ಮಡಿಕೇರಿ ಆ.6 : ಮೂರು ದಿನಗಳ ಹಿಂದೆ ಯಾರಿಗೂ ಹೇಳದೆ ಮನೆ ಬಿಟ್ಟು ಹೋಗಿದ್ದ ಮಡಿಕೇರಿ ತಾಲ್ಲೂಕಿನ ಇಬ್ಬರು ಬಾಲಕಿಯರ ಪೈಕಿ ಒಬ್ಬಾಕೆ ಕಡಲಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಮಡಿಕೇರಿ ನಗರದ ನಿವಾಸಿ ಮಾನ್ಯ ಎಂಬಾಕೆ ಮೃತಪಟ್ಟ ಬಾಲಕಿಯಾಗಿದ್ದು, ಮತ್ತೋರ್ವ ಬಾಲಕಿಯನ್ನು ರಕ್ಷಿಸಲಾಗಿದೆ.
ನಗರದ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿಯ ಇಬ್ಬರು ಬಾಲಕಿಯರು ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ನಂತರ ನಾಪತ್ತೆಯಾಗಿದ್ದರು. ಈ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿ, ಪೊಲೀಸರು ತನಿಖೆ ಕೈಗೊಂಡಿದ್ದರು.
ಈ ನಡುವೆ ಶನಿವಾರ ರಾತ್ರಿ 8.30 ಗಂಟೆ ವೇಳೆ ಉಡುಪಿಯ ಮಲ್ಪೆಯಲ್ಲಿ ಬಂಡೆಯೊoದರ ಮೇಲೆ ಕುಳಿತು ಆಟವಾಡುತ್ತಿದ್ದರು. ಈ ವೇಳೆ ಸಮುದ್ರದಿಂದ ದೊಡ್ಡ ಅಲೆಯೊಂದು ಅಪ್ಪಳಿಸಿ ಇಬ್ಬರನ್ನೂ ಸೆಳೆದುಕೊಂಡು ಹೋಗಿದೆ ಎನ್ನಲಾಗಿದೆ.
ಮಲ್ಪೆ ಕಡಲಲ್ಲಿ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗೇಳುತ್ತಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆಯೇ ಸಮೀಪದಲ್ಲೇ ಇದ್ದ ಮಲ್ಪೆಯ ಸಮಾಜ ಸೇವಕ, ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರನ್ನೂ ಮೇಲೆತ್ತಿದ್ದಾರೆ. ಆದರೆ, ಆ ಹೊತ್ತಿಗೆ ಮಾನ್ಯ ನೀರು ಕುಡಿದು ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ನೀರಿನಲ್ಲಿ ಮುಳುಗುತ್ತಿದ್ದ ಮತ್ತೊಬ್ಬಳನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿ ಚೇತರಿಸಿಕೊಳ್ಳುತ್ತಿದ್ದಾಳೆ.
ಇಬ್ಬರು ಬಾಲಕಿಯರು ಮಲ್ಪೆ ಕಡಲ ತೀರಕ್ಕೆ ಯಾಕೆ ಹೋಗಿದ್ದರು ಎಂಬ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಘಟನೆಗೆ ಸಂಬoಧಿಸಿದoತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








