ಮಡಿಕೇರಿ ಆ.21 : ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿರುವ ಜನರಲ್ ತಿಮ್ಮಯ್ಯ ಪ್ರತಿಮೆಗೆ ಬೆಳಗಿನ ಜಾವ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಪ್ರತಿಮೆಗೆ ಹಾನಿಯಾಗಿರುವ ಹಿನ್ನೆಲೆ ಸ್ಥಳಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ವೀಕ್ಷಿಸಿದರು.
ಬಳಿಕ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣಕ್ಕೆ ಸ್ಥಳಾಂತರಿಸಲಾಗಿರುವ ಪ್ರತಿಮೆಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಮೆ ಪುನರ್ ಸ್ಥಾಪನೆ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಸಂಬಂಧಪಟ್ಟ ಇಂಜಿನಿಯರ್ಗಳು ಮತ್ತು ತಜ್ಞರ ಜೊತೆ ಚರ್ಚಿಸಿ ತ್ವರಿತವಾಗಿ ಪ್ರತಿಮೆ ಮರು ಸ್ಥಾಪನೆಗೆ ಕ್ರಮವಹಿಸಲಾಗುವುದು ಎಂದರು.
ಈ ಸಂಬಂಧ ಅಧಿಕಾರಿಗಳು, ಇಂಜಿನಿಯರ್ಗಳು ಸ್ಥಳೀಯರ ಜೊತೆ ಸಮಾಲೋಚನೆ ನಡೆಸಲಾಗುವುದು, ಆದಷ್ಟು ಶೀಘ್ರ ವೈಜ್ಞಾನಿಕವಾಗಿ ಪ್ರತಿಮೆ ಮರು ಸ್ಥಾಪಿಸಲಾಗುವುದು, ಕೆಎಸ್ಆರ್ಟಿಸಿ ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಿ ಹಣ ಭರಿಸುವ ಬಗ್ಗೆ ಮಾತುಕತೆ ನಡೆಸಲಾಗುವುದು ಎಂದರು.
ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರು ಪ್ರತಿಮೆ ಮರು ಸ್ಥಾಪನೆಗೆ ಸಂಬಂಧಿಸಿದಂತೆ ಹಲವು ಸಲಹೆ, ಮಾರ್ಗದರ್ಶನ ನೀಡಿದರು.
ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಕೆಎಸ್ಆರ್ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಗೀತಾ, ತಹಶೀಲ್ದಾರ್ ಪ್ರವೀಣ್ ಕುಮಾರ್, ಪೌರಾಯುಕ್ತ ವಿಜಯ, ನಗರಸಭೆ ಸದಸ್ಯರು ಇತರರು ಈ ಸಂದರ್ಭದಲ್ಲಿ ಇದ್ದರು.
ಎ.ಎಸ್.ಪೊನ್ನಣ್ಣ ಮನವಿ: ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಜನರಲ್ ತಿಮ್ಮಯ್ಯ ಪ್ರತಿಮೆಯನ್ನು ಮರು ಸ್ಥಾಪಿಸಲಾಗುವುದು. ಎಲ್ಲರೂ ಜಿಲ್ಲಾಡಳಿತದ ಜೊತೆ ಸಹಕರಿಸುವಂತೆ ಕೋರಿದ್ದಾರೆ.







