ಮಡಿಕೇರಿ ಜ.24 NEWS DESK : ನೂತನವಾಗಿ ನಿರ್ಮಾಣಗೊಂಡಿರುವ ಸುಸಜ್ಜಿತ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೂತನ ಕಚೇರಿ ಭವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.25 ರಂದು ಮಧ್ಯಾಹ್ನ ಉದ್ಘಾಟಿಸಲಿದ್ದಾರೆ.
ಗೃಹ ಸಚಿವ ಜಿ.ಪರಮೇಶ್ವರ್ ಅವರು ಕೂಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಸ್ಪಿ ಕಚೇರಿ ಉದ್ಘಾಟನೆ ನಂತರ ನಗರದ ಗಾಂಧಿ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮುಖ್ಯಮಂತ್ರಿಗಳು ಮಾತನಾಡಲಿದ್ದಾರೆ. ಇದೇ ಸಂದರ್ಭ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ ಮತ್ತು ಪೂರ್ಣಗೊಂಡ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ಮುಖ್ಯಮಂತ್ರಿಗಳ ಸ್ವಾಗತಕ್ಕೆ ಮಡಿಕೇರಿ ನಗರ ಸಜ್ಜಾಗುತ್ತಿದೆ, ಗಾಂಧಿ ಮೈದಾನದಲ್ಲಿ ಸಾವಿರಾರು ಜನರಿಗೆ ಆಸನದ ವ್ಯವಸ್ಥೆಯನ್ನು ಮಾಡಲಾಗಿದೆ. ವಾಹನದಟ್ಟಣೆ ಹೆಚ್ಚಾಗಬಹುದು ಎನ್ನುವ ಕಾರಣಕ್ಕೆ ನಗರದ ಜಿಲ್ಲಾ ಕ್ರೀಡಾಂಗಣ, ಜೂನಿಯರ್ ಕಾಲೇಜು ಮೈದಾನ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ ಮತ್ತು ಶಾಂತಿ ಚರ್ಚ್ ಬಳಿಯ ಮೈದಾನದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಮುಖ್ಯಮಂತ್ರಿಗಳು ಗುರುವಾರ ಬೆಳಗ್ಗೆ ವಿರಾಜಪೇಟೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದಾರೆ.









