ವಿರಾಜಪೇಟೆ ಜ.2 : ಗ್ರಾಮೀಣ ಕ್ರೀಡಾ ಪ್ರತಿಭೆಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವುದರ ಮೂಲಕ ನಮ್ಮ ನಾಡಿನ ಕೀರ್ತಿ ಪತಾಕೆಯನ್ನು ಹಾರಿಸಬೇಕು ಎಂದು ಅಂತರಾಷ್ಟ್ರೀಯ ಅಥ್ಲೇಟ್ ಮಾರಮಾಡ ಮಾಚಮ್ಮ ಹೇಳಿದರು.
ವಿರಾಜಪೇಟೆಯ ರೋಟರಿ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕ್ರೀಡಾ ಜ್ಯೋತಿಯನ್ನು ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಪರಿಸರವೇ ವಿದ್ಯಾರ್ಥಿಗಳು ಕ್ರೀಡಾ ಪ್ರತಿಭೆ ಮೆರೆಯಲು ಪೂರಕ. ದೈಹಿಕವಾಗಿ ಸಮರ್ಥರಿರುವ ಇವರಿಗೆ ಸೂಕ್ತ ತರಬೇತಿ, ಮಾರ್ಗದರ್ಶನ ನೀಡಿದರೆ ಅದ್ವಿತೀಯ ಸಾಧನೆ ಮಾಡಬಲ್ಲರು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಅನುಕೂಲಕರ ವಾತಾವರಣ ಇದೆ. ಅಲ್ಲದೇ, ದೈಹಿಕ ಶಿಕ್ಷಣ, ಶಿಕ್ಷಕರು ಅತ್ಯಂತ ಆಸಕ್ತಿ, ಶ್ರದ್ಧೆಯಿಂದ ಕಲಿಸುತ್ತಿದ್ದಾರೆ. ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೋಷಕರು ಹೆಚ್ಚು ಪ್ರೋತ್ಸಾಹ ನೀಡಬೇಕು. ಮಕ್ಕಳಿಗೆ ಸೌಲಭ್ಯದ ಕೊರತೆಯಾಗದಂತೆ ಶಿಕ್ಷಕರು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ ಮಾತನಾಡಿ, ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿ ಚಟುವಟಿಕೆಯನ್ನು ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಶಾರೀರಿಕವಾಗಿ ಸದೃಢಗೊಳಿಸಲಾಗಿದೆ. ಸ್ಪರ್ಧಾತ್ಮಕವಾಗಿ ಮಕ್ಕಳನ್ನು ತಯಾರು ಮಾಡುವಲ್ಲಿ ಶಿಕ್ಷಕರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಮುಂಬರುವ ಪರೀಕ್ಷೆಯನ್ನು ಸ್ಪರ್ಧಾತ್ಮಕವಾಗಿ ಎದುರಿಸುವಂತೆ ಪ್ರೋತ್ಸಾಹಿಸಲಾಗುತ್ತಿದೆ ಎಂದರು.
ಶಿಕ್ಷಣ ಇಲಾಖೆಯ ಗಾಯತ್ರಿ ಮಾತನಾಡಿ, ಶಾಲಾ ವಾರ್ಷಿಕೋತ್ಸವ, ವಿದ್ಯಾರ್ಥಿಗಳಿಗೆ ಹಬ್ಬವಿದ್ದಂತೆ. ಇಂದು ಎಲ್ಲ ಕ್ಷೇತ್ರಕ್ಕಿಂತ ಶಿಕ್ಷಣ ರಂಗ ಬಹಳ ಸ್ಪರ್ಧಾತ್ಮಕವಾಗಿ ಬೆಳೆಯುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರೋಟರಿ ಸಂಸ್ಥೆಯ ಅಧ್ಯಕ್ಷರಾದ ಬನ್ಸಿ ಪೂವಣ್ಣ, ಉತ್ತಮ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೆ ಏರುವ ಗುರಿ ಹೊಂದಿದ್ದೇವೆ. ಎಲ್ಲರ ಸಹಕಾರದಿಂದ ಈ ಸಂಸ್ಥೆ ಬೆಳೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಶಿಕ್ಷಕರ ಸೇವೆ ಅಪಾರ. ಮುಂದೆಯೂ ಮಕ್ಕಳ ವಿಕಾಸಕ್ಕೆ ಮುಂದಾಗಲಿದ್ದೇವೆ ಎಂದರು.
ಸಾಹಿತಿ ಬಡಕಡ ರಜಿತ ಕಾರ್ಯಪ್ಪ, ಬಿಆರ್ಪಿಗಳಾದ ಕೆ.ಸಿ.ಗೀತಾಂಜಲಿ ಉಪಸ್ಥಿತರಿದು,್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
ರೋಟರಿ ಶಾಲೆಯ ಮುಖ್ಯೋಪದ್ಯಾಯರಾದ ವಿಶಾಲಾಕ್ಷಿ ಶಾಲೆಯ ವಾರ್ಷಿಕ ವರದಿ ವಾಚಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರತಿಭಾ ಕಾರಂಜಿ, ಕ್ರೀಡಾಕೂಟ, ಶಾಲಾ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ವೇದಿಕೆಯಲ್ಲಿ ರೋಟರಿ ಸಂಸ್ಥೆಯ ಚೇರ್ಮೆನ್ ಮಾದಪ್ಪ ಬಿ.ಬಿ., ಕಾರ್ಯದರ್ಶಿ ಸರೋಜ್ ಕಾರ್ಯಪ್ಪ, ನಿರ್ದೆಶಕರಾದ ಸುನೀಲ್ ನಾಣಯ್ಯ, ಹಾಗೂ ರೋಟರಿ ಶಾಲೆಯ ಮುಖ್ಯೋಪದ್ಯಾಯರಾದ ಕೃಷ್ಣ ಪ್ರಸಾದ್ ಇತರರು ಉಪಸ್ಥಿತರಿದ್ದರು.
ಶಾಲಾ ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಹ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಂತರ ಮಕ್ಕಳಿಂದ ವಿಭಿನ್ನ ಸಾಂಸ್ಕೃತಿಕ, ಕಾರ್ಯಕ್ರಮಗಳು ಜರುಗಿದವು.








