ವಿರಾಜಪೇಟೆ ಅ.5 : ಕ್ರೀಡಾಪಟುಗಳಲ್ಲಿ ಶಿಸ್ತು ಮುಖ್ಯ ಎಂದು ಅಂತಾರಾಷ್ಟ್ರೀಯ ರಗ್ಬಿ ಆಟಗಾರ ಹಾಗೂ ಪ್ರಗತಿ ಶಾಲೆಯ ಮುಖ್ಯಸ್ಥ ಮಾದಂಡ ತಿಮ್ಮಯ್ಯ ಅಭಿಪ್ರಾಯಪಟ್ಟರು.
ವಿರಾಜಪೇಟೆಯ ಸಂತ ಅನ್ನಮ್ಮ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿ, ಕಾಲೇಜು ಜೀವನ ಅತೀ ಮುಖ್ಯವಾಗಿದೆ. ಆಟಗಾರರು ಶಿಸ್ತನ್ನು ಕಾಪಾಡುವುದರ ಮೂಲಕ ಆರೋಗ್ಯಕರ ಜೀವನ ನಡೆಸುವಂತಾಗಬೇಕು. ಆಟದಲ್ಲಿ ಗೆಲ್ಲುವುದಕ್ಕಿಂತ ಪಾಲ್ಗೊಳ್ಳುವಿಕೆ ಅತೀ ಮುಖ್ಯ ಎಂದು ಹೇಳಿದರು.
ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ. ಫಾ. ಮದಲೈ ಮುತ್ತು ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಯಲ್ಲಿ ಕ್ರೀಡೆಯು ಅತೀ ಮುಖ್ಯವಾಗಿದೆ. ವಿದ್ಯಾರ್ಥಿಗಳು ಮಾನಸಿಕವಾಗಿ ದೈಹಿಕವಾಗಿ ಸದೃಢರಾಗಬೇಕು ಎಂದು ತಿಳಿಸಿದರು. ಮಾತ್ರವಲ್ಲದೆ ಕ್ರೀಡಾಕೂಟಗಳು ಸಾಮರಸ್ಯವನ್ನು ಬೆಳೆಸುತ್ತವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ.ಐಸಾಕ್ ರತ್ನಾಕರ್ ಮಾತನಾಡಿ, ಸಂಸ್ಥೆಯ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಇದೀಗ ರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸಿರುವುದು ಮಹತ್ವದ್ದಾಗಿದೆ. ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಮೂಡಿಸುವುದರ ಜೊತೆಗೆ ಭಾಂದವ್ಯವನ್ನು ಬೆಸೆಯುತ್ತವೆ ಎಂದರು.
ವೇದಿಕೆಯಲ್ಲಿ ವಿರಾಜಪೇಟೆಯ ಪ್ರಕೃತಿ ಮಾರ್ಕೆಟಿಂಗ್ನ ಮೊಹಮ್ಮದ್ ಷರೀಫ್, ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಹೇಮ, ದೈಹಿಕ ಶಿಕ್ಷಕ ನಿರ್ದೇಶಕ ರಾಜ ರೈ ಅವರು ಉಪಸ್ಥಿತರಿದ್ದರು.
ಉದ್ಘಾಟನಾ ಪಂದ್ಯವು ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆ ಹಾಗೂ ಪ್ರಗತಿ ಶಾಲಾ ವಿದ್ಯಾರ್ಥಿಗಳ ನಡುವೆ ನಡೆಯಿತು.
ಮೊದಲ ಪಂದ್ಯವು ಮಡಿಕೇರಿಯ ಎಫ್.ಎಂ.ಸಿ ಕಾಲೇಜು ಹಾಗೂ ಬೆಳ್ತಂಗಡಿಯ ಸೇಕ್ರೆಡ್ ಹಾರ್ಟ್ ಕಾಲೇಜುಗಳ ನಡುವೆ ನಡೆಯಿತು.
ಈ ಸಂದರ್ಭ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಉಪನ್ಯಾಸಕಿ ಹೇಮಾ ಇದ್ದರು.
ಎರಡು ದಿನಗಳ ಕಾಲ ನಡೆಯುವ ಈ ಪಂದ್ಯಾವಳಿಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಒಟ್ಟು 32 ತಂಡಗಳು ಭಾಗವಹಿಸಲಿವೆ.









