ಮಡಿಕೇರಿ ಫೆ.21 NEWS DESK : ಇಡೀ ವಿಶ್ವದಲ್ಲಿ ಭಾರತವು ಶ್ರೇಷ್ಠ ಸಂವಿಧಾನವನ್ನು ಹೊಂದಿದ್ದು, ಭಾರತ ಸಂವಿಧಾನದಲ್ಲಿ ಪ್ರತಿಯೊಬ್ಬರೂ ಸಮಾನರು ಎಂಬುದನ್ನು ಪ್ರತಿಪಾದಿಸಲಾಗಿದೆ. ಅದರಂತೆ ಪ್ರತಿಯೊಬ್ಬರೂ ನಡೆದುಕೊಳ್ಳುವಂತಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.
ಸಂವಿಧಾನ ಜಾಗೃತಿ ಜಾಥ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಹಾಗೂ ನಗರಸಭೆ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಬುಧವಾರ ಏರ್ಪಡಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಭಾರತದ ಪ್ರಜೆಗಳಾದ ಪ್ರತಿಯೊಬ್ಬರೂ ಸಮನಾಗಿ ಬದುಕುವ ಹಕ್ಕು ಹೊಂದಿದ್ದಾರೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹೀಗೆ ಪ್ರತಿ ಕ್ಷೇತ್ರದಲ್ಲೂ ಸಹ ಸಮಾನ ಅವಕಾಶವನ್ನು ಹೊಂದಿದ್ದಾರೆ ಎಂದು ಹೇಳಿದರು.
ಸಂವಿಧಾನದಡಿ ಪ್ರತಿಯೊಬ್ಬರೂ ಸಮಾನರಾಗಿದ್ದು, ಬಡವ-ಬಲ್ಲಿದ, ಮೇಲು-ಕೀಲು ಎಂಬುದಿಲ್ಲ. ರಾಷ್ಟ್ರದಲ್ಲಿ ಯಾರೂ ಸಹ ಅಸಮಾನತೆ ಹೊಂದಿರಬಾರದು ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ ಎಂದು ಕೆ.ರಾಮರಾಜನ್ ಅವರು ನುಡಿದರು.
ಭಾರತ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ತಿಳಿಸಲಾಗಿದೆ. ಹಾಗೆಯೇ ರಾಜ್ಯ ನಿರ್ದೇಶಕ ತತ್ವಗಳನ್ನು ಸಹ ಒಳಗೊಂಡಿದೆ. ಆ ನಿಟ್ಟಿನಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನವನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಮಹಿಳೆಯರು ಮತ್ತು ಮಕ್ಕಳಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡಿದ್ದಾರೆ. ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಭಾರತದ ಆರ್ಥಿಕತೆ ಬಗ್ಗೆ ಹೇಳಿದ್ದಾರೆ. ಹೀಗೆ ಪ್ರತಿ ಕ್ಷೇತ್ರದಲ್ಲಿಯೂ ಸಹ ಸಾಮಾಜಿಕ ನ್ಯಾಯವನ್ನು ಒದಗಿಸುವಲ್ಲಿ ಅಂಬೇಡ್ಕರ್ ಅವರು ಶ್ರಮಿಸಿದ್ದಾರೆ ಎಂದು ಕೆ.ರಾಮರಾಜನ್ ಅವರು ವಿವರಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಒಂದು ಸಮುದಾಯಕ್ಕೆ ಸೀಮಿತವಲ್ಲ. ಅವರೊಬ್ಬ ಪ್ರಬುದ್ಧ, ಜನಪರ ನಾಯಕ, ಮಾನವತಾವಾದಿ ಆಗಿದ್ದಾರೆ. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರಸ್ತಾಪಿಸಿರುವ ಒಂದೊಂದು ವಿಷಯಗಳು ಸಹ ಅತ್ಯದ್ಭುತವಾಗಿದ್ದು, ಜತನ ಮಾಡಿಕೊಳ್ಳುವಂತಿದ್ದು, ಭಾರತದ ಮುನ್ನೋಟವನ್ನು ಒಳಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಮಾತನಾಡಿ ಅಂಬೇಡ್ಕರ್ ಒಬ್ಬ ವ್ಯಕ್ತಿಯಲ್ಲ. ಅವರೊಬ್ಬ ಬಹುಮುಖ ಪ್ರತಿಭೆ ವ್ಯಕ್ತಿತ್ವ ಹೊಂದಿರುವ ಸಮತಾವಾದಿ, ಸಂವಿಧಾನ ಶಿಲ್ಪಿ ಎಂದು ಅವರು ನುಡಿದರು.
ಭಾರತದ ಸಂವಿಧಾನ ಇಲ್ಲದಿದ್ದರೆ ರಾಷ್ಟ್ರದ ಪರಿಸ್ಥಿತಿಯನ್ನು ಊಹಿಸಿಕೊಳ್ಳುವುದು ಕಷ್ಟಸಾಧ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಅಭಿಪ್ರಾಯಪಟ್ಟರು.
ಕಾನೂನಿನ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಪುರುಷರಂತೆ ಮಹಿಳೆಯರಿಗೂ ಮತದಾನದ ಹಕ್ಕನ್ನು ನೀಡಿರುವುದು ಸಂವಿಧಾನ ಮಹತ್ವವನ್ನು ತಿಳಿಸುತ್ತದೆ. ಎಲ್ಲರೂ ವಿದ್ಯಾವಂತರಾದಾಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.
