ಮಡಿಕೇರಿ ಮಾ.20 NEWS DESK : ಪೌತಿ ಖಾತೆ ವರ್ಗಾವಣೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ 50 ಸಾವಿರ ರೂ. ಹಣ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಮಡಿಕೇರಿ ಲೋಕಾಯುಕ್ತ ಪೊಲೀಸರು ಮಧ್ಯವರ್ತಿಯನ್ನು ಬಂಧಿಸಿದ್ದಾರೆ. ಉಪ ನೋಂದಣಾಧಿಕಾರಿ ಹಾಗೂ ವಿವಾಹ ನೋಂದಣಾಧಿಕಾರಿಗಳ ಕಚೇರಿಯ ಸಮೀಪದಲ್ಲೇ ಜೆರಾಕ್ಸ್ ಮಳಿಗೆ ಹೊಂದಿರುವ ಹರಿದತ್ ಎಂಬಾತನೇ ಬಂಧಿತ ಮಧ್ಯವರ್ತಿಯಾಗಿದ್ದಾನೆ.
ಭಾಗಮಂಡಲ ಕೋರಂಗಾಲ ಗ್ರಾಮ ನಿವಾಸಿ ಎನ್.ಕುಮಾರ್ ಎಂಬವರು ತಮ್ಮ ಪೌತಿ ಖಾತೆ ವರ್ಗಾವಣೆ ಮಾಡಿಕೊಡಲು ಉಪ ನೋಂದಣಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ 50 ಸಾವಿರ ರೂ. ಲಂಚದ ಬೇಡಿಕೆ ಇಡಲಾಗಿತ್ತು ಎಂದು ಆರೋಪಿಸಲಾಗಿದೆ. ಇದರಿಂದ ಮನನೊಂದ ಕುಮಾರ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ಇಂದು ಕುಮಾರ್ ಅವರಿಂದ ಹಣ ಪಡೆಯುತ್ತಿದ್ದ ಮಧ್ಯವರ್ತಿ ಹರಿದತ್ ಎಂಬಾತನನ್ನು ಆತನ ಜೆರಾಕ್ಸ್ ಮಳಿಗೆಯಲ್ಲಿಯೇ ಹಣದ ಸಹಿತ ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
ಲೋಕಾಯುಕ್ತ ದಾಳಿಯ ವೇಳೆ ಸಬ್ ರಿಜಿಸ್ಟ್ರಾರ್ ಅಧಿಕಾರಿ ಸೌಮ್ಯಲತಾ ಎಂಬುವವರು ಕಚೇರಿಯಿಂದ ದಿಢೀರನೆ ತೆರಳಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಲಂಚ ಪ್ರಕರಣದಲ್ಲಿ ಸಬ್ ರಿಜಿಸ್ಟ್ರಾರ್ ಅಧಿಕಾರಿಯ ಪಾತ್ರದ ಬಗ್ಗೆಯೂ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಲೋಕೇಶ್ ಹಾಗೂ ರೂಪಾಶ್ರೀ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿದರು.








