ಮಡಿಕೇರಿ ಸೆ.22 : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾನು ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮೈಸೂರಿನ ಗುರುಮಲ್ಲೇಶ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಲು ಬಯಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಮೈಸೂರು ನಗರಾಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರುಗಳಿಗೆ ಈಗಾಗಲೇ ನನ್ನ ಅರ್ಜಿ ಮತ್ತು ವೈಯುಕ್ತಿಕ ವಿವರಗಳನ್ನು ಸಲ್ಲಿಸಿದ್ದೇನೆ. ಸ್ಪರ್ಧಿಸಲು ಅವಕಾಶ ದೊರೆಯಲಿದೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಜನಾರ್ಧನ ಪೂಜಾರಿ ಅವರು ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾಗ ಕೂಡ ಮೈಸೂರು ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೆ. ಆದರೆ ಆ ಸಂದರ್ಭ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರಿಗೆ ಟಿಕೆಟ್ ದೊರಕಿದ್ದರಿಂದ ನನಗೆ ಸ್ಪರ್ಧಿಸಲು ಅವಕಾಶ ದೊರೆಯಲಿಲ್ಲ. ಜೆಡಿಎಸ್ ಪಕ್ಷದಲ್ಲಿಯೂ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಂದರ್ಭ ಮೈಸೂರು ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೆ. ಕೊನೆಯ ಕ್ಷಣದವರೆಗೂ ನನ್ನ ಹೆಸರು ಚಾಲ್ತಿಯಲ್ಲಿತ್ತು. ಆದರೆ ನಂತರ ಒಕ್ಕಲಿಗ ಸಮುದಾಯದವರಿಗೆ ಟಿಕೆಟ್ ನೀಡಬೇಕೆಂದು ಪಕ್ಷ ತೀರ್ಮಾನಿಸಿ, ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರ್ ಅವರಿಗೆ ಟಿಕೆಟ್ ನೀಡಲಾಯಿತು.
ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ಬೇಕಾದ ಅರ್ಹತೆ, ಅನುಭವ, ಅಭಿವೃದ್ಧಿಪರ ಕಾಳಜಿ, ಜ್ಞಾನ, ಸಂಪರ್ಕ, ರಾಜಕೀಯ ಅರಿವಿದ್ದರೂ ನಿರಂತರವಾಗಿ ಟಿಕೆಟ್ ವಂಚಿತನಾಗುತ್ತಲೇ ಬಂದಿದ್ದೇನೆ. ಆದರೆ ಈ ಬಾರಿ ಕಾಂಗ್ರೆಸ್ ಪಕ್ಷ ನನಗೆ ಸ್ಪರ್ಧಿಸಲು ಅವಕಾಶ ನೀಡಲಿದೆ ಎನ್ನುವ ವಿಶ್ವಾಸವಿದೆ ಎಂದು ಗುರುಮಲ್ಲೇಶ್ ತಿಳಿಸಿದ್ದಾರೆ.
ನಾನು ನನ್ನ ಬಾಲ್ಯವನ್ನು ಸುಮಾರು 10 ವರ್ಷದವರೆಗೂ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ತಿತಿಮತಿಯ ನೋಕಿಯಾ ಗ್ರಾಮದಲ್ಲಿ ಕಳೆದಿದ್ದೇನೆ. ಕೊಡಗು ಜಿಲ್ಲೆಯ ಇತ್ತೀಚಿನ ಆಗುಹೋಗುಗಳು ಮತ್ತು ಸಮಸ್ಯೆಗಳ ಬಗ್ಗೆ ಸಂಪೂರ್ಣ ಅಧ್ಯಯನ ಮಾಡಿದ್ದೇನೆ. ಜನಪರ ಕಾರ್ಯಗಳ ಮೂಲಕ ಜಿಲ್ಲೆಯನ್ನು ಅಭಿವೃದ್ಧಿ ಪಡಿಸಬೇಕೆನ್ನುವ ವಿಶ್ವಾಸ ನನ್ನಲ್ಲಿದೆ ಎಂದು ಅವರು ಹೇಳಿದ್ದಾರೆ.