ದಲಿತ ಸಂಘರ್ಷ ಸಮಿತಿಯ ದಿವಾಕರ ಅವರು ಮಾತನಾಡಿ ಭಾರತ ಸಂವಿಧಾನವು ಸಾರ್ವಭೌಮ, ಸಮಾಜವಾದಿ, ಸರ್ವಧರ್ಮ, ಸಮಭಾವ, ಎಲ್ಲರನ್ನು ಒಳಗೊಂಡಿದೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಅವಿರತ ಪ್ರಯತ್ನ, ಪ್ರಕಂಡ ಕಾನೂನು ಜ್ಞಾನದಿಂದ ಭಾರತದ ಸಂವಿಧಾನವನ್ನು ರಚಿಸಲಾಗಿದೆ. ಡಾ. ಅಂಬೇಡ್ಕರ್ ಅವರ ಪರಿಶ್ರಮದ ಫಲವನ್ನು ಇಂದಿನ ಭಾರತದ ಪ್ರಜೆಗಳಾದ ನಾವೆಲ್ಲರೂ ಅನುಭವಿಸುತ್ತಿದ್ದೇವೆ. ಆದ್ದರಿಂದ ನಾವೆಲ್ಲರೂ ಸಮಾನತೆಯ ಸಮಾಜವನ್ನು ಕಟ್ಟುವಲ್ಲಿ ಈಗಿನಿಂದಲೇ ಕಟಿಬದ್ಧರಾಗಿದ್ದು, ಶ್ರಮಿಸೋಣ ಎಂದು ಕರೆ ಇತ್ತರು.
ನಗರಸಭೆ ಸದಸ್ಯರಾದ ಮನ್ಸೂರ್ ಅವರು ಮಾತನಾಡಿ ಸಾಮಾಜಿಕ, ಆರ್ಥಿಕ, ರಾಜಕೀಯ ಅಭಿವ್ಯಕ್ತಿ ಹೊಂದಿದ್ದು, ಸಮಾನ ಅವಕಾಶವನ್ನು ಸಂವಿಧಾನ ಒಳಗೊಂಡಿದೆ ಎಂದರು.
ಭಾರತ ಸಂವಿಧಾನದಲ್ಲಿ ಯಾವುದೇ ಭಾಷೆ, ಧರ್ಮ, ಜಾತಿ, ಲಿಂಗ ತಾರತಮ್ಯ ಇಲ್ಲದೇ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಆಶಯದಡಿ ಸಮಾನತೆಯನ್ನು ಬೋಧಿಸಲಾಗಿದೆ. ಅದರಂತೆ ಭಾರತದ ಪ್ರಜೆಗಳಾದ ನಾವೆಲ್ಲರೂ ಪ್ರೀತಿ, ವಿಶ್ವಾಸ, ಸಮಾನತೆಯಿಂದ ಬದುಕಿ ಸದೃಢ ಸಮಾಜವನ್ನು ಕಟ್ಟಬೇಕಿದೆ ಎಂದು ಕರೆಕೊಟ್ಟರು.
ಸ್ಕೌಟ್ಸ್ ಮತ್ತು ಗೈಡ್ಸ್ನ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಮಾತನಾಡಿ ಭಾರತ ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ ಒದಗಿಸಿದೆ ಆ ನಿಟ್ಟಿನಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಅರಿವು ಮೂಡಿಸಿದೆ ಎಂದು ಹೇಳಿದರು.
ಕಾರ್ಯಕ್ರಮದ ಇನ್ನೋರ್ವ ಅತಿಥಿಯಾದ ನಿರ್ವಾಣಪ್ಪ ಅವರು ಮಾತನಾಡಿ ಭಾರತದ ಸಂವಿಧಾನವು ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿದ್ದು, ನಮ್ಮ ಸಂವಿಧಾನ ರಚನೆಯ ಹಿಂದೆ ಶ್ರೇಷ್ಠ ಮಾನವತಾವಾದಿಯಾದ ಡಾ.ಬಿ.ಆರ್.ಅಂಬೇಡ್ಕರ್ ಅವರ ಶ್ರಮ ಅಪರಿಮಿತವಾಗಿದೆ. ಈ ರೀತಿಯಾಗಿ ಸಂವಿಧಾನವನ್ನು ಭಾರತದ ಪ್ರಜೆಗಳಾದ ನಾವೆಲ್ಲರೂ ಅರಿತು ಅದರಂತೆ ಕಾರ್ಯಪ್ರವೃತ್ತರಾಗಬೇಕಾದ ಅಗತ್ಯತೆಯಿದ್ದು, ಸಂವಿಧಾನ ಜಾಗೃತಿ ಜಾಥಾವು ಒಂದು ಉತ್ತಮ ಕಾರ್ಯಕ್ರಮವಾಗಿದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅವರು ಮಾತನಾಡಿದರು. ಭಾಗಮಂಡಲ ಕಾವೇರಿ ಕಾಲೇಜಿನ ಪ್ರಾಂಶುಪಾಲರಾದ ಕೆ.ಜೆ.ದಿವಾಕರ, ತಹಶೀಲ್ದಾರ್ ಪ್ರವೀಣ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ನಗರಸಭೆ ಸದಸ್ಯರಾದ ಬಶೀರ್, ಸ್ಕೌಟ್ಸ್ ಮತ್ತು ಗೈಡ್ಸ್ನ ಕಾರ್ಯದರ್ಶಿ ಬೊಳ್ಳಜ್ಜೀರ ಅಯ್ಯಪ್ಪ, ಹೊನ್ನಪ್ಪ, ಕಲಾವಿದ ರಾಜು ಮತ್ತು ತಂಡದವರು ಅಂಬೇಡ್ಕರ್ ಕುರಿತು ಕ್ರಾಂತಿ ಗೀತೆ ಹಾಡಿದರು. ನಗರಸಭೆ ಪೌರಾಯುಕ್ತರಾದ ವಿಜಯ್ ಸ್ವಾಗತಿಸಿದರು, ಬಾಲಕೃಷ್ಣ ರೈ ವಂದಿಸಿದರು.








