ನಾಪೋಕ್ಲು ಡಿ.20 : ಬೇತು ಗ್ರಾಮದ ಮಕ್ಕಿ ಶಾಸ್ತಾವು ದೇವರ ವಾರ್ಷಿಕ ಉತ್ಸವ ಎರಡು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಜರುಗಿತು.
ದೇವಾಲಯದ ಆವರಣದಲ್ಲಿ ನಡೆದ ಎರಡು ಪ್ರಮುಖ ಕೋಲಗಳೊಂದಿಗೆ ಉತ್ಸವ ಸಂಪನ್ನಗೊಂಡಿತು.
ಮಕ್ಕಿ ಶಾಸ್ತಾವು ಸನ್ನಿಧಿಯಲ್ಲಿ ಅಜ್ಜಪ್ಪ ಕೋಲ ಹಾಗೂ ವಿಷ್ಣುಮೂರ್ತಿ ಕೋಲಗಳು ತಮ್ಮ ಸಾಂಪ್ರದಾಯಿಕ ವೇಷಭೂಷಣಗಳೊಂದಿಗೆ ಮೇಲೇರಿ (ಕೆಂಡಸೇವೆ) ಗಮನ ಸೆಳೆದವು.
ವಿವಿಧ ಗ್ರಾಮಗಳಿಂದ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿವಿಧ ರೀತಿಯ ಹರಕೆ, ಸೇವೆಗಳನ್ನು ಅರ್ಪಿಸಿದರು.
ದೇವಾಲಯದ ವತಿಯಿಂದ ಉತ್ಸವ ವೀಕ್ಷಿಸಲು ಬಂದ ಭಕ್ತರಿಗೆ ಅನ್ನದಾನ ನಡೆಯಿತು.
ಉತ್ಸವದ ಅಂಗವಾಗಿ 16 ಶನಿವಾರ ದಂದು ಹರಕೆಯ ನಾಯಿ ಒಪ್ಪಿಸಲಾಯಿತು. ಕೊಟ್ಟಿ ಹಾಡಿ, ದೀಪಾರಾಧನೆ, ತೆರೆ ಹಾಗೂ 19,ಮಂಗಳವಾರ ದಂದು ವಿವಿಧ ಭೂತಾರಾಧನೆ ಹಾಗೂ ಮೇಲೇರಿ ವಾರ್ಷಿಕ ಹಬ್ಬ ನಡೆಯಿತು.
ದೇವಾಲಯದ ಅರ್ಚಕ ಮಕ್ಕಿ ದಿವಾಕರ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭ ದೇವಾಲಯದ ತಕ್ಕ ಮುಖ್ಯಸ್ಥರು ಆಡಳಿತ ಮಂಡಳಿ ಹಾಗೂ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಉತ್ಸವದಲ್ಲಿ ಶಾಸಕ ಎ.ಎಸ್ ಪೊನ್ನಣ್ಣ: ಮಕ್ಕಿ ಶಾಸ್ತಾವು ದೇವರ ವಾರ್ಷಿಕ ಉತ್ಸವದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಭಾಗವಹಿಸಿತರು. ಈ ಸಂದರ್ಭ ದೇವರ ಅಭಯ ಕಾರ್ನಿಕ ನುಡಿಯ ಮೂಲಕ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು , ಈ ಶ್ರೀ ಕ್ಷೇತ್ರ ಅತ್ಯಂತ ಪುರಾತನ ಇತಿಹಾಸ ಹೊಂದಿರುವ ಶ್ರದ್ಧಾ ಕೇಂದ್ರವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ತಮ್ಮ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂಬ ನಂಬಿಕೆಯಿಂದ ಆಗಮಿಸುತ್ತಾರೆ. ಇಲ್ಲಿಯ ವ್ಯವಸ್ಥೆ ಕೂಡ ಉತ್ತಮವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವರದಿ : ದುಗ್ಗಳ ಸದಾನಂದ










