ಮಡಿಕೇರಿ ಮಾ.6 NEWS DESK : ಪ್ರಜಾಪ್ರಭುತ್ವ ವ್ಯವಸ್ಥೆಯ ದೇವಾಲಯದಂತ್ತಿರುವ ಕರ್ನಾಟಕ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಕಾಂಗ್ರೆಸ್ ನ ನಾಸಿರ್ ಹುಸೇನ್ ಸಯ್ಯದ್ ಅವರನ್ನು ಕೂಡ ವಿಚಾರಣೆಗೆ ಒಳಪಡಿಸಬೇಕು ಮತ್ತು ರಾಜ್ಯಸಭಾ ಸ್ಥಾನದಿಂದ ವಜಾಗೊಳಿಸಬೇಕು ಎಂದು ಭಾರತೀಯ ಜನತಾ ಪಾರ್ಟಿಯ ವಿರಾಜಪೇಟೆ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಾಕಿಸ್ತಾನದ ಪರ ಘೋಷಣೆ ಕೂಗಿರುವುದು ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟಿದೆ. ಅವರ ಬೆಂಬಲಿಗರೇ ಘೋಷಣೆ ಕೂಗಿರುವುದರಿಂದ ನಾಸಿರ್ ಹುಸೇನ್ ಅವರು ರಾಜ್ಯಸಭಾ ಸ್ಥಾನವನ್ನು ಅಲಂಕರಿಸುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ. ಆದ್ದರಿಂದ ಅವರನ್ನು ರಾಜ್ಯಸಭಾ ಸ್ಥಾನದಿಂದ ಅನರ್ಹಗೊಳಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಕೆಲವು ಸಚಿವರು ವರದಿ ಬರುವ ಮೊದಲೇ ನಾವು ವಿಡಿಯೋ ನೋಡಿದ್ದೇವೆ, ಅದರಲ್ಲಿ ಪಾಕಿಸ್ತಾನದ ಪರ ಯಾವುದೇ ಘೋಷಣೆಗಳನ್ನು ಕೂಗಿಲ್ಲ. ಮಾಧ್ಯಮದವರು ಸುಳ್ಳು ಸುದ್ದಿ ಪ್ರಚಾರ ಮಾಡುತ್ತಿದ್ದಾರೆ ಎಂದು ಜನರ ಹಾದಿ ತಪ್ಪಿಸುವ ಯತ್ನ ಮಾಡಿದ್ದರು. ಒಬ್ಬರು ಸಚಿವರು ಪಾಕ್ ಪರ ಘೋಷಣೆ ಕೂಗಿದ್ದು ಕಾಲ್ಪನಿಕ ಎಂದೆಲ್ಲ ಹೇಳಿಕೆ ನೀಡಿದ್ದರು. ದೇಶದ್ರೋಹದ ಪ್ರಕರಣದ ಬಗ್ಗೆ ಬೇಜವಾಬ್ದಾರಿತನದಿಂದ ಮಾತನಾಡಿರುವ ಸಚಿವರುಗಳು ತಕ್ಷಣ ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು ಎಂದು ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ.
ತಮ್ಮ ಸಮ್ಮುಖದಲ್ಲೇ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದರೂ ನಾಸಿರ್ ಹುಸೇನ್ ಅವರು ಪ್ರಕರಣವನ್ನು ಖಂಡಿಸುವ ಪ್ರಯತ್ನ ಕೂಡ ಮಾಡಿಲ್ಲ. ಏನೂ ನಡೆದೇ ಇಲ್ಲ ಎನ್ನುವಂತೆ ವರ್ತಿಸಿರುವುದಲ್ಲದೆ, ಪ್ರಶ್ನೆ ಕೇಳಿದ ಪತ್ರಕರ್ತರನ್ನು ನಿಂದಿಸಿದ್ದಾರೆ. ಆ ಮೂಲಕ ಪ್ರಕರಣವನ್ನು ತಿರುಚಲು ನೋಡಿದ್ದಾರೆ ಎಂದು ಆರೋಪಿಸಿರುವ ಅವರು, ಪಾಕ್ ಪರ ಘೋಷಣೆ ಕೂಗಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ.









