ಮಡಿಕೇರಿ ಅ.29 : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತತ್ತೆ ಬೇಡಿಕೆಯನ್ವಯ 2ನೇ ರಾಜ್ಯ ಮರು ಸಂಘಟನೆ ಆಯೋಗ ರಚಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ.1 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸುವುದಾಗಿ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಳಗ್ಗೆ 10.30 ಗಂಟೆಯಿಂದ ಒಂದು ಗಂಟೆ ಕಾಲ ಧರಣಿ ನಡೆಸಿ ಜಿಲ್ಲಾಡಳಿತದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ 9 ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ಸಲ್ಲಿಸುವ ಮೂಲಕ
ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಮಾಜಿ ಕೇಂದ್ರ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಕೊಡವ ಲ್ಯಾಂಡ್ ಪರವಾಗಿ ಆಯೋಗವೊಂದನ್ನು ರಚಿಸಬೇಕೆಂದು ಪ್ರತಿಪಾದಿಸಿದ್ದಾರೆ. ಸರ್ಕಾರಗಳು ಈ ಪ್ರಸ್ತಾಪವನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಅತ್ಯಂತ ಸೂಕ್ಷ್ಮ ಬುಡಕಟ್ಟು ಜನಾಂಗವಾಗಿರುವ ಕೊಡವರಿಗೆ ಸಾಂವಿಧಾನಿಕ ಭದ್ರತೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಸಂವಿಧಾನದ 7 ನೇ ತಿದ್ದುಪಡಿಯಲ್ಲಿ ಪ್ರತಿಪಾದಿಸಲಾದ ರಾಜ್ಯಗಳ ಮರು-ಸಂಘಟನಾ ಕಾಯಿದೆ 1956 ರ ಒಪ್ಪಂದಗಳಿಗೆ ರಾಜ್ಯವು ಬದ್ಧವಾಗಿಲ್ಲ. “ಸಿ” ರಾಜ್ಯವಾಗಿದ್ದ ಕೂರ್ಗ್ 1956ರಲ್ಲಿ ಕರ್ನಾಟಕದೊಂದಿಗೆ ವಿಲೀನವಾದ ನಂತರ ಕೊಡವರನ್ನು ರಾಜ್ಯದ 2ನೇ ದರ್ಜೆಯ ವರ್ಣಭೇದ ನೀತಿಯ ನಾಗರಿಕರಂತೆ ಪರಿಗಣಿಸಲಾಗಿದೆ. ಇದು ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ನಾಚಪ್ಪ ಆರೋಪಿಸಿದ್ದಾರೆ.
ಕೊಡವರು ಕೊಡವ ಪ್ರದೇಶದ ಮೂಲನಿವಾಸಿ ಸ್ಥಳೀಯ ಬುಡಕಟ್ಟು ಜನರಾಗಿರುವುದರಿಂದ ಆಂತರಿಕ ರಾಜಕೀಯ-ಸ್ವಯಂ-ನಿರ್ಣಯದ ಹಕ್ಕುಗಳು, ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ ಸೇರಿದಂತೆ 9 ನ್ಯಾಯಸಮ್ಮತವಾದ ಬೇಡಿಕೆಗಳ ಬಗ್ಗೆ ಧರಣಿಯಲ್ಲಿ ಗಮನ ಸೆಳೆಯಲಾಗುತ್ತದೆ.
ಸಿಎನ್ಸಿ ಸದಸ್ಯರು ಹಾಗೂ ಕೊಡವ, ಕೊಡವತಿಯರು ಸಾಂಪ್ರದಾಯಿಕ ಕೊಡವ ಉಡುಪಿನಲ್ಲಿ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.








