ಮಡಿಕೇರಿ ಅ.17 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಮಡಿಕೇರಿ ವತಿಯಿಂದ ಪೊನ್ನಂಪೇಟೆ ತಾಲ್ಲೂಕು ಗೋಣಿಕೊಪ್ಪ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಆಯುಷ್ಮಾನ್ ಭವ ಕಾರ್ಯಕ್ರಮದ ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ, ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯ್ತಿ ಇವರ ಸಂಯುಕ್ತ ಆಶ್ರಯದಲ್ಲಿ ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ನಡೆಯಿತು.
ಈ ಶಿಬಿರದಲ್ಲಿ ಸಾಮಾನ್ಯ ವೈದಶಾಸ್ತ್ರ, ಶಸ್ತ್ರಚಿಕಿತ್ಸೆ, ಕಣ್ಣು, ಪ್ರಸೂತಿ ಮತ್ತು ಸ್ತ್ರೀ ರೋಗ, ಮಕ್ಕಳ, ಚರ್ಮ ರೋಗ, ಕಿವಿ ಮೂಗು ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವೈದ್ಯಕೀಯ, ದಂತ, ಮಾನಸಿಕ ರೋಗ, ಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವೈದ್ಯರು ವೈದ್ಯಕೀಯ ಸೇವೆಯನ್ನು ನೀಡಲಾಯಿತು.
ಶಿಬಿರದಲ್ಲಿ ಸುಮಾರು 300 ಕ್ಕಿಂತ ಹೆಚ್ಚು ಹೊರ ರೋಗಿಗಳು ವ್ಯೆದ್ಯರ ಭೇಟಿ, 26 ಯುಡಿಐಡಿ ಕಾರ್ಡ್ಗಳು, 150 ಕ್ಕಿಂತ ಹೆಚ್ಚಿನ ಜನರು ಸಾಂಕ್ರಾಮಿಕ ರೋಗಗಳ ಪರೀಕ್ಷೆಯನ್ನು ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಕಲ್ಪಿಸಿಕೊಡಲಾಯಿತು ಹಾಗೂ ಹೆಚ್ಚಿನ ಚಿಕಿತ್ಸೆಗೆ ವೈದ್ಯಕೀಯ ಕಾಲೇಜು ಮಡಿಕೇರಿಗೆ 34 ರೋಗಿಗಳನ್ನು ಶಿಫಾರಸ್ಸು ಮಾಡಲಾಗಿದೆ.
ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಗೋಣಿಕೊಪ್ಪ ಗ್ರಾ.ಪಂ.ಅಧ್ಯಕ್ಷರಾದ ಸೌಮ್ಯ ಬಾಲು ಅವರು ಗೋಣಿಕೊಪ್ಪದ ಸುತ್ತಮುತ್ತ ಹಲವು ಹಾಡಿಗಳು ಹಾಗೂ ಹೆದ್ದಾರಿಯ ಪಕ್ಕದಲ್ಲಿ ಇದೆ. ಈ ಸ್ಥಳದಲ್ಲಿ ಹೆಚ್ಚಿನ ಆರೋಗ್ಯ ಶಿಬಿರಗಳು ನಡೆದ ಪಕ್ಷದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ ಅವರು ಮಾತನಾಡಿ ಪ್ರಧಾನಮಂತ್ರಿ ಅವರು ಆಯುಷ್ಮಾನ್ ಭವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಸೆಪ್ಟೆಂಬರ್ನಿಂದ ಡಿಸೆಂಬರ್ ತಿಂಗಳವರೆಗೂ ಜಿಲ್ಲೆಯ ವಿವಿಧ ಕಡೆ ಆರೋಗ್ಯ ಕಾರ್ಯಕ್ರಮಗಳು ಹಾಗೂ ಶಿಬಿರಗಳನ್ನು ಆಯೋಜನೆ ಮಾಡಿ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ಒದಗಿಸುವುದು ಪ್ರಮುಖ ಉದ್ದೇಶವಾಗಿದೆ ಎಂದರು.
ಆರೋಗ್ಯ ಶಿಬಿರಗಳನ್ನು ನಡೆಸುವುದರಿಂದ ಈ ಭಾಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ಸಂಸ್ಥೆಯ ಉದ್ದೇಶ ಹಾಗೂ ಈ ಶಿಬಿರದಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆ ಬೇಕಾದಲ್ಲಿ ವೈದ್ಯಕೀಯ ಕಾಲೇಜು ಬೋಧಕ ಆಸ್ಪತ್ರೆ ಮಡಿಕೇರಿಗೆ ಬರಲು ಸಂಸ್ಥೆಯ ವೈದ್ಯರು ತಿಳಿಸಿದಲ್ಲಿ ಮಡಿಕೇರಿಯ ಟೋಲ್ ಗೇಟ್ ಬಳಿ ಇರುವ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಬಂದು ಹೆಚ್ಚಿನ ಚಿಕಿತ್ಸೆಯನ್ನು ಪಡೆದುಕೊಳ್ಳಲು ತಿಳಿಸಿದರು.
