ಮಡಿಕೇರಿ ನ.17 : ಕಳೆದ ಅನೇಕ ವರ್ಷಗಳಿಂದ ಲೈನ್ ಮನೆಗಳಲ್ಲಿ ಸಂಕಷ್ಟದ ಜೀವನ ನಡೆಸುತ್ತಿರುವ ಬಡ ಕಾರ್ಮಿಕ ವರ್ಗಕ್ಕೆ ಸರ್ಕಾರ ಶೀಘ್ರ ವಸತಿ ಸೌಲಭ್ಯ ಕಲ್ಪಿಸದಿದ್ದಲ್ಲಿ ಕೊಡಗು ಜಿಲ್ಲೆಯಲ್ಲಿರುವ ಎಲ್ಲಾ ಕಾರ್ಮಿಕರು ಒಗ್ಗೂಡಿ ಬೃಹತ್ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಎಐಟಿಯುಸಿ ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಎಚ್ಚರಿಕೆ ನೀಡಿದ್ದಾರೆ.
ಸೋಮವಾರಪೇಟೆ ತಾಲ್ಲೂಕಿನ ಹರದೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಎಐಟಿಯುಸಿ ಸಂಘಟನೆ ವತಿಯಿಂದ ನಿವೇಶನ ಮತ್ತು ವಸತಿ ರಹಿತ ಕಾರ್ಮಿಕರೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೃಷಿ ಕಾರ್ಮಿಕರು ಸ್ವಂತ ನಿವೇಶನ ಮತ್ತು ಮನೆ ಇಲ್ಲದೆ ಲೈನ್ ಮನೆಗಳಲ್ಲಿ ಸಂಕಷ್ಟದ ಜೀವನ ಸಾಗಿಸುತ್ತಿದ್ದಾರೆ. ಸ್ವಂತ ಮನೆಯನ್ನು ಒದಗಿಸಿಕೊಡಿ ಎಂದು ಕಳೆದ ಅನೇಕ ವರ್ಷಗಳಿಂದ ಹೋರಾಟಗಳನ್ನು ನಡೆಸಿಕೊಂಡು ಬಂದಿದ್ದರೂ ಇಲ್ಲಿಯವರೆಗೆ ಯಾವುದೇ ಸರ್ಕಾರಗಳು ಬಡವರ ಕೂಗಿಗೆ ಸ್ಪಂದಿಸಿಲ್ಲ. ಜಿಲ್ಲೆಯಲ್ಲಿ ಸಾಕಷ್ಟು ಸರ್ಕಾರಿ ಪೈಸಾರಿ ಭೂಮಿ ಇದ್ದರೂ ಇದು ಉಳ್ಳವರ ಪಾಲಾಗುತ್ತಿದೆಯೇ ಹೊರತು ಬಡ ಕೂಲಿ ಕಾರ್ಮಿಕರಿಗೆ ಹಂಚಿಕೆ ಮಾಡುವ ಕಾಳಜಿಯನ್ನು ಜನಪ್ರತಿನಿಧಿಗಳು ತೋರುತ್ತಿಲ್ಲವೆಂದು ಸೋಮಪ್ಪ ಆರೋಪಿಸಿದರು.
ಈಗಿನ ಸರ್ಕಾರವೂ ನಮ್ಮ ಬೇಡಿಕೆಯನ್ನು ಈಡೇರಿಸಲು ಮುಂದಾಗದಿದ್ದಲ್ಲಿ ನಿರಂತರ ಹೋರಾಟ ಅನಿವಾರ್ಯವಾಗುತ್ತದೆ. ಆದ್ದರಿಂದ ಜಿಲ್ಲೆಯ ನೂತನ ಶಾಸಕರುಗಳು ಆದಷ್ಟು ಶೀಘ್ರ ಬಡ ಕೃಷಿ ಕಾರ್ಮಿಕರಿಗೆ ಸ್ವಂತ ನಿವೇಶನ ಅಥವಾ ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಎಐಟಿಯುಸಿ ತಾಲ್ಲೂಕು ಕಾರ್ಯದರ್ಶಿ ಶಬಾನ, ಹೋಬಳಿ ಅಧ್ಯಕ್ಷ ಸೋಮ, ಪ್ರಮುಖರಾದ ರಮೇಶ್, ಸುಂದರ ಮತ್ತಿತರ ಕಾರ್ಯಕರ್ತರು ಹಾಗೂ ನಿವೇಶನ ಮತ್ತು ವಸತಿ ರಹಿತರು ಸಭೆಯಲ್ಲಿ ಪಾಲ್ಗೊಂಡಿದ್ದರು.










