಾರ್ಗವನ್ನು ಅನುಸರಿಸಿ ರಾಜ್ಯದ ಜನತೆಗೆ ಮೋಸ ಮಾಡಿದೆ ಎಂದು ಆರೋಪಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಹಿರಿಯ ನಾಯಕರುಗಳ ನೇತೃತ್ವದಲ್ಲಿ ಜು.4 ರಂದು ಬಿಜೆಪಿ ಹೋರಾಟವನ್ನು ಹಮ್ಮಿಕೊಂಡಿದ್ದು, ಜನತೆ ಎದುರು ಕಾಂಗ್ರೆಸ್ ನ ಬಣ್ಣವನ್ನು ಬಯಲು ಮಾಡಲಿದೆ ಎಂದು ಮಹೇಶ್ ಜೈನಿ ತಿಳಿಸಿದ್ದಾರೆ.










