ಮಡಿಕೇರಿ ಜ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಿರುವ ಫಲಪುಷ್ಪ ಪ್ರದರ್ಶನವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ಶಾಸಕ ಡಾ.ಮಂತರ್ ಗೌಡ ಅವರು ಶುಕ್ರವಾರ ಉದ್ಘಾಟಿಸಿದರು.
ರಾಜಾಸೀಟು ಉದ್ಯಾನವನದಲ್ಲಿ ಪುಷ್ಪರಾಶಿಯಿಂದಲೇ ನಿರ್ಮಾಣವಾಗಿರುವ ಇಗ್ಗುತಪ್ಪ ದೇವಾಲಯ ಸೇರಿದಂತೆ ಹಲವು ಕಲಾ ಪ್ರಕಾರಗಳ ಫಲಪುಷ್ಪ ಪ್ರದರ್ಶನ ಆಕರ್ಷಣೀಯವಾಗಿದ್ದು, ನೋಡುಗರನ್ನು ಸೆಳೆಯುತ್ತಿವೆ ಎಂದು ಸಚಿವರು ಹೇಳಿದರು.
ರಾಜಾಸೀಟನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಫಲಪುಷ್ಪ ಪ್ರದರ್ಶನ ವಿಭಿನ್ನ ಹಾಗೂ ವಿಶಿಷ್ಟವಾಗಿದ್ದು, ಪ್ರಕೃತಿ ಪ್ರಿಯರನ್ನು ತನ್ನೆಡೆಗೆ ಸೆಳೆಯುತ್ತಿದೆ ಎಂದರು.
ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕರ ಜೊತೆಗೂಡಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾಹಿತಿ ವಿನಿಮಯ ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು.
ಶಾಸಕ ಡಾ|| ಮಂತರ್ ಗೌಡ ಮಾತನಾಡಿ ಬಣ್ಣ ಬಣ್ಣದ ಚಿತ್ತಾರದ ಹೂವುಗಳು ನೋಡುಗರನ್ನು ಚಕಿತಗೊಳಿಸುತ್ತಿದ್ದು, ರಾಜಾಸೀಟು ಉದ್ಯಾನವನದಲ್ಲಿ ನಿರಂತರವಾಗಿ ಪುಷ್ಪ ಪ್ರದರ್ಶನಗಳು ನಡೆಯಬೇಕು ಎಂದು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಹಾಪ್ ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಾಚೇಟ್ಟಿರ ಚೋಟು ಕಾವೇರಪ್ಪ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಎಚ್.ಆರ್.ಯೋಗೇಶ್, ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ ಮತ್ತಿತರರು ಹಾಜರಿದ್ದರು.
::: ಸಾವಿರಾರು ಹೂವುಗಳ ಆಕರ್ಷಣೆ :::
ತೋಟಗಾರಿಕೆ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಇತರೆ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಭಾರತ ದೇಶದ ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ, 26 ರಿಂದ 28 ರವರೆಗೆ ನಗರದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಿದೆ.
ಫಲಪುಷ್ಪ ಪ್ರದರ್ಶನದಲ್ಲಿ ಸುಮಾರು 15,000 ಸಂಖ್ಯೆಯ ಇಪ್ಪತ್ತು ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಆಸ್ಟರ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ ಮತ್ತಿತರ ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ಬೆಳೆಯಲಾಗಿದೆ.
ಈ ವರ್ಷದ ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಗಳು: ಕೊಡಗಿನ ಕುಲದೇವತೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಕಲಾಕೃತಿಯನ್ನು 15 ಅಡಿ ಎತ್ತರದಲ್ಲಿ 48 ಅಡಿ ಉದ್ದ, 28 ಅಡಿ ಅಗಲದಲ್ಲಿ ಗುಲಾಬಿ, ಸೇವಂತಿಗೆ, ಆಸ್ಟರ್ ಹೂವುಗಳ ವಿವಿಧ ಬಣ್ಣದ ಸುಮಾರು 5 ಲಕ್ಷ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದ್ದು, ಆಕರ್ಷಣೀಯವಾಗಿದೆ.
ಗಣರಾಜ್ಯೋತ್ಸವ ಅಂಗವಾಗಿ ಯೋಧ, ಪಿರಂಗಿ ಹಾಗೂ ರಾಷ್ಟ್ರದ್ವಜದ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಲಾಗಿದೆ. ತ್ರಿವರ್ಣ ದ್ವಜದ ಕಲಾಕೃತಿ, ಅಣಬೆ ಹಾಗೂ ಬಲೂನು ಮಾದರಿಯ ಕಲಾಕೃತಿಗಳು ಗಮನಸೆಳೆಯುತ್ತಿವೆ.
ಮಕ್ಕಳಿಗೆ ಮನರಂಜನೆ ನೀಡುವಂತಹ ಚೋಟಾ ಭೀಮ್, ಬಾರ್ಬಿ ಡಾಲ್, ಸ್ಪೈಡರ್ ಮ್ಯಾನ್, ಬ್ಯಾಟ್ ಮ್ಯಾನ್, ಅಣಬೆ ಕಲಾಕೃತಿಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಫೋಟೋ ಪ್ರೇಮ್, ಸೆಲ್ಫಿ ಜೋನ್ ಮಾದರಿಗಳನ್ನು ನಿರ್ಮಿಸಲಾಗಿದೆ.
ವಿವಿಧ ಕ್ಷೇತ್ರಗಳ ಗಣ್ಯರುಗಳ ಕಲಾಕೃತಿಗಳನ್ನು ಹಣ್ಣು/ ತರಕಾರಿಗಳಿಂದ ಕೆತ್ತನೆ ಮಾಡಿ ಪ್ರದರ್ಶಿಸಲಾಗಿದೆ. ವಿವಿಧ ಅಲಂಕಾರಿಕ ಗಿಡಗಳು, ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡಣೆಯ ಪ್ರದರ್ಶಗಳನ್ನು ಏರ್ಪಡಿಸಲಾಗಿದೆ.
ರೈತರು ಬೆಳೆದಿರುವ ವಿಶೇಷವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಾಂಬಾರು ಬೆಳೆಗಳ ಪ್ರದರ್ಶಿಕೆಗಳನ್ನು ಪ್ರದರ್ಶಿಸಲಾಗಿದೆ.
ಫಲಪುಷ್ಪ ಪ್ರದರ್ಶನದ ವೀಕ್ಷಣೆಗೆ ಸಾರ್ವಜನಿಕರಿಗೆ ರೂ.20 ಗಳ ಪ್ರವೇಶ ಶುಲ್ಕ ಹಾಗೂ ಶಾಲೆಯಿಂದ ಭಾಗವಹಿಸುವ ಶಾಲಾ ಮಕ್ಕಳಿಗೆ ಉಚಿತವಾಗಿ ಪ್ರವೇಶ ನೀಡಲಾಗುತ್ತದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಯೋಗೇಶ್ ತಿಳಿಸಿದ್ದಾರೆ.










