ಮಡಿಕೇರಿ ಜ.16 : ಸರ್ಕಾರ ಮತ್ತು ಇಲಾಖೆಗಳಿಂದ ಲಭ್ಯವಾಗುವ ಸೌಲಭ್ಯಗಳನ್ನು ಕಾರ್ಮಿಕರಿಗೆ ಒದಗಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ತಳಮಟ್ಟದಲ್ಲಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ.
ಕುಶಾಲನಗರ ಕಾಂಗ್ರೆಸ್ ಕಾರ್ಮಿಕ ಘಟಕದ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಮಿಕರು ಕೆಲಸ ನಿರ್ವಹಿಸುವ ಸಂದರ್ಭ ಉಂಟಾಗುತ್ತಿರುವ ಅನಾನುಕೂಲತೆಗಳ ಬಗ್ಗೆಯೂ ಗಮನಹರಿಸಬೇಕಿದೆ. ಇಂತಹ ಕೆಲಸಗಳು ಕಾರ್ಮಿಕ ಘಟಕಗಳ ಪದಾಧಿಕಾರಿಗಳ ಪ್ರಮುಖ ಕರ್ತವ್ಯವಾಗಬೇಕಿದೆ ಎಂದರು.
ರಾಜ್ಯ ಕಾರ್ಮಿಕ ಘಟಕ ಉಪಾಧ್ಯಕ್ಷೆ ಹರಿಣಿ ಗೌಡ, ಕೆಪಿಸಿಸಿ ಪ್ರಮುಖರಾದ ಕೆ.ಪಿ.ಚಂದ್ರಕಲಾ, ಮಂಜುನಾಥ್ ಗುಂಡುರಾವ್ ಮಾತನಾಡಿದರು.
ನಗರ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ಜಿ.ಶಿವಕುಮಾರ್ ಅಧಿಕಾರ ವಹಿಸಿಕೊಂಡರು.
ಕುಶಾಲನಗರ ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ಶಿವಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಸಂಯೋಜಕ ನಟೇಶ್ ಗೌಡ, ಕೊಡಗು ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಟಿ.ಪಿ.ಹಮೀದ್, ಬಿ.ಡಿ.ಅಣ್ಣಯ್ಯ, ಪುರಸಭೆ ಸದಸ್ಯರಾದ ಎಂ.ಕೆ.ದಿನೇಶ್, ಜಯಲಕ್ಷ್ಮಿ ನಂಜುಂಡ ಸ್ವಾಮಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ಹಾನಗಲ್, ಕುಶಾಲನಗರ ಘಟಕದ ಅಧ್ಯಕ್ಷ ಕಿರಣ್, ಕಿಸಾನ್ ಘಟಕದ ಅಧ್ಯಕ್ಷ ನವೀನ್ ಸೇರಿದಂತೆ ಪ್ರಮುಖರಾದ ಜೋಸೆಫ್ ವಿಕ್ಟರ್ ಸೋನ್ಸ್, ರೋಷನ್, ರಜಾಕ್, ಚಂದ್ರಶೇಖರ್, ಶುಶ್ರೂತ್ ಗೌಡ ಮತ್ತು ಕಾರ್ಯಕರ್ತರು ಇದ್ದರು.










