ಮಡಿಕೇರಿ ಜ.19 : ಕನಿಷ್ಟ ವೇತನ ಮತ್ತು ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಜ.23 ರಿಂದ 25ರವರೆಗೆ ಪ್ರತಿಭಟನೆ ನಡೆಸಲು ಕೊಡಗು ಜಿಲ್ಲಾ ಅಂಗನವಾಡಿ ನೌಕರರ ಸಂಘ ನಿರ್ಧರಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊನ್ನಂಪೇಟೆ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವಿ.ಎಸ್.ಸುಮಿತ್ರ, ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಲಿದ್ದಾರೆ ಎಂದರು.
ಜ.23 ರಂದು ಜಿಲ್ಲಾ ವ್ಯಾಪ್ತಿಯಲ್ಲಿರುವ ಸುಮಾರು 860 ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರು ಕಾರ್ಯಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಉಳಿದ ಎರಡು ದಿನಗಳ ಪ್ರತಿಭಟನೆ ಸಂದರ್ಭ ಅಂಗನವಾಡಿಗಳು ಎಂದಿನಂತೆ ಕಾರ್ಯನಿರ್ವಹಿಸಲು ಪರ್ಯಾಯ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಪ್ರಸ್ತುತ ಮಾಸಿಕ 11,500 ರೂ. ಗೌರವ ಧನವನ್ನಷ್ಟೆ ಪಡೆಯುತ್ತಿದ್ದಾರೆ. 2017ರ ಬಳಿಕ ಗೌರವ ಧನ ಹೆಚ್ಚಳವಾಗಿಲ್ಲ. ಬೆಲೆ ಏರಿಕೆಯ ಈ ದಿನಗಳಲ್ಲಿ ಕನಿಷ್ಟ 31 ಸಾವಿರ ವೇತನವನ್ನು ನೀಡಬೇಕೆಂದು ಒತ್ತಾಯಿಸಿದರಲ್ಲದೆ, ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗುವವರಿಗೆ ಕನಿಷ್ಟ 10 ಸಾವಿರ ಪಿಂಚಣಿ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.
::: ಸಮಸ್ಯೆ ಕೇಳುವವರೆ ಇಲ್ಲ :::
ಅಂಗನವಾಡಿ ಸಿಬ್ಬಂದಿಗಳು ತಮಗೆ ಸೀಮಿತವಾದ ಕೆಲಸ ಕಾರ್ಯಗಳೊಂದಿಗೆ, ಇಲಾಖೇತರ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ. ಸರ್ಕಾರದ ಭಾಗ್ಯ ಲಕ್ಷ್ಮಿ, ಮಾತೃವಂದನಾ, ಗೃಹಲಕ್ಷ್ಮಿ ಮೊದಲಾದವುಗಳಲ್ಲು ಅಂಗನವಾಡಿ ನೌಕರರನ್ನು ಬಳಸಿಕೊಳ್ಳಲಾಗುತ್ತಿದೆ. ಇಂತಹ ಇಲಾಖೇತರ ಕೆಲಸಗಳನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ನಿಲ್ಲಿಸಬೇಕು ಮತ್ತು ಶಾಲಾ ಪೂರ್ವ ಮಕ್ಕಳ ಕಲಿಕೆಗೆ ಸಮಯ ಒದಗಿಸಬೇಕು. ಆದರೆ, ಇಂತಹ ನಮ್ಮ ಮೂಲಭೂತ ಸಮಸ್ಯೆಗಳನ್ನು ಕೇಳುವವರೆ ಇಲ್ಲದಂತಾಗಿದೆ ಎಂದು ಸಮಿತ್ರ ಬೇಸರ ವ್ಯಕ್ತಪಡಿಸಿದರು.
ಮಡಿಕೇರಿ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾದ ಬಿ.ಎಸ್.ಸರೋಜ ಮಾತನಾಡಿ, ಅಂಗನವಾಡಿಗಳಿಗೆ ಪ್ರಸ್ತುತ ಪುಡಿಯ ರೂಪದ ಪೌಷ್ಠಿಕ ಆಹಾರವನ್ನು ಸರಬರಾಜು ಮಾಡಲಾಗುತ್ತಿದೆ. ಇದನ್ನು ನೀರಿನಲ್ಲಿ ಕರಡಿ ಇದನ್ನು ಮಕ್ಕಳಿಗೆ ನೀಡುವ ಪರಿಸ್ಥಿತಿ ಇದೆ. ಈ ಎಲ್ಲಾ ಗೊಜಲುಗಳಿಂದ ಮಕ್ಕಳನ್ನು ಅಂಗನವಾಡಿಗಳಿಗೆ ಕಳುಹಿಸಲು ಹಿಂದೇಟು ಹಾಕುವ ವಾತಾವರಣ ನಿರ್ಮಾಣ ಆಗುತ್ತಿರುವುದರಿಂದ, ಪೂರಕ ಪೌಷ್ಠಿಕ ಆಹಾರದಲ್ಲಿ ಅಗತ್ಯ ಬದಲಾವಣೆ ಮಾಡಬೇಕೆಂದು ಒತ್ತಾಯಿಸಿದರು.
ಸೋಮವಾರಪೇಟೆ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಖಜಾಂಚಿ ಎಂ.ಬಿ.ಜಮುನ ಮಾತನಾಡಿ, ಚುನಾವಣಾ ಹಂತಗಳಲ್ಲಿ ಅಂಗನವಾಡಿ ನೌಕರರನ್ನು ಡಿಸೆಂಬರ್ನಿಂದ ಜೂನ್ ತಿಂಗಳವರೆಗೆ ಸರ್ಕಾರ ಬಳಸಿಕೊಂಡು ಮೊದಲ ಹಂತದಲ್ಲಿ ಕೇವಲ 5700 ರೂ. ಮತ್ತು ಮತ್ತೊಂದು ಕಂತಿನಲ್ಲಿ 1300 ರೂ.ಗಳನ್ನಷ್ಟೆ ನೀಡುತ್ತಿದೆ. ಇದರೊಂದಿಗೆ ಇಂತಹ ಅವಧಿಯಲ್ಲಿ ಅಂಗನವಾಡಿ ನೌಕರರು ತಮ್ಮ ಸ್ವಂತ ಕೆಲಸ ಕಾರ್ಯಗಳನ್ನು ನಿರ್ವಹಿಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ನಿಮಾಣವಾಗುತ್ತಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ವಿರಾಜಪೇಟೆ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ಎಂ.ಬಿ.ಲೀಲಾವತಿ, ಪೊನ್ನಂಪೇಟೆ ತಾಲ್ಲೂಕು ಸಂಘದ ಕಾರ್ಯದರ್ಶಿ ಬಿ.ಸಿ.ಲಲಿತಾಕ್ಷಿ ಹಾಗೂ ವಿರಾಜಪೇಟೆ ತಾಲ್ಲೂಕು ಅಧ್ಯಕ್ಷೆ ಎ.ವಿ.ಶೀಲಾ ಉಪಸ್ಥಿತರಿದ್ದರು.




















