ಅಗತ್ಯ ವಸ್ತುಗಳ ಬೆಲೆಯ ಮೇಲೆ ನಿಯಂತ್ರಣ ಸಾಧಿಸಬೇಕು, ಸಮರ್ಪಕ ಉದ್ಯೋಗ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ(ಎಂ) ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದು.
ಈ ಸಂದರ್ಭ ಮಾತನಾಡಿದ ಭಾರತ ಕಮ್ಯುನಿಸ್ಟ್ ಪಕ್ಷ(ಎಂ)ದ ಜಿಲ್ಲಾ ಸಂಘಟನಾ ಸಮಿತಿ ಕಾರ್ಯದರ್ಶಿ ಹೆಚ್.ಬಿ.ರಮೇಶ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ದೇಶದ ಜನತೆಗೆ ಅಗತ್ಯ ವಸ್ತುಗಳ ಬೆಳೆ ಕಡಿಮೆ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದಿದ್ದು, ಇದೀಗ ದಿನದಿಂದ ದಿನಕ್ಕೆ ಏರಿಕೆ ಮಾಡುತ್ತಿರುವುದರಿಂದ ಕೂಲಿ ಕಾರ್ಮಿಕರು ಜೀವನ ನಡೆಸುವುದೆ ಸಮಸ್ಯೆಯಾಗಿದೆ. ಆದ್ದರಿಂದ ವಸ್ತುಗಳ ಬೆಲೆಯನ್ನು ಕಡಿಮೆ ಮಾಡಲು ಸರಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಜೌಷಧಿ ಬೆಲೆಗಳ ನಿಯಂತ್ರಣವನ್ನು ಮರು ಸ್ಥಾಪಿಸಬೇಕು, ಪೆಟ್ರೋಲ್ ಡಿಸೇಲ್ ಬೆಲೆಗಳ ಮೇಲಿನ ತೆರಿಗೆಗಳನ್ನು ಕಡಿತ ಮಾಡಬೇಕು, ಬಡವರ ವಿರೋಧಿ ನೀತಿಯನ್ನು ಕೈಬಿಟ್ಟು, ರಾಜ್ಯ ಸರ್ಕಾರದ ಕೋರಿಕೆಯಂತೆ ತಲಾ ಹೆಚ್ಚುವರಿ ಐದು ಕೆಜಿ ಅಕ್ಕಿ ಒದಗಿಸಬೇಕು, ಕೃಷಿ ಕೂಡಿಕೆಗಳಾದ ಬೀಜ, ಗೊಬ್ಬರ, ಕೀಟ ನಾಶಕ ಹಾಗೂ ಕೃಷಿ ಉಪಕರಣಗಳ ಮೇಲಿನ ಹಾಗೂ ಪಡಿತರ ಚೀಟಿದಾರರಿಗೆ ಎಲ್ಲಾ ಹದಿನಾರು ಅಗತ್ಯ ಆಹಾರ ಧಾನ್ಯಗಳ ಮೇಲಿನ ಜಿಎಸ್ಟಿಯನ್ನು ಹಿಂಪಡೆಯಬೇಕು, ಉದ್ಯೋಗ ಅಥವಾ ಉದ್ಯೋಗ ಭತ್ಯೆ ಒದಗಿಸಬೇಕು ಎಂದು ಒತ್ತಾಯಿಸಿದರು.
ಒಕ್ಕೂಟ ಸರಕಾರದಡಿ ಖಾಲಿ ಇರುವ ಎಲ್ಲಾ ಉದ್ಯೋಗಗಳನ್ನು ತಕ್ಷಣ ಭರ್ತಿ ಮಾಡಬೇಕು, ಗುತ್ತಿಗೆ ಪದ್ಧತಿ ಹಾಗೂ ಗೌರವಧನದ ಬಿಟ್ಟಿ ಚಾಕರಿಗಳನ್ನು ರುದ್ದುಪಡಿಸಬೇಕು, ಬಡವರು, ವ್ಯವಸಾಯ ಮತ್ತು ಸಣ್ಣ ಕೈಗಾರಿಕೆಗಳ ಮತ್ತು ರಾಜ್ಯದ ಅಭಿವೃದ್ಧಿಯಾದ ವಿದ್ಯುತ್ ರಂಗದ ಖಾಸಗಿ ಕರಣವನ್ನು ಮತ್ತು ಪ್ರೀಪೇಡ್ ಸ್ಮಾರ್ಟ್ ಮೀಟರ್ ಅಳವಡಿಕೆಯನ್ನು ವಾಪಾಸು ಪಡೆಯಬೇಕು, ತೆರಿಗೆಯ ಹೆಚ್ಚುವರಿ ಪಾಲನ್ನು ಹಾಗೂ ಜಿಎಸ್ಟಿ ಬಾಕಿ ಮೊತ್ತವನ್ನು ಕರ್ನಾಟಕಕ್ಕೆ ನೀಡಬೇಕು, ಕಾಡಾನೆ ಹಾವಳಿಗೆ ಸರ್ಕಾರ ಶಾಸ್ವತ ಪರಿಹಾರ ಕಂಡುಕೊಳ್ಳಬೇಕು, ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಬೇಕು, ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು, ಜಿಲ್ಲೆಯ ಎಲ್ಲಾ ನಿವೇಶನ ರಹಿತರಿಗೆ ನಿವೇಶನ ನೀಡಲು ಮುಂದಾಗಬೇಕು, ಪ್ರಾಕೃತಿಕ ವಿಕೋಪದಲ್ಲಿ ಮನೆ ಕಳೆದುಕೊಂಡವರಿಗೆ ತಕ್ಷಣವೇ ಮನೆ ನಿರ್ಮಾಣ ಮಾಡಿಕೊಡಬೇಕು, ರೈತರ ಎಲ್ಲಾ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು, ಜಿಲ್ಲೆಗೆ ರೈಲು ತರಲು ಸರಕಾರ ಮುಂದಾಗಬೇಕು, ಶೀಘ್ರ ಗತಿಯಲ್ಲಿ ಕೆಲಸ ಪ್ರಾರಂಭಿಸಬೇಕೆಂದು ಆಗ್ರಹಿಸಿದರು.
ಜಿಲ್ಲಾ ಸಮಿತಿ ಸದಸ್ಯರಾದ ಎ.ಮಹದೇವ, ಎನ್.ಡಿ.ಕುಟ್ಟಪ್ಪ, ಸಾಜಿ ರಮೇಶ್, ವೈ.ಕೆ.ಗಣೇಶ್, ಶಾಖಾ ಕಾರ್ಯದರ್ಶಿ ಪಿ.ಆರ್.ಭರತ್ ಸೇರಿದಂತೆ ಮತ್ತಿತರ ಸದಸ್ಯರು ಪ್ರತಿಭಟನೆಯಲ್ಲಿ ಹಾಜರಿದ್ದರು.









