ಮಡಿಕೇರಿ ಫೆ.12 NEWS DESK : ಸೋಮವಾರಪೇಟೆ ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿ ಸಭೆ ಖಾಸಗಿ ಸಭಾಗಂಣದಲ್ಲಿ ಸಮಿತಿಯ ಅಧ್ಯಕ್ಷ ಅರುಣ್ ಕೊತ್ನಳ್ಳಿ ಅಧ್ಯಕ್ಷತೆಯಲ್ಲಿ ನಡೆಯಿತು.
ಜಿಲ್ಲೆಯಲ್ಲಿ ಸೋಮವಾರಪೇಟೆ ಅಭಿವೃದ್ಧಿಯಿಂದ ಹಿಂದೆ ಉಳಿದಿದೆ. ಇಲ್ಲಿ ಯಾವುದೇ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳು ಹಾದು ಹೋಗಿಲ್ಲದಿರುವುದು ಎಲ್ಲ ರೀತಿಯ ವಾಣಿಜ್ಯೋದ್ಯಮ ಬೆಳವಣಿಗೆಗೆ ತೊಡಕಾಗಿದೆ. ಕೂಡಲೇ ಬೆಂಗಳೂರಿನಿಂದ ಜಾಲ್ಸೂರಿಗೆ ಹಾದು ಹೋಗಲಿರುವ ರಾಜ್ಯ ಹೆದ್ದಾರಿ ಕಾಮಗಾರಿ ಮುಂದುವರೆಸುವಂತೆ ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಡಾ. ಮಂತರ್ ಗೌಡ ಅವರಲ್ಲಿ ಅಧ್ಯಕ್ಷರು ಮನವಿ ಮಾಡಿದರು.
ತಾಲ್ಲೂಕಿನಲ್ಲಿ ಕಾಡುಪ್ರಾಣಿಗಳು ಮತ್ತು ಮಾನವ ಸಂಘರ್ಷ ದಿನದಿಂದ ಹೆಚ್ಚಾಗುತ್ತಿದ್ದು, ಕೊನೆಗಾಣಬೇಕು. ತಾಲ್ಲೂಕಿನ ಜನರ ಅನುಕೂಲಕ್ಕಾಗಿ ಸಾರಿಗೆ ಉಪಕೇಂದ್ರವನ್ನು ಪ್ರಾರಂಭಿಸಬೇಕು. ಶನಿವಾರಸಂತೆಯಲ್ಲಿ ಜನರಲ್ ಕಾರ್ಯಪ್ಪ ಹುಟ್ಟಿದ ಮನೆಯನ್ನು ಮ್ಯೂಸಿಯಂ ಮಾಡಬೇಕು. ತಾಲ್ಲೂಕಿನಲ್ಲಿ ಕಾಫಿ ಮ್ಯೂಸಿಯಂ ಮತ್ತು ರೀಸರ್ಚ್ ಕೇಂದ್ರ ಪ್ರಾರಂಭಕ್ಕೆ ಮುಂದಾಗಬೇಕು ಮನವಿ ಮಾಡಿದರು.
ತಾಲ್ಲೂಕಿನ ಕೆಲ ಸರ್ಕಾರಿ ಕಚೇರಿಗಳಲ್ಲಿ ಇಂದಿಗೂ ಜನರ ಶೋಷಣೆ ನಡೆಯುತ್ತಿದ್ದು, ಅದನ್ನು ತಪ್ಪಿಸಬೇಕಿದೆ. ತಾಲ್ಲೂಕು ಕೇಂದ್ರದಿಂದ ದೂರದ ಬೆಂಗಳೂರು, ಮಂಗಳೂರು ಸೇರಿದಂತೆ ಹಲವು ನಗರಗಳಿಗೆ ಸಂಚರಿಸಲು ಸ್ಥಳೀಯರಿಗೆ ಅನುಕೂಲವಾಗುವಂತೆ ಕೆಎಸ್ಆರ್ಟಿಸಿ ಬಸ್ ಸೌಕರ್ಯ ಕಲ್ಪಿಸಲು ಮುಂದಾಗಬೇಕು. ತಾಲ್ಲೂಕಿನಲ್ಲಿರುವ ಪ್ರವಾಸೋದ್ಯಮ ಸ್ಥಳಗಳನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಬೇಕು ಎಂದು ಹೇಳಿದರು.
ವಿವಿಧ ಬೇಡಿಕೆಗಳ ಮನವಿಯನ್ನು ಸ್ವೀಕರಿಸಿದ ಶಾಸಕ ಮಂತರ್ ಗೌಡ ಮಾತನಾಡಿ, ಈಗಾಗಲೇ ಮಲ್ಲಳ್ಳಿ ಜಲಪಾತಕ್ಕೆ ಕೇಬಲ್ ಕಾರ್ ಅಳವಡಿಸುವ ಬಗ್ಗೆ ಸಂಬಂಧಿಸಿದ ಸಚಿವರೊಂದಿಗೆ ಮಾತುಕತೆ ನಡೆಸಿದ್ದು, ಮುಂದಿನ ಬಜೆಟ್ನಲ್ಲಿ ಸೇರ್ಪಡೆಯಾಗಬಹುದು. ಕಳೆದ 17 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶತಮಾನೊತ್ಸವ ಭವನ ನಿರ್ಮಾಣಕ್ಕೆ ಮುಖ್ಯ ಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಮುಂದಿನ ಬಜೆಟ್ನಲ್ಲಿ ಹಣ ನೀಡುವ ಸಾಧ್ಯತೆ ಇದೆ ಎಂದರು. ಬೆಂಗಳೂರು ಜಾಲ್ಸೂರು ರಾಜ್ಯ ಹೆದ್ದಾರಿಯ ಉಳಿಕೆ ರಸ್ತೆ ಕಾಮಗಾರಿಗೆ ರೂ.20 ಕೋಟಿ ನೀಡುವಂತೆ ಮನವಿ ಮಾಡಲಾಗಿದೆ ಎಂದರು.
ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸೂಕ್ತ ರೀತಿಯಲ್ಲಿ ಕೆಲಸ ಮಾಡಲು ಎಲ್ಲರ ಸಹಕಾರ ಮುಖ್ಯವಾಗಿದ್ದು, ಎಲ್ಲ ಸಂಘ ಸಂಸ್ಥೆಗಳು ಮತ್ತು ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಸಮಿತಿಯ ಕಾರ್ಯದರ್ಶಿ ಆದರ್ಶ್ ತಮ್ಮಯ್ಯ, ಉಪಾಧ್ಯಕ್ಷ ಕೆ.ಎನ್. ದೀಪಕ್, ಖಜಾಂಚಿ ಅಬ್ದುಲ್ ರಜಾಕ್, ನಿರ್ದೇಶಕರಾದ ಕೆ.ಡಿ. ಜೀವನ್ಕುಮಾರ್, ಎಚ್.ಕೆ. ತ್ರಿಶೂಲ್, ಜಿ.ಎಂ. ಹೂವಯ್ಯ, ಕೆ.ಎ. ಪ್ರಕಾಶ್, ವಿ.ಎಂ. ಗೌತಮ್, ಮಂಜುನಾಥ್, ಲಕ್ಷ್ಮಣ ಮತ್ತಿತರರು ಇದ್ದರು.










