ಮಡಿಕೇರಿ ಆ.7 : ಅತ್ಯಾಚಾರದಿಂದ ಅಮಾನವೀಯವಾಗಿ ಹತ್ಯೆಯಾದ ಉಜಿರೆ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ಒಪ್ಪಿಸಬೇಕೆಂದು ಕೊಡಗು ಜಿಲ್ಲಾ ಒಕ್ಕಲಿಗರ ಸಂಘ ಒತ್ತಾಯಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ.ಚಂಗಪ್ಪ, ವಿದ್ಯಾರ್ಥಿನಿ ಸೌಜನ್ಯಳ ಹತ್ಯೆಯಾಗಿ 11 ವರ್ಷಗಳೇ ಕಳೆದರೂ ನೈಜ ಆರೋಪಿಯನ್ನು ಬಂಧಿಸದೇ ಇರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಸ್ಐಟಿ ತನಿಖೆ ಮೂಲಕ ತಪ್ಪಿತಸ್ಥರನ್ನು ಪತ್ತೆ ಮಾಡಿ ಶಿಕ್ಷೆಗೆ ಗುರಿ ಪಡಿಸಬೇಕು, ಆ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಅಮಾಯಕ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಹತ್ಯೆಗೈದಿರುವುದು ಪೈಶಾಚಿಕ ಕೃತ್ಯವಾಗಿದೆ. ಈ ರೀತಿಯ ಘಟನೆಗಳನ್ನು ಯಾವ ಸಮಾಜವೂ ಸಹಿಸಲು ಸಾಧ್ಯವಿಲ್ಲ. ಸುದೀರ್ಘ ಕಾಲದಿಂದ ನೈಜ ತಪ್ಪಿತಸ್ಥರನ್ನು ಪತ್ತೆ ಮಾಡದೆ ಇರುವುದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತಿದೆ. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರ ವಹಿಸಲು ಅತ್ಯಾಚಾರ ಪ್ರಕರಣಗಳ ಆರೋಪಿಗಳನ್ನು ಶೀಘ್ರ ಪತ್ತೆ ಮಾಡಿ ಶಿಕ್ಷಗೆ ಗುರಿ ಪಡಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸೌಜನ್ಯ ಪ್ರಕರಣವನ್ನು ರಾಜ್ಯ ಸರ್ಕಾರ ವಿಶೇಷವಾಗಿ ಪರಿಗಣಿಸಿ ತುರ್ತು ತನಿಖೆಗೆ ಆದೇಶ ಹೊರಡಿಸಬೇಕು, ನೊಂದ ಕುಟುಂಬಕ್ಕೆ ಸೂಕ್ತ ರಕ್ಷಣೆ ಮತ್ತು ಪರಿಹಾರವನ್ನು ನೀಡಬೇಕೆಂದು ಚಂಗಪ್ಪ ಒತ್ತಾಯಿಸಿದ್ದಾರೆ.










