ಮಡಿಕೇರಿ ಆ.5 : ಸಮಾಜದಲ್ಲಿ ಒಗ್ಗಟ್ಟು ಮನೋಭಾವ ಸೃಷ್ಟಿಯಾಗಬೇಕಾದರೆ ಕ್ರೀಡಾಮನೋಭಾವ ಇರಬೇಕು ಎಂದು ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಹೇಳಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ರೀಡಾ ಸಮಿತಿ ಹಾಗೂ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿಮಹೋತ್ಸವ ಕ್ರೀಡಾ ಸಮಿತಿ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಪತ್ರಕರ್ತರಿಗಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಒಳಾಂಗಣ ಕ್ರೀಡಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು ನಿತ್ಯ ವೃತ್ತಿ ಜಂಜಾಟದಲ್ಲಿರುತ್ತಾರೆ. ಶ್ರದ್ಧಾಪೂರ್ವಕವಾಗಿ ಬದ್ಧತೆಯಲ್ಲಿ ಸಮಾಜಮುಖಿಯಾಗಿ ಕೆಲಸ ನಿರ್ವಹಿಸುತ್ತಾರೆ. ಈ ನಿಟ್ಟಿನಲ್ಲಿ ಅವರ ಮನೋಲ್ಲಾಸಕ್ಕೆ ಪೂರಕ ಕಾರ್ಯಕ್ರಮಗಳು ನಡೆಯಬೇಕು. ಇದರಿಂದ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬಹುದು. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗದೊಂದಿಗೆ ಪತ್ರಿಕಾ ರಂಗ ಪ್ರಜಾಪ್ರಭುತ್ವದ ಬುನಾದಿ ಸುಭದ್ರಗೊಳಿಸುತ್ತಿದೆ. ಆಗುಹೋಗುಗಳನ್ನು ಸಕಾಲದಲ್ಲಿ ತಲುಪಿಸುವ ಕೆಲಸ ಪತ್ರಕರ್ತರಿಂದಾಗುತ್ತಿದೆ. ಸಮಾಜದಲ್ಲಿ ಪತ್ರಕರ್ತರ ಪಾತ್ರ ಮಹತ್ತರವಾಗಿದೆ. ಒಳಿತು ಕೆಡಕನ್ನು ತೆರೆದಿಟ್ಟು ತಿದ್ದಿತೀಡುವ ಕೆಲಸ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಪತ್ರಕರ್ತರಿಂದ ಸಾಧ್ಯ ಎಂದು ಪ್ರತಿಪಾದಿಸಿದರು. ಇಂದಿನ ಕಾಲಘಟ್ಟದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಮಾಧ್ಯಮಗಳು ವಿಷಯಗಳು ತಲುಪಿಸುವ ಮೂಲಕ ಜನರಲ್ಲಿ ವಿದ್ಯಮಾನದ ಬಗ್ಗೆ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ ಎಂದ ಅವರು, ಸಮಾಜದಲ್ಲಿ ಒಗ್ಗಟ್ಟಿನಲ್ಲಿರಬೇಕಾದರೆ ಕ್ರೀಡಾ ಮನೋಭಾವ ಹೊಂದಿರಬೇಕು. ಚೆಸ್, ಕೇರಂನಂತಹ ಕ್ರೀಡೆಗಳು ಮನೋಶಕ್ತಿಯನ್ನು ವೃದ್ಧಿಸುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನುಕಾರ್ಯಪ್ಪ, ಕ್ರೀಡಾ ಚಟುವಟಿಕೆಗಳ ಮೂಲಕ ಪತ್ರಕರ್ತರನ್ನು ಒಗ್ಗಟ್ಟಾಗಿಸುವ ಕೆಲಸ ನಡೆಯುತ್ತಿದೆ. ಮುಂದಿನ ದಿನದಲ್ಲಿ ಪತ್ರಕರ್ತರಿಗಾಗಿ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕಾರ್ಯನಿರತ ಪತ್ರಕರ್ತರ ಸಂಘದ ಕ್ರೀಡಾ ಸಮಿತಿ ಸಂಚಾಲಕ ಮಂಜು ಸುವರ್ಣ, ಕೊಡಗು ಪ್ರೆಸ್ ಬೆಳ್ಳಿಮಹೋತ್ಸವ ಕ್ರೀಡಾ ಸಮಿತಿ ಸಂಚಾಲಕ ಸಂತೋಷ್ ರೈ ಸೇರಿದಂತೆ ಇನ್ನಿತರರು ಹಾಜರಿದ್ದರು. ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಜಿ ಆನಂದ್ ಕೊಡಗು ನಿರೂಪಿಸಿ, ನಿರ್ದೇಶಕ ಹೆಚ್.ಜೆ. ರಾಕೇಶ್ ಸ್ವಾಗತಿಸಿ, ನಿರ್ದೇಶಕಿ ಉಕ್ಕೇರಂಡ ವಿಶ್ಮಾ ಪೆಮ್ಮಯ್ಯ ವಂದಿಸಿದರು.











