ಮಡಿಕೇರಿ ನ.26 : ಭಾರತೀಯ ಸಂವಿಧಾನ ದೇಶದ ಜನರ ಆಶೋತ್ತರಗಳಿಗೆ ಪೂರಕವಾಗಿ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕೊಡಗು ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಜಿ.ಉಮಾ ತಿಳಿಸಿದ್ದಾರೆ.
ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಡಿಕೇರಿ ವಕೀಲರ ಸಂಘದ ವತಿಯಿಂದ ನಡೆದ ಜಿಲ್ಲಾ ಮಟ್ಟದ ವಕೀಲರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾ ವಿಧಿ ಭೋದಿಸಿ ಅವರು ಮಾತನಾಡಿದರು. ಭಾರತದ ಸಂವಿಧಾನ ಸದಾ ನಮ್ಮೊಂದಿಗೆ ಇರುವ ಜೀವಂತಿಕೆಯಾಗಿದೆ. ಭಾರತದ ಪ್ರತಿಯೋರ್ವ ನಾಗರೀಕನ ಆಶೋತ್ತರಗಳಿಗೂ ಸ್ಪಂದಿಸುವ ಶಕ್ತಿ ಸಂವಿಧಾನಕ್ಕೆ ಇದೆ ಎಂದು ಹೇಳಿದರು.
ಕೊಡಗಿನ ಕ್ರೀಡಾಪಟುಗಳು ತಮ್ಮ ಕ್ರೀಡಾ ಸಾಧನೆಯ ಮೂಲಕ ಖ್ಯಾತಿ ಪಡೆದು ಜಿಲ್ಲೆಯ ಕ್ರೀಡಾಹಿರಿಮೆಯನ್ನು ಹೆಚ್ಚಿಸಿದ್ದಾರೆ. ಇದೀಗ ವಕೀಲರು ಕೂಡ ಕ್ರೀಡಾಕೂಟದಲ್ಲಿ ಪಾಲ್ಗೊಂಡು ತಮ್ಮ ಕ್ರೀಡಾಪ್ರತಿಭೆಯನ್ನು ಬೆಳಕಿಗೆ ತರುತ್ತಿರುವುದು ಶ್ಲಾಘನೀಯ ಬೆಳವಣಿಗೆಯಾಗಿದೆ ಎಂದು ಉಮಾ ಹೇಳಿದರು.
ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಮಾತನಾಡಿ, 1949 ರ ನವಂಬರ್ 26 ರಂದು ಅಂಗೀಕರಿಸಲ್ಪಟ್ಟು, 1950 ನೇ ಜನವರಿ 26 ರಂದು ಜಾರಿಗೆ ಬಂದ ಭಾರತದ ಸಂವಿಧಾನವು ಜಗತ್ತಿನಲ್ಲಿಯೇ ಶ್ರೇಷ್ಠತೆಯನ್ನು ಪಡೆದಿದೆ. ಈ ಸಂವಿಧಾನ ರೂಪಿಸಿದ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲಬೇಕು. ಕಾಲದಿಂದ ಕಾಲಕ್ಕೆ ಅಗತ್ಯವಾದ ಬದಲಾವಣೆಗಳು ಸಂವಿಧಾನದಲ್ಲಿ ಆಗುತ್ತಿದ್ದು, ಇಲ್ಲಿಯವರೆಗೆ 128 ಬಾರಿ ತಿದ್ದುಪಡಿ ಮಾಡಲಾಗಿದೆ. ಈ ವರ್ಷ ಸಂಸತ್ ನಲ್ಲಿ ಶೇ.33 ರಷ್ಟು ಮಹಿಳಾ ಸದಸ್ಯೆಯರಿಗೆ ಅವಕಾಶ ಕಲ್ಪಿಸುವ ಮಸೂದೆಯನ್ನೂ ಜಾರಿಗೊಳಿಸಿ ಸಂವಿಧಾನಕ್ಕೆ ತಿದ್ದುಪಡಿ ತರಲಾಗಿದೆ. ಭಾರತದಲ್ಲಿ ಎಲ್ಲರೂ ಸಮಾನರು ಎಂದು ಈ ಮೂಲಕ ಸಾರಲಾಗಿದೆ ಎಂದು ತಿಳಿಸಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹೆಚ್.ಸಿ.ಶ್ಯಾಮ್ ಪ್ರಸಾದ್ ಮಾತನಾಡಿ, ಜೀವನದಲ್ಲಿ ಸೋಲು ಗೆಲವುಗಳನ್ನು ಸಮಾನಾಗಿ ಸ್ವೀಕರಿಸಬೇಕು ಎಂಬ ಸಂದೇಶ ಕ್ರೀಡಾಸ್ಪರ್ಧೆಗಳಲ್ಲಿ ಅಡಕವಾಗಿದೆ. ಮಾನಸಿಕ ಮತ್ತು ದೈಹಿಕ ನೆಮ್ಮದಿಗೆ ಕ್ರೀಡೆಗಳು ಸಹಕಾರಿಯಾಗಿದೆ ಎಂದರು.
