ಮಡಿಕೇರಿ ಆ.10 : ನಗರದ ಐತಿಹಾಸಿಕ ಕೋಟೆಯಲ್ಲಿ ನಡೆಯುತ್ತಿರುವ ನವೀಕರಣ ಕಾಮಗಾರಿ ಡಿಸೆಂಬರ್ ತಿಂಗಳಿನಲ್ಲಿ ಪೂರ್ಣಗೊಳ್ಳಲಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಗುರುವಾರ ಕೋಟೆಯ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದರು.
ಕೋಟೆಯ ನೆಲ ಮಹಡಿ ಮತ್ತು ಮೊದಲ ಮಹಡಿ ಕಾಮಗಾರಿ ವೀಕ್ಷಿಸಿ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಗರದ ಕೋಟೆಯು ಹೃದಯ ಭಾಗದಲ್ಲಿದ್ದು, ಜಿಲ್ಲಾ ಕೇಂದ್ರ ಮಡಿಕೇರಿಯ ಕೋಟೆಯನ್ನು ಮತ್ತಷ್ಟು ಅಭಿವೃದ್ಧಿಗೊಳಿಸಬೇಕು ಎಂದರು.
ಸರ್ಕಾರ ನಗರದ ಕೋಟೆ ಅಭಿವೃದ್ಧಿಗೆ 10.76 ಕೋಟಿ ರೂ ಬಿಡುಗಡೆ ಮಾಡಿದ್ದು, ಕೋಟೆ ನವೀಕರಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.
ಈ ಸಂದರ್ಭ ಮಾತನಾಡಿದ ಪುರಾತತ್ವ ಇಲಾಖೆಯ ಬಿಪಿನ್ಚಂದ್ರ ನೇಗಿ ಅವರು ಛಾವಣಿ ಕೆಲಸ ಪೂರ್ಣಗೊಂಡಿದ್ದು, ಪ್ಲಾಸ್ಟಿಂಗ್ ಕಾರ್ಯ ಪೂರ್ಣಗೊಳ್ಳುವ ಹಂತದಲ್ಲಿದೆ. ಪಾಲಿಶ್ ಕೆಲಸ ಜೊತೆಗೆ ಸುಣ್ಣ ಬಣ್ಣ ಕೆಲಸ ಭರದಿಂದ ಸಾಗಿದ್ದು, ಡಿಸೆಂಬರ್ ವೇಳೆಗೆ ಕೋಟೆಯ ನವೀಕರಣ ಕಾಮಗಾರಿ ಕೆಲಸ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಪುರಾತತ್ವ ಇಲಾಖೆಯ ಸೋಮ್ಲ ನಾಯಕ್, ಸುನಿಲ್ ಕುಮಾರ್, ಇತರರು ಕೋಟೆ ನವೀಕರಣ ಕಾಮಗಾರಿ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.
::: ಕೋಟೆಯಲ್ಲಿ ಸ್ವಾತಂತ್ರ್ಯೋತ್ಸವ :::
ಇದೇ ಆ.15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯನ್ನು ನಗರದ ಕೋಟೆ ಆವರಣದಲ್ಲಿ ಹಮ್ಮಿಕೊಂಡಿರುವ ಹಿನ್ನೆಲೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ನಗರದ ಕೋಟೆಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಯಾವ ಭಾಗದಲ್ಲಿ ವೇದಿಕೆ ನಿರ್ಮಾಣ ಮಾಡುವುದು, ಧ್ವಜಾರೋಹಣ, ಪೊಲೀಸ್ ಕವಾಯತು ಮತ್ತಿತರ ಬಗ್ಗೆ ಪೊಲೀಸ್ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಎಂಜಿನಿಯರ್ಗಳ ಜೊತೆ ಚರ್ಚಿಸಿದರು.
ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮಾಚರಣೆಯಿಂದ ಆಚರಿಸುವ ನಿಟ್ಟಿನಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ ಎಂದರು.
ಸ್ವಾತಂತ್ರ್ಯ ದಿನಾಚರಣೆ ನಡೆಯುವ ಕೋಟೆ ಆವರಣದಲ್ಲಿ ನಗರಸಭೆ ವತಿಯಿಂದ ಸ್ವಚ್ಚತಾ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಹಲವು ಸಿದ್ಧತೆಗಳು ಭರದಿಂದ ಸಾಗಿವೆ.
ಡಿವೈಎಸ್ಪಿ ಜಗದೀಶ್, ಸಿಪಿಐ ಅನೂಪ್ ಮಾದಪ್ಪ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ವೈ.ಎಸ್.ಸಿದ್ದೇಗೌಡ, ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸುರೇಶ್ ಕುಮಾರ್, ಲೋಕೋಪಯೋಗಿ ಇಲಾಖೆ ಎಇಇ ಗಿರೀಶ್, ಸಹಾಯಕ ಎಂಜಿನಿಯರ್ ಸತೀಶ್, ಪೊಲೀಸ್ ಇಲಾಖೆಯ ಆರ್ಎಸ್ಐ ರಾಕೇಶ್, ಪಿಎಸ್ಐ ಶ್ರೀನಿವಾಸ್ ಇತರರು ಇದ್ದರು.









