ಮಡಿಕೇರಿ ಸೆ.29 : ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಕಾವೇರಿಯ ಉಗಮ ಸ್ಥಾನ ಕೊಡಗಿನಲ್ಲಿ ಯಾವುದೇ ಸ್ಪಂದನೆ ದೊರೆಯಲಿಲ್ಲ. ಕೆಲವು ಕಡೆ ಪ್ರತಿಭಟನೆ ನಡೆದದ್ದು ಬಿಟ್ಟರೆ ಜನಜೀವನ ಎಂದಿನಂತೆ ಇತ್ತು.
ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಕೊಡಗಿನಲ್ಲಿ ಪರಿಣಾಮ ಬೀರಲಿಲ್ಲ. ಜಿಲ್ಲೆಯ ಕುಶಾಲನಗರ ಮತ್ತು ಗೋಣಿಕೊಪ್ಪದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಯಿತು.
ಜಿಲ್ಲಾ ಕೇಂದ್ರ ಮಡಿಕೇರಿ ನಗರದಲ್ಲಿ ವಾರದ ಶುಕ್ರವಾರದ ಸಂತೆ ಬಂದ್ ಬಿಸಿ ಇಲ್ಲದೆ ಸುಗಮವಾಗಿ ನಡೆಯಿತು. ಪಿರಿಯಾಪಟ್ಟಣ, ಹುಣಸೂರು ಮುಂತಾದ ಕಡೆಯಿಂದ ಬರುವ ವ್ಯಾಪಾರಿಗಳು ಗುರುವಾರ ಸಂಜೆಯೇ ಬಂದಿದ್ದರಿಂದ ಸಂತೆ ವ್ಯಾಪಾರಕ್ಕೆ ಯಾವುದೇ ತೊಂದರೆಯಾಗಲಿಲ್ಲ. ಅಂಗಡಿಗಳಲ್ಲೂ ವಾರದ ವ್ಯಾಪಾರ ಭರ್ಜರಿಯಾಗಿಯೇ ನಡೆಯಿತು.
ಶಾಲಾ ಕಾಲೇಜುಗಳು, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳ ಸಹಿತ ವಾಹನ ಸಂಚಾರವೂ ಎಂದಿನಂತೆ ಇತ್ತು. ಮೈಸೂರು ಮತ್ತು ಬೆಂಗಳೂರಿಗೆ ತೆರಳುವ ಸರ್ಕಾರಿ ಬಸ್ ಗಳ ಸಂಖ್ಯೆ ವಿರಳವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಸಂಪರ್ಕಕ್ಕೆ ಯಾವುದೇ ಅಡ್ಡಿಯಾಗಿಲ್ಲ.
::: ಪ್ರತಿಭಟನೆ :::
ಕೊಡಗು ಗಡಿ ಕುಶಾಲನಗರದಲ್ಲಿ ಕರ್ನಾಟಕ ಕಾವಲು ಪಡೆಯ ಪ್ರಮುಖರು ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಪಕ್ಕದಲ್ಲೇ ಇದ್ದ ಕಾವೇರಿ ನದಿಗೆ ಅರೆಬೆತ್ತಲೆಯಾಗಿ ಇಳಿಯಲು ಪ್ರಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಕಾವಲು ಪಡೆಯ ಜಿಲ್ಲಾಧ್ಯಕ್ಷ ಕೃಷ್ಣ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಕುಶಾಲನಗರ ಪಟ್ಟಣದಲ್ಲಿ ಬಿಜೆಪಿ ಪ್ರಮುಖರು ಪ್ರತಿಭಟನೆ ನಡೆಸಿ ಸರ್ಕಾರ ರಾಜ್ಯದ ರೈತರ ಹಿತ ಕಾಯಬೇಕೆಂದು ಒತ್ತಾಯಿಸಿದರು.
ಗೋಣಿಕೊಪ್ಪದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಂದ ಪ್ರಮುಖರು ಪ್ರತಿಭಟನೆ ನಡೆಸಿ ಮಳೆಯ ಕೊರತೆಯಿಂದ ಕರ್ನಾಕದ ರೈತರೇ ಸಂಕಷ್ಟದಲ್ಲಿದ್ದಾರೆ. ಕಾವೇರಿ ನದಿಯಲ್ಲಿ ನೀರಿನ ಹರಿವಿಲ್ಲದೆ ಕೃಷಿ ಕಾರ್ಯಕ್ಕೆ ಹಿನ್ನಡೆಯಾಗಿದೆ. ರಾಜ್ಯದ ರೈತರ ಹಿತ ಕಾಯುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.
ರೈತ ಸಂಘದ ಸಂಚಾಲಕ ಸುಭಾಷ್ ಸುಬ್ಬಯ್ಯ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.










