ಮಡಿಕೇರಿ ಜು.7 : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಇಂದು ಮಂಡನೆಯಾಗಿರುವ ಬಜೆಟ್ ಬಡವರು, ಮಧ್ಯಮ ವರ್ಗ ಹಾಗೂ ರೈತಪರವಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಎಸ್.ಟಾಟು ಮೊಣ್ಣಪ್ಪ ಶ್ಲಾಘಿಸಿದ್ದಾರೆ.
ಕೊಡಗಿನ ಬಹುದಿನಗಳ ಬೇಡಿಕೆಯಾದ ಹೈಟೆಕ್ ಆಸ್ಪತ್ರೆಯ ಕನಸು ನನಸಾಗಲಿದ್ದು, ಈ ಯೋಜನೆಯನ್ನು ಘೋಷಿಸಿದ ಮುಖ್ಯಮಂತ್ರಿಗಳಿಗೆ ಜಿಲ್ಲೆಯ ಜನರ ಪರವಾಗಿ ಕಾಂಗ್ರೆಸ್ ಪಕ್ಷ ಕೃತಜ್ಞತೆ ಸಲ್ಲಿಸುತ್ತದೆ. ಅಲ್ಲದೆ ಕಾಫಿ ಬ್ರಾಂಡ್ ಯೋಜನೆ ಮೂಲಕ ಕಾಫಿ ಬೆಳೆಗಾರರಿಗೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗಿದೆ. ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಅನುದಾನ ಮೀಸಲಿಡಲಾಗಿದೆ.
ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸಿರುವ ಸರ್ಕಾರ ಖಾಸಗಿ ಸಹಭಾಗಿತ್ವದೊಂದಿಗೆ ಜನಪ್ರಿಯ ಪ್ರವಾಸಿತಾಣಗಳಲ್ಲಿ ಯಾತ್ರಿ ನಿವಾಸ ಅಥವಾ ವಸತಿ ನಿಲಯಗಳನ್ನು ನಿರ್ಮಿಸಲು ಮುಂದಾಗಿದೆ. ರಾಜ್ಯದ ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಪ್ರಸಿದ್ಧ ಪುಣ್ಯಕ್ಷೇತ್ರಗಳ ಅಭಿವೃದ್ಧಿಗೆ ಮತ್ತು ಯಾತ್ರಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಇದೆಲ್ಲವೂ ಕೊಡಗು ಜಿಲ್ಲೆಯ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಟಾಟು ಮೊಣ್ಣಪ್ಪ ಹೇಳಿದ್ದಾರೆ.
ಜನಪರವಾಗಿರುವ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಕರೆಯುತ್ತಿದ್ದವರಿಗೆ ಸಿಎಂ ತಮ್ಮ ಭಾಷಣದ ಮೂಲಕ ಚಾಟಿ ಬೀಸಿರುವುದು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.









