ನಾಪೋಕ್ಲು ಅ.10 : ಸಮುದಾಯ ಜೊತೆಯಲ್ಲಿದ್ದಾಗ ಸಮಾಜದ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹೇಳಿದರು.
ನೆಲಜಿ ಅಂಬಲ ಮಹಿಳಾ ಸಮಾಜದ ವತಿಯಿಂದ ನೆಲಜಿ ಅಂಬಲ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಮೂರನೇ ವರ್ಷದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಮಾಜದಲ್ಲಿ ಇಂದು ಯುವಕರು ತಪ್ಪು ದಾರಿ ಹಿಡಿಯುತ್ತಿದ್ದಾರೆ.ಯುವ ಜನರ ತಪ್ಪುಗಳನ್ನು ಪತ್ತೆ ಹಚ್ಚಿ ತಿದ್ದುವ ಕೆಲಸವನ್ನು ಹಿರಿಯರು ಮಾಡಬೇಕು ಎಂದ ಅವರು ಸಮುದಾಯದಲ್ಲಿ ಆಯೋಜಿಸಲಾಗುವ ಕ್ರೀಡಾಕೂಟಗಳು ಸಾಮರಸ್ಯವನ್ನು ಬೆಸೆಯುತ್ತವೆ. ಸೋಲು ಗೆಲುವು ಜೀವನದ ಭಾಗ. ಒಮ್ಮೆ ಗೆದ್ದವರು ಮತ್ತೊಮ್ಮೆ ಸೋಲಬಹುದು. ಸಾರ್ವಜನಿಕ ಸೇವೆಯಲ್ಲಿಯೂ ಏಳು ಬೀಳುಗಳು ಸಾಮಾನ್ಯ. ಶಾಸಕನಾಗಿ ನಾನು ತನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದರು.
ಸರ್ಕಾರ ರೈತರಿಗೆ 3 ಲಕ್ಷದಿಂದ ಐದು ಲಕ್ಷ ರೂಪಾಯಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲವನ್ನು ವಿತರಿಸುತ್ತಿದೆ. ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದರು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವುದಾಗಿ ಹೇಳಿದರು.
ನಾಪೋಕ್ಲು ಕೊಡವ ಸಮಾಜದ ಮಾಜಿ ಅಧ್ಯಕ್ಷ ಅಪ್ಪಚೆಟ್ಟೋಳoಡ ಮನು ಮುತ್ತಪ್ಪ ಮಾತನಾಡಿ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದ ಅವರು ಸಾರ್ವಜನಿಕರ, ಬೆಳೆಗಾರರ ಸಮಸ್ಯೆಗಳ ಬಗ್ಗೆ ಗಮನಹರಿಸಿ ಉತ್ತಮ ಕಾರ್ಯ ನಿರ್ವಹಿಸುವ ಭರವಸೆ ಇದೆ ಎಂದ ಅವರು ಗ್ರಾಮೀಣ ಭಾಗದಲ್ಲಿ ಅಂಬಲ ಮಹಿಳಾ ಸಂಘಟನೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.
ನಾಪೋಕ್ಲು ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ ಮಾತನಾಡಿ, ಯುವಜನತೆ ದಾರಿ ತಪ್ಪುವುದನ್ನು ತಡೆಗಟ್ಟಲು ಪ್ರಾಮಾಣಿಕ ಪ್ರಯತ್ನ ಇಲಾಖೆ ವತಿಯಿಂದ ನಡೆಸಲಾಗುತ್ತಿದೆ. ಮಾದಕ ವ್ಯಸನಿಗಳಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ 20 ಮಂದಿ ಮಾದಕ ವಸ್ತು ಮಾರಾಟಗಾರರನ್ನು ಪತ್ತೆಹಚ್ಚಿ ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ ಎಂದರು.
ಅಂಬಲ ಮಹಿಳಾ ಸಮಾಜ ಅಧ್ಯಕ್ಷ ಅಪ್ಪುಮಣಿಯ0ಡ ಡೇಸಿ ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಸುಬೇದಾರ್ ಮೇಜರ್ ಬಾಳೆಯಡ ಅಪ್ಪಣ್ಣ (ಅಪ್ಪಾಜಿ), ಟ್ರೋಫಿ ದಾನಿ ಕೋಟೆರ ಪುಷ್ಪ ಚಂಗಪ್ಪ, ಮಣವಟ್ಟೀರ ಕಮಲ ಬೆಳ್ಳಿಯಪ್ಪ, ಮಾಳೆಯoಡ ಮೀನಾ ಅಪ್ಪಾಜಿ, ಮುಕ್ಕಾಟಿರ ಶ್ವೇತಾ ರಾಜಪ್ಪ, ಮಹಿಳಾ ಸಮಾಜದ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು. ಮಣವಟ್ಟೀರ ಜಾನ್ಸಿ ತಿಮ್ಮಯ್ಯ ಪ್ರಾರ್ಥಿಸಿದರು. ಅಪ್ಪುಮಣಿಯಂಡ ಡೇಸಿ ಸೋಮಣ್ಣ ಸ್ವಾಗತಿಸಿದರು. ಅಮಿತಾ ನವೀನ್ ನಿರೂಪಿಸಿದರು. ಮೀರಾ ಬಿದ್ದಪ್ಪ ವಂದಿಸಿದರು.
ಇದೇ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಮಹಿಳಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ವರದಿ : ದುಗ್ಗಳ ಸದಾನಂದ









