ಮಡಿಕೇರಿ ಏ.11 NEWS DESK : ಮತಗಳಿಕೆಗಾಗಿ ಪರಿಶಿಷ್ಟರ ಹಾದಿ ತಪ್ಪಿಸುವ ಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿರುವ ಕರ್ನಾಟಕದ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನಸಾಮಾನ್ಯರು, ದೀನ ದಲಿತರು, ಪರಿಶಿಷ್ಟರು, ಕಾರ್ಮಿಕರು, ಕಡುಬಡವರು ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡÀರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದೆ.
ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಮಾತನಾಡಿ ಜಿಲ್ಲೆಯಲ್ಲಿ ಅಭಿವೃದ್ಧಿಪರ ಚಿಂತನೆಯ ಇಬ್ಬರು ಕಾಂಗ್ರೆಸ್ ಶಾಸಕರಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡ ಅವರನ್ನು ಗೆಲ್ಲಿಸಿದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನ ದೊರೆಯಲಿದೆ. ಆದ್ದರಿಂದ ಎಲ್ಲರೂ ಲಕ್ಷ್ಮಣ್ ಅವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಕೊಡಗಿನಲ್ಲಿ ಈ ಹಿಂದೆ ಇದ್ದ ಶಾಸಕರನ್ನು ಜನಸಾಮಾನ್ಯರು ಭೇಟಿ ಮಾಡುವುದೇ ಕಷ್ಟಕರವಾಗಿತ್ತು. ಆದರೆ ಈಗ ಇರುವ ಇಬ್ಬರು ಕಾಂಗ್ರೆಸ್ ಶಾಸಕರು ಕೇವಲ ಒಂದು ಫೋನ್ ಕರೆಗೆ ಜನಸಾಮಾನ್ಯರ ಮನವಿಗೆ ತಕ್ಷಣ ಸ್ಪಂದಿಸುವ ಮನೋಸ್ಥಿತಿ ಹೊಂದಿದ್ದಾರೆ. ಅಲ್ಲದೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಕೇಂದ್ರ ಸರ್ಕಾರ ಶ್ರೀಮಂತರ ಪರವಾಗಿದ್ದು, ಬಂಡವಾಳಶಾಹಿಗಳ ಸಾಲಮನ್ನಾ ಮಾಡುವ ಮೂಲಕ ಜನಸಾಮಾನ್ಯರು, ದೀನ ದಲಿತರು, ಪರಿಶಿಷ್ಟರು, ಕಾರ್ಮಿಕರನ್ನು ಕಡೆಗಣಿಸಿದೆ. ಕೇವಲ ಮತಗಳಿಕೆಗಾಗಿ ಬಿಜೆಪಿ ಪರಿಶಿಷ್ಟರನ್ನು ಓಲೈಸುತ್ತಿದೆ. ಅಧಿಕಾರ ಸ್ಥಾನದಲ್ಲಿ ಮತ್ತು ಪಕ್ಷದಲ್ಲಿ ಅದು ಪರಿಶಿಷ್ಟರಿಗೆ ಯಾವುದೇ ಉನ್ನತ ಸ್ಥಾನಮಾನಗಳನ್ನು ನೀಡಿಲ್ಲ ಎಂದು ಆರೋಪಿಸಿದರು.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಆಡಳಿತಕ್ಕೆ ಬಂದ ಕೇವಲ 10 ತಿಂಗಳಲ್ಲೇ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಹಾಗೂ ನಿರುದ್ಯೋಗಳಿಗೆ ಐದು ಗ್ಯಾರಂಟಿಗಳ ಮೂಲಕ ಬಲ ತುಂಬಿದೆ. ಬಡವರ ಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ಎಲ್ಲರೂ ಬೆಂಬಲಿಸಬೇಕು ಎಂದು ದಿವಾಕರ್ ಮನವಿ ಮಾಡಿದರು.
