ಮಡಿಕೇರಿ ಡಿ.13 : ವಿರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ “ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಬೆಳೆಸಿ” ಎಂಬ ದ್ಯೇಯ ವಾಕ್ಯದಡಿಯಲ್ಲಿ ವಿರಾಜಪೇಟೆ ನಗರದಲ್ಲಿ ಮಹಿಳಾ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.
ವಿರಾಜಪೇಟೆ ಚೌಕಿಯಲ್ಲಿ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಈ ಬೇಟಿ ಬಚಾವ್ ಬೇಟಿ ಪಡಾವ್ ಎಂಬುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.
ಈ ಸಂದರ್ಭ ಪಶು ವೈದ್ಯಾಧಿಕಾರಿ ಡಾ.ರಾಕೇಶ್ ಮಾತನಾಡಿ, ಹೆಣ್ಣು ಮಕ್ಕಳು ಮನೆಯಲ್ಲಿ ಕೆಲಸ ಮಾಡಲು ಮಾತ್ರ ಅಲ್ಲ, ಅವರು ಎಲ್ಲಾ ಕ್ಷೇತ್ರದಲ್ಲೂ ಮುಂದಿದ್ದಾರೆ ಎಂದು ತಿಳಿಸಿದರು.
ನಂತರ ವಿರಾಜಪೇಟೆಯ ಗಡಿಯಾರ ಕಂಬದ ಬಳಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿರಾಜಪೇಟೆ ಪುರಸಭೆ ಸದಸ್ಯ ಮೊಹಮದ್ ರಾಫಿ, ಹೆಣ್ಣು ಮಕ್ಕಳ ಮೇಲಿನ ಶೋಷಣೆಯನ್ನು ನಿಲ್ಲಿಸಿ, ಅವರಿಗೆ ಶಿಕ್ಷಣವನ್ನು ನೀಡಿ. ಶಿಕ್ಷಣವನ್ನು ನೀಡಿದಾಗ ಅವರು ಎಲ್ಲಾ ರೀತಿಯಲ್ಲಿಯೂ ಮುಂದೆ ಬರಲು ಸಾಧ್ಯವಾಗುತ್ತದೆ ಎಂದರು. ಮಾತ್ರವಲ್ಲದೆ ಮಹಿಳಾ ಜಾಗೃತಿಯ ವಿಭಿನ್ನ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದರು.
ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಗೀತಾ ಹೆಣ್ಣು ಮಕ್ಕಳ ಸ್ವ ರಕ್ಷಣೆಯ ಬಗ್ಗೆ ಅರಿವು ಮೂಡಿಸಿದರು. ಹೆಣ್ಣು ಮಕ್ಕಳು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಪೊಲೀಸ್ ಠಾಣೆಯ ಸಹಾಯಕ ದೂರವಾಣಿ ಸಂಖ್ಯೆಯಾದ 112 ಗೆ ಕರೆ ಮಾಡಿ ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಲಿಟಲ್ ಸ್ಕಾಲರ್ಸ್ ಸಂಸ್ಥೆಯ ಮುಖ್ಯಸ್ಥೆ ಹಾಗೂ ಉದ್ಯಮಿ ಪೂಜಾ ರವೀಂದ್ರ ಮಾತನಾಡಿ, ನಮ್ಮ ವಿದ್ಯಾಸಂಸ್ಥೆಯಿಂದ ಹತ್ತು ಹಲವು ಕಾರ್ಯಕ್ರಮ ನಡೆಸುತ್ತಿದ್ದು, ಈ ಕಾರ್ಯಕ್ರಮವು ವಿನೂತನ ಕಾರ್ಯಕ್ರಮವಾಗಿದೆ ಎಂದರು.
ಮಹಿಳಾ ಸಬಲೀಕರಣದ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮಹಿಳೆಯರು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆನ್ನುವುದೇ ಇದರ ಉದ್ದೇಶ ಎಂದರು.
ಈ ಸಂದರ್ಭ ಶಾಲೆಯ ವತಿಯಿಂದ ಸಾರ್ವಜನಿಕರಿಗೆ ಸುಕನ್ಯಾ ಸಮೃದ್ಧಿ ಯೋಜನೆಯ ಮಾಹಿತಿಯನ್ನು ನೀಡಲಾಯಿತು. ಮತ್ತು ಅರ್ಜಿಗಳನ್ನು ವಿತರಿಸಲಾಯಿತು. ಲಿಟಲ್ ಸ್ಕಾಲರ್ಸ್ ಶಾಲಾ ಶಿಕ್ಷಕರು, ಶಾಲಾ ಮಕ್ಕಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.









