ಮಡಿಕೇರಿ ಫೆ.10 NEWS DESK : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ 1962, 1965, 1971ರ ಯುದ್ಧಗಳಲ್ಲಿ ಭಾಗವಹಿಸಿದ ಜಿಲ್ಲೆಯ ಯೋಧರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೊಟ್ಟುಕತ್ತೀರ ಪಿ.ಸೋಮಣ್ಣ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಿವಿಧ ಸಂಘಟನೆಯಿಂದ ಈ ಹಿಂದೆ ಸೈನಿಕರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಸಲಾಗಿತ್ತು. ಆದರೆ, ಯುದ್ಧಗಳಲ್ಲಿ ಹೋರಾಡಿದ, ಭಾಗವಹಿಸಿದವರನ್ನು ಗುರುತಿಸುವ ಕಾರ್ಯ ನಡೆದಿರಲಿಲ್ಲ. ಮೊದಲ ಬಾರಿಗೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ 1962ರ ಇಂಡೋ ಚೈನ ಯುದ್ಧ ಹಾಗೂ 1965 ಮತ್ತು 1971ರ ಇಂಡೋ ಪಾಕ್ ಯುದ್ಧಗಳಲ್ಲಿ ಭಾಗವಹಿಸಿದ ಕೊಡಗಿನ ಮಾಜಿ ಸೈನಿಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇದಕ್ಕೆ ಜಿಲ್ಲೆಯ ಜನತೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮಕ್ಕೆ ಬರಲಾಗದವರಿಗೆ ಸಂಘದ ವತಿಯಿಂದ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಇದೇ ರೀತಿ ಮುಂದಿನ ದಿನಗಳಲ್ಲಿ ಕಾರ್ಗಿಲ್, ಶಾಂತಿ ಪಡೆಯವರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.
ಸಂಘದ ಉಪಾಧ್ಯಕ್ಷ ಸುಧೀರ್ ಮಾತನಾಡಿ, ದ.ಕನ್ನಡ ಜಿಲ್ಲೆಯಲ್ಲಿ ಸಮಾಜ ಸೇವೆಯಲ್ಲಿ ತೊಡಗಿರುವ ಸತ್ಯಜಿತ್ ಸುರತ್ಕಲ್ ಅವರನ್ನು ಮಡಿಕೇರಿಯಲ್ಲಿ ಸಂಘದ ವತಿಯಿಂದ ಸನ್ಮಾನಿಸಲಾಗಿದೆ. ಕೊಡಗಿಗೂ ಸಹಾಯಹಸ್ತ ಚಾಚುವಂತೆ ಅವರಲ್ಲಿ ಮನವಿ ಮಾಡಿರುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ಮಾಚಿಮಂಡ ಭವಾನಿ, ಮಡಿಕೇರಿ ಸಂಚಾಲಕ ತಳೂರ್ ಕಾಳಪ್ಪ, ಪ್ರಮುಖರಾದ ಬೊಟ್ಟಂಗಡ ಜಪ್ಪು ಹಾಜರಿದ್ದರು.









