ಮಡಿಕೇರಿ ಮಾ.4 NEWS DESK : ಲೋಕಸಭಾ ಚುನಾವಣೆಯಲ್ಲಿ ಮೈಸೂರು- ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಗೆಲುವಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕೊಡಗು ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಅಪ್ರು ರವೀಂದ್ರ ಕರೆ ನೀಡಿದ್ದಾರೆ.
ಮಡಿಕೇರಿಯ ಬಿಜೆಪಿ ಕಚೇರಿಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಕೊಡಗು ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ಹತ್ತು ವರ್ಷಗಳಿಂದ ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಸಮರ್ಥ ಆಡಳಿತವನ್ನು ನೀಡಿದೆ. ಇನ್ನು ಮುಂದೆಯೂ ದೇಶದ ಅಭ್ಯುದಯಕ್ಕಾಗಿ ಮೋದಿ ಅವರ ನಾಯಕತ್ವದ ಅಗತ್ಯವಿದೆ. ರಾಷ್ಟçದ ಹಿತಕ್ಕಾಗಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಪಣವನ್ನು ನಾವೆಲ್ಲರೂ ತೊಡಬೇಕು. ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಗೆಲುವಿಗಾಗಿ ಅವಿರತ ಶ್ರಮ ವಹಿಸಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಹಾಗೂ ಕೊಡಗು ಮತ್ತು ಮಂಗಳೂರು ಪ್ರಬಾರಿಗಳಾದ ಹೈರೋಡಿ ವಿಠಲ್ ಪೂಜಾರಿ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ಪೂಜಾರಿ, ಎಸ್.ಎನ್.ರಘು, ಉಪಾಧ್ಯಕ್ಷರುಗಳು, ಕಾರ್ಯದರ್ಶಿಗಳು, ಕೋಶಾಧಿಕಾರಿ, ಕಾರ್ಯಕಾರಿಣಿ ಸದಸ್ಯರು, ವಿರಾಜಪೇಟೆ ಮಂಡಲ, ಮಡಿಕೇರಿ ನಗರ, ಮಡಿಕೇರಿ ಗ್ರಾಮಾಂತರ ಮತ್ತು ಸೋಮವಾರಪೇಟೆಯ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ಇದೇ ಸಂದರ್ಭ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರವನ್ನು ನೀಡಲಾಯಿತು.