ಸಮಿತಿಯ ಮಡಿಕೇರಿ ತಾಲ್ಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಮಾತನಾಡಿ, ದೇಶದ ಭವಿಷ್ಯ ನಿರ್ಧರಿಸುವ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಲೋಕಸಭೆಗೆ ಆಯ್ಕೆಯಾಗಿ ಹೋಗುವ ಸಂಸದರು ತಮ್ಮ ಕ್ಷೇತ್ರದ ಜನಸಾಮಾನ್ಯರು, ದೀನ ದಲಿತರು, ಪರಿಶಿಷ್ಟರು, ಕಾರ್ಮಿಕರು, ಕಡು ಬಡವರ ಬಗ್ಗೆ ಕಾಳಜಿ ಹೊಂದಿರುವವರು ಆಗಿರಬೇಕಾಗುತ್ತದೆ. ಆದರೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಈ ಹಿಂದೆ ಹತ್ತು ವರ್ಷಗಳ ಕಾಲ ಸಂಸದರಾಗಿದ್ದವರು ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಬಡವರ ಏಳಿಗೆ ಬಗ್ಗೆ ಯಾವುದೇ ಆಸಕ್ತಿ ತೋರಿಲ್ಲ ಎಂದು ಆರೋಪಿಸಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯುದಯಕ್ಕಾಗಿ ಕಾಂಗ್ರೆಸ್ ಪಕ್ಷ ಜನಪರ ಯೋಜನೆಗಳನ್ನು ರೂಪಿಸುತ್ತಲೇ ಬಂದಿದೆ. ಆದ್ದರಿಂದ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡ ಅವರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಬೆಂಬಲಿಸಲಿದೆ. ಅಲ್ಲದೆ ಜನಸಾಮಾನ್ಯರು, ದೀನ ದಲಿತರು, ಕಾರ್ಮಿಕರು, ಕಡು ಬಡವರು, ಅಲ್ಪಸಂಖ್ಯಾತರು, ನಿವೇಶನ ವಂಚಿತರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕರೆ ನೀಡಿದರು.
ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡ ಅವರು ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿದ್ದಾರೆ. ಇವರು ಸಂಸದರಾಗಿ ಆಯ್ಕೆಯಾದರೆ ಎಲ್ಲಾ ವರ್ಗದ ಜನರಿಗೆ ಸುಲಭವಾಗಿ ಸಿಗಬಲ್ಲರು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸ್ಪಂದಿಸಬಲ್ಲವರಾಗಿದ್ದಾರೆ. ಜನಸಾಮಾನ್ಯರೊಂದಿಗೆ ಬೆರೆತು ಕೆಲಸ ಮಾಡಲಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜವಂಶಸ್ಥರಾಗಿದ್ದು, ಗೆದ್ದ ನಂತರ ಅವರನ್ನು ಭೇಟಿ ಮಾಡುವುದು ಹೇಗೆ ಎನ್ನುವ ಸಂಶಯ ಜನಸಾಮಾನ್ಯರಿಗೆ ಮೂಡುವುದು ಸಹಜ. ಆದ್ದರಿಂದ ಸಾಮಾನ್ಯ ವ್ಯಕ್ತಿಯಾಗಿ ದಕ್ಷತೆಯನ್ನು ಹೊಂದಿರುವ ಎಂ.ಲಕ್ಷ್ಮಣ ಗೌಡ ಅವರ ಗೆಲುವನ್ನು ನಾವು ಬಯಸುತ್ತೇವೆ ಎಂದು ಹೇಳಿದರು.