ಹಾಗೆಯೇ ಬರುವ ಸಂದರ್ಭದಲ್ಲಿ ಆಯುಷ್ಮಾನ್ ಕಾರ್ಡ್/ ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್ಗಳನ್ನು ತಂದರೆ ಎಲ್ಲಾ ರೀತಿಯ ಪರೀಕ್ಷೆ ಹಾಗೂ ಚಿಕಿತ್ಸೆಗಳು ಉಚಿತವಾಗಿ ದೊರೆಯುವುದು. ಈ ವಿಷಯವನ್ನು ತಮ್ಮ ವ್ಯಾಪ್ತಿಯ ಸುತ್ತಮುತ್ತಲಿನ ಎಲ್ಲಾ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ವಿರಾಜಪೇಟೆ ತಾಲ್ಲೂಕು ಆರೋಗ್ಯಧಿಕಾರಿ ಡಾ.ಯತಿರಾಜ್ ಮಾತನಾಡಿ ತಾಲ್ಲೂಕಿನಲ್ಲಿ ಪ್ರತಿ ಮಂಗಳವಾರ ತಜ್ಞ ವೈದ್ಯರು ಹಾಗೂ ಆಸ್ಪತ್ರೆಯಲ್ಲಿ ಲಭ್ಯವಿರುವ ವೈದ್ಯರೊಂದಿಗೆ ತಾಲ್ಲೂಕಿನ ಎಲ್ಲಾ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು/ ಪ್ರಾಥಮಿಕ/ ಸಮುದಾಯ/ ತಾಲ್ಲೂಕು/ ಆಸ್ಪತ್ರೆಗಳಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸುತ್ತಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಹಾಗೂ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಇದ್ದು ಪಡಿತರ ಚೀಟಿ ಆಧಾರ್ ಕಾರ್ಡ್ ನೀಡಿ ಚಿಕಿತ್ಸೆ ಪಡೆಯಬಹುದು ಎಂದು ತಿಳಿಸಿದರು.
ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಗ್ರೀಷ್ಮ ಅವರು ಮಾತನಾಡಿ ಆಸ್ಪತ್ರೆ ವ್ಯಾಪ್ತಿಯಲ್ಲಿ ಹಾಡಿಗಳು ಮತ್ತು ತೋಟದ ಕಾರ್ಮಿಕರು ಹೆಚ್ಚಾಗಿ ಇರುವುದರಿಂದ ಈ ರೀತಿಯ ಆರೋಗ್ಯ ಶಿಬಿರಗಳು ತುಂಬಾ ಪ್ರಯೋಜನಕಾರಿಯಾಗಲಿದೆ ಹಾಗೂ ಈ ಶಿಬಿರದ ಸದುಪಯೋಗವನ್ನು ಸರ್ವರು ಪಡೆದುಕೊಳ್ಳಲು ಕೋರಿದರು ಹಾಗೂ ಎಲ್ಲರನ್ನು ಸ್ವಾಗತಿಸಿದರು.
ಈ ಶಿಬಿರದಲ್ಲಿ ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆಯ ವತಿಯಿಂದ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ, ಉಚಿತ ಆಯುಷ್ಮಾನ್ ಕಾರ್ಡ್ ಗಳ ನೋಂದಣಿ, ಉಚಿತ ಯುಡಿಐಡಿ ನೋಂದಣಿ, ದೇಹದಾನ, ನೇತ್ರದಾನ, ಅಂಗಾಂಗ ದಾನ ಕುರಿತು ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ಆರೋಗ್ಯ ಮಿತ್ರರಾದ ದಿನೇಶ್ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ 39 ಜನ ಅಂಗಾಗ ದಾನ ನೋಂದಣಿ ಮಾಡಿಸಿದರು.
ಈ ಸಂದರ್ಭದಲ್ಲಿ ಸಾಮಾನ್ಯ ವೈದ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಲೋಕೇಶ್, ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ್ ಇಎನ್ಟಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಸತ್ಯಾಕ್ಷಿ, ಕೀಲು ಮೂಳೆ ವಿಭಾಗದ ಡಾ.ಶ್ರೀಧರ್, ಸಾಮಾನ್ಯ ವೈದ್ಯ ವಿಭಾಗದ ಡಾ.ರಾಜೇಶ್, ಕಣ್ಣಿನ ವಿಭಾಗದ ಡಾ.ವಿಕ್ರಂ, ಸಮುದಾಯ ವೈದ್ಯಶಾಸ್ತ್ರದ ಡಾ. ನರಸಿಂಹ ಹಾಗೂ ವೈದ್ಯಕೀಯ ಕಾಲೇಜಿನ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ಅರೆ ವೈದ್ಯಕೀಯ ವಿದ್ಯಾರ್ಥಿಗಳು, ಸಿಬ್ಬಂದಿಗಳು, ಸಮುದಾಯ ಆರೋಗ್ಯ ಕೇಂದ್ರ ಗೋಣಿಕೊಪ್ಪ ವೈದ್ಯರು ಹಾಗೂ ಸಿಬ್ಬಂದಿಗಳು, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಿಬ್ಬಂದಿಗಳು, ಗೋಣಿಕೊಪ್ಪ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಾರ್ವಜನಿಕರು, ರೋಗಿಗಳು, ಮಾಧ್ಯಮ ಮಿತ್ರರು ಭಾಗವಹಿಸಿದ್ದರು. ಹಿರಿಯ ವೈದ್ಯಾಧಿಕಾರಿ ಡಾ.ಸುರೇಶ್ ವಂದಿಸಿದರು.