ರಾಜ್ಯದ ಮಾಜಿ ಕಾನೂನು ಸಚಿವ ಎಂ.ಸಿ.ನಾಣಯ್ಯ ಮಾತನಾಡಿ, ವಕೀಲರು ಸಮಾಜದ ಒಗ್ಗಟ್ಟಿಗೆ ಸದಾ ಕಾಯೋನ್ಮುಖರಾಗಿರಬೇಕು ಎಂದು ಕರೆ ನೀಡಿದರು.
ಕ್ರೀಡೆ ಮಾನಸಿಕ ಚೈತನ್ಯ ಮತ್ತು ಬೆಳವಣಿಗೆಗೆ ಸಹಕಾರಿಯಾಗಿದೆ ಮಡಿಕೇರಿಯ ಜಿಲ್ಲಾ ಕ್ರೀಡಾಂಗಣ ದೇಶಕ್ಕೆ ಅನೇಕ ಪ್ರತಿಭಾವಂತ ಕ್ರೀಡಾಪಟುಗಳನ್ನು ಕೊಡುಗೆಯಾಗಿ ನೀಡಿದ ಹಿರಿಮೆಗೆ ಪಾತ್ರವಾಗಿದೆ ಎಂದು ಸ್ಮರಿಸಿಕೊಂಡರು.
ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಮಾತನಾಡಿ, ನ್ಯಾಯಮಂಡನೆಯಲ್ಲಿ ಸದಾ ಕ್ರಿಯಾಶೀಲರಾಗಿ ಒತ್ತಡದಲ್ಲಿಯೇ ಕಾರ್ಯನಿರ್ವಹಿಸುವ ವಕೀಲ ವೃಂದದವರಿಗೆ ಕ್ರೀಡಾಕೂಟದ ಮೂಲಕ ಕೊಂಚ ಹಗುರವಾಗಿಸುವ ಪ್ರಯತ್ನ ಮಾಡಿದ್ದೇವೆ. ಇದೇ ಮೊದಲ ಬಾರಿಗೆ ಮಡಿಕೇರಿ ವಕೀಲರ ಸಂಘದಿಂದ ಜಿಲ್ಲೆಯ ಎಲ್ಲಾ ವಕೀಲರಿಗಾಗಿ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿದ್ದೇವೆ ಎಂದರು.
ರಾಷ್ಟ್ರೀಯ ಕ್ರೀಡಾಪಟುಗಳಾದ ಕೆಚ್ಚೆಟೀರ ಕೆ.ರೇಷ್ಮ ಹಾಗೂ ಎ.ಜಿ.ಪರ್ಲಿನ್ ಪೆಮ್ಮಯ್ಯ ಕ್ರೀಡಾಜ್ಯೋತಿಯನ್ನು ಕ್ರೀಡಾಂಗಣಕ್ಕೆ ತಂದರು.
ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಪ್ರಶಾಂತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಸಿವಿಲ್ ನ್ಯಾಯಾಧೀಶರಾದ ಎನ್.ಬಿ.ಜಯಲಕ್ಷಿ, ಪ್ರಿನ್ಸಿಪಾಲ್ ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಮುನಿರತ್ಮಮ್ಮ, ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಧೀಶ ನಾಗೇಶ್, ವೀರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಕೆ.ಜಿ.ಅಪ್ಪಣ್ಣ, ಕುಶಾಲನಗರದ ಅಧ್ಯಕ್ಷ ಆರ್.ಕೆ.ನಾಗೇಂದ್ರ ಬಾಬು, ಸೋಮವಾರಪೇಟೆ ಅಧ್ಯಕ್ಷ ವಿಠಲ ಕಾಟ್ನಮನೆ, ಪೊನ್ನಂಪೇಟೆ ಅಧ್ಯಕ್ಷ ಮುತ್ತಪ್ಪ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ಎಂ.ಕೇಶವ, ಉಪಾಧ್ಯಕ್ಷ ಎಂ.ಪಿ.ನಾರಗಾಜ್. ಖಜಾಂಜಿ ಜಿ.ಆರ್.ರವಿಶಂಕರ್, ಜಂಟಿ ಕಾರ್ಯದರ್ಶಿ ಪವನ್ ಪೆಮ್ಮಯ್ಯ, ಕ್ರೀಡಾಸಮಿತಿ ಸಂಚಾಲಕ ದುಗ್ಗಳ ಕಪಿಲ್ ಕುಮಾರ್ ಉಪಸ್ಥಿತರಿದ್ದರು.
ಜಿಲ್ಲೆಯ ವಿವಿಧ ಭಾಗಗಳ ನೂರಾರು ವಕೀಲರು ವೈವಿಧ್ಯಮಯ ಕ್ರೀಡಾಸ್ಪರ್ಧೆಗಳಲ್ಲಿ ಪಾಲ್ಗೊಂಡು ಗಮನ ಸೆಳೆದರು.