ಕಳೆದ 10 ವರ್ಷಗಳಿಂದ ಮೈಸೂರು- ಕೊಡಗು ಕ್ಷೇತ್ರವನ್ನು ಪ್ರತಿನಿಧಿಸಿದ್ದ ಬಿಜೆಪಿ ಸಂಸದರು ಒಂದು ದಿನವೂ ಪರಿಶಿಷ್ಟರು, ಆದಿವಾಸಿಗಳು ಹಾಗೂ ಕಾರ್ಮಿಕರ ಪರವಾಗಿ ಧ್ವನಿ ಎತ್ತಿಲ್ಲ. ವನ್ಯಜೀವಿಗಳ ದಾಳಿಯಿಂದ ಪ್ರಾಣ ಕಳೆದುಕೊಂಡ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುವ ಕನಿಷ್ಠ ಮಾನವೀಯತೆಯನ್ನು ಕೂಡ ತೋರಿಲ್ಲ ಎಂದು ದೀಪಕ್ ಪೊನ್ನಪ್ಪ ಟೀಕಿಸಿದರು.
ಕೇಂದ್ರ ಸರಕಾರದ ತೆರಿಗೆ ಹೊರೆ ಮಾತ್ರವಲ್ಲದೆ ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ದೇಶದ ಜನ ತತ್ತರಿಸಿ ಹೋಗಿದ್ದಾರೆ. ಈ ಹಂತದಲ್ಲೇ ಕರ್ನಾಟದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರಕಾರ ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರಿಗೆ ನೆರವಾಗಿದೆ. ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುತ್ತಿದ್ದಾರೆ, ಮನೆಯಲ್ಲೇ ಇದ್ದ ಮಹಿಳೆಯರು ಉಚಿತ ಬಸ್ ಸೇವೆಯಿಂದ ಸಮಾಜದ ಮುಖ್ಯ ವಾಹಿನಿಯಲ್ಲಿ ಸ್ವತಂತ್ರವಾಗಿ ಗುರುತಿಸಿಕೊಳ್ಳುವಂತಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣದಿಂದ ಮನೆಯ ಖರ್ಚುವೆಚ್ಚವನ್ನು ನಿಭಾಯಿಸುತ್ತಿದ್ದಾರೆ. ನಿರುದ್ಯೋಗಿ ಯುವ ಸಮೂಹ ಉದ್ಯೋಗ ಸಿಗುವವರೆಗೆ ನೆಮ್ಮದಿಯಿಂದ ಇರುವಂತ್ತಾಗಿದೆ. ಇದೆಲ್ಲದರ ನಡುವೆ ಸರಕಾರ ಅಭಿವೃದ್ಧಿ ಕಾರ್ಯಗಳಿಗೂ ಅನುದಾನ ಬಿಡುಗಡೆ ಮಾಡುತ್ತಿದೆ. ಕೊಡಗು ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರುಗಳು ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯಗಳನ್ನು ತಮ್ಮ ತಮ್ಮ ಕ್ಷೇತ್ರದಲ್ಲಿ ಕೈಗೊಂಡಿದ್ದಾರೆ. ಕಳೆದ 25 ವರ್ಷಗಳಿಂದ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದ ಗಿರಿಜನ ಹಾಡಿಗಳಿಗೆ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದ್ದಾರೆ. ನಿವೇಶನ ವಂಚಿತರಿಗೆ ನಿವೇಶನ ನೀಡಲು ಯೋಜನೆ ರೂಪಿಸುತ್ತಿದ್ದಾರೆ. ಕಾಂಗ್ರೆಸ್ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಬಿಜೆಪಿ ಪರಿಶಿಷ್ಟರಿಗೆ ಮೀಸಲಾದ ಅನುದಾನವನ್ನು ಬೇರೆ ಕಾರ್ಯಗಳಿಗೆ ಸರಕಾರ ಬಳಸುತ್ತಿದೆ ಎಂದು ಸುಳ್ಳು ಆರೋಪ ಮಾಡುತ್ತಿರುವುದಾಗಿ ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನಾ ಸಂಚಾಲಕ ಹೆಚ್.ಆರ್.ಶ್ರೀಕಂಠಯ್ಯ ಹಾಗೂ ಪೊನ್ನಂಪೇಟೆ ತಾಲ್ಲೂಕು ಸಂಚಾಲಕ ಹೆಚ್.ಆರ್.ಜಗದೀಶ್ ಉಪಸ್ಥಿತರಿದ್ದರು.







