ಮಡಿಕೇರಿ ಜ.12 : ಹಿರಿಯ ಸಾಹಿತಿ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರು, ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ ಹಾಗೂ ಕುಶಾಲನಗರದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೆಳನದ ಅಧ್ಯಕ್ಷರಾಗಿದ್ದ ಎಸ್.ಸಿ.ರಾಜಶೇಖರ್ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂತಾಪ ಸೂಚಿಸಿದೆ.
ನಗರದ ಕನ್ನಡ ಸಾಹಿತ್ಯ ಪರಿಷತ್ತು ಕಛೇರಿಯಲ್ಲಿ ನಡೆದ ಸಂತಾಪ ಸೂಚನಾ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಕ.ಸಾ.ಪದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಸೋಮವಾರಪೇಟೆ ತಾಲ್ಲೂಕಿನಲ್ಲಿ ಕನ್ನಡ ಸಂಘಗಳನ್ನು ಸ್ಥಾಪಿಸಿ ಆ ಮೂಲಕ ಕನ್ನಡ ಪರ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದ ರಾಜಶೇಖರ್ ಅವರು ಅಧ್ಯಾಪಕರಾಗಿ, ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.
ಜಿಲ್ಲಾ ಕ.ಸಾ.ಪ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್ ಮಾತನಾಡಿದರು. ಮೌನಾಚರಣೆಯ ಮೂಲಕ ರಾಜಶೇಖರ್ ಅವರಿಗೆ ಸಭೆ ಗೌರವ ಅರ್ಪಿಸಿತು.
ಜಿಲ್ಲಾ ಕ.ಸಾ.ಪ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಮಡಿಕೇರಿ ತಾಲ್ಲೂಕು ಕ.ಸಾ.ಪ. ಅಧ್ಯಕ್ಷೆ ತುಳಸಿ ಮೋಹನ್, ವಿರಾಜಪೇಟೆ ತಾಲ್ಲೂಕು ಕ.ಸಾ.ಪ ಅಧ್ಯಕ್ಷ ಡಿ.ರಾಜೇಶ್ ಪದ್ಮನಾಭ, ಮಡಿಕೇರಿ ತಾಲ್ಲೂಕು ಕ.ಸಾ.ಪ ಗೌರವ ಕಾರ್ಯದರ್ಶಿ ರಿಶಿತ್ ಮಾದಯ್ಯ, ಸಂಘಟನಾ ಕಾರ್ಯದರ್ಶಿ ಪ್ರೇಮ ರಾಘವಯ್ಯ, ಪಾಂಡನ ಪುಷ್ಪವೇಣಿ ಹಾಗೂ ಕಛೇರಿ ಸಿಬ್ಬಂದಿ ರೇಣುಕಾ ಉಪಸ್ಥಿತರಿದ್ದರು.









