ಮಡಿಕೇರಿ ಜೂ.29 : ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳು ಮುಂದಿನ ಸಾಲಿನ ಲೋಕಸಭಾ ಚುನಾವಣೆಯವರೆಗೆ ಮಾತ್ರ ಚಾಲ್ತಿಯಲ್ಲಿರಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ನಗರದ ಗೌಡ ಸಮಾಜದ ಸಭಾಂಗಣದಲ್ಲಿ ನಡೆದ ಕೇಂದ್ರ ಸರ್ಕಾರದ ಸಾಧನೆಗಳನ್ನು ತಿಳಿಸುವ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದರು. ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಮಾತ್ರ ಜಾರಿಯಾಗಿದ್ದು, ಅದೂ ಸಮರ್ಪಕವಾಗಿಲ್ಲ. ಇನ್ನು ಪ್ರತಿ ಮನೆಯ ಮಹಿಳೆಯರಿಗೆ 2 ಸಾವಿರ ರೂ., ನಿರುದ್ಯೋಗಿಗಳಿಗೆ 3 ಸಾವಿರ, ಪ್ರತಿ ಮನೆಗೆ 200 ಯೂನಿಟ್ ಗ್ಯಾರಂಟಿಗಳು ಇನ್ನೂ ಜಾರಿಯಾಗಿಲ್ಲ, ಇವೆಲ್ಲ ಗೊಂದಲದ ಗೂಡಾಗಿದೆ ಎಂದು ಟೀಕಿಸಿದರು.
ಪ್ರತಿ ಪಡಿತರ ಚೀಟಿ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿಯನ್ನು ನೀಡಲು ಇನ್ನೂ ಸಾಧ್ಯವಾಗಿಲ್ಲ. ಆದರೆ ಸಿದ್ದರಾಮಯ್ಯ ಅವರ ಈ ಅಕ್ಕಿ ಯೋಜನೆಯಿಂದ ಇಲ್ಲಿಯವರೆಗೆ ಪಡಿತರದಾರರಿಗೆ ದೊರಕುತ್ತಿದ್ದ 5 ಕೆ.ಜಿ. ಅಕ್ಕಿ ಕೇಂದ್ರದ ಮೋದಿ ನೇತೃತ್ವದ ಸರ್ಕಾರ ನೀಡುತ್ತಿದ್ದುದು ಎನ್ನುವುದು ಜನರಿಗೆ ತಿಳಿಯುವಂತಾಗಿದೆ ಎಂದರು.
ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಮೋಸವೆಸಗುತ್ತಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆಯ ನಂತರ ಬಿದ್ದು ಹೋಗುತ್ತದೆ ಎಂದು ಆರ್.ಅಶೋಕ್ ಭವಿಷ್ಯ ನುಡಿದರು.







