
ಮಡಿಕೇರಿ ಮೇ 17 NEWS DESK : ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ಅರಣ್ಯ ಇಲಾಖೆ ನಡೆಸುತ್ತಿರುವ ಮರಗಳ ಗಣತಿ ಕಾರ್ಯವನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಅರಣ್ಯ ಭವನದ ಎದುರು ಅರಣ್ಯ ಇಲಾಖೆ ಮತ್ತು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಮರ ಗಣತಿ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು.
ರಾಜ್ಯ ಕಾಂಗ್ರೆಸ್ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಮತ್ತು ವಿನಾಕಾರಣ ಬೆಳೆಗಾರರಿಗೆ ಕಿರುಕುಳ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಮರಗಳ ಸರ್ವೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಲಾಗುತ್ತಿರುವ ಬಗ್ಗೆ ಅರಿವಿದ್ದರು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಉದ್ದೇಶ ಪೂರ್ವಕವಾಗಿಯೇ ಇಂದು ಬೆಂಗಳೂರಿನ ಸಭೆಯ ನೆಪದಲ್ಲಿ ಗೈರು ಹಾಜರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಖಾಸಗಿ ಜಮೀನುಗಳಲ್ಲಿನ ಮರಗಳ ಸರ್ವೇ ಸುತ್ತೋಲೆ ಹಿಂದಕ್ಕೆ ಪಡೆಯಬೇಕೆನ್ನುವ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಹೋರಾತ್ರಿ ಹೋರಾಟಕ್ಕೂ ಸಿದ್ಧವೆಂದು ಎಚ್ಚರಿಕೆ ನೀಡಿದರು.
ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಜಿಲ್ಲೆಯ ಜನತೆಗೆ ಒಂದಿಲ್ಲ ಒಂದು ಕಿರುಕುಳವನ್ನು ನೀಡುತ್ತಲೆ ಬರುತ್ತಿದೆ. ಖಾಸಗಿ ಜಾಗಗಳಲ್ಲಿನ ಮರಗಳ ಸರ್ವೇ ಕಾರ್ಯಕ್ಕೆ ಇಲಾಖಾಧಿಕಾರಿಗಳು ಸುತ್ತೋಲೆ ಹೊರಡಿಸಿ ಅನಗತ್ಯ ತೊಂದರೆಯನ್ನು ನೀಡಲು ಮುಂದಾಗಿದ್ದಾರೆ. ಜಿಲ್ಲೆಯ ಸಿ ಮತ್ತು ಡಿ ದರ್ಜೆಯ ಜಾಗಗಳಲ್ಲಿ ತಲೆ ತಲಾಂತರಗಳಿಂದ ಬದುಕು ಕಟ್ಟಿಕೊಂಡು ಬಂದವರಿಗೆ ಹಕ್ಕುಪತ್ರ ನೀಡುವ ಹಂತದಲ್ಲಿ ಅರಣ್ಯ ಇಲಾಖೆ ತಡೆಯೊಡ್ಡುತ್ತಿದೆ. ಜಿಲ್ಲೆಯಲ್ಲಿ ಧಾರ್ಮಿಕ ಆಚರಣೆಗಳ ಭಾಗವಾಗಿ ವನ್ಯ ಜೀವಿಗಳ ಕೊಂಬುಗಳನ್ನು, ಗರಿಗಳನ್ನು ಬಳಸಲಾಗುತ್ತಿದೆ. ಇದೀಗ ಇವುಗಳನ್ನು ಇಲಾಖೆಯ ವಶಕ್ಕೆ ನೀಡಬೇಕೆನ್ನುವ ಆದೇಶವನ್ನು ಹೊರಡಿಸುವ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಧಾರ್ಮಿಕ ಆಚರಣೆಗಳಿಗೆ ಬಳಸುವ ವನ್ಯಜೀವಿಗಳ ಕೊಂಬು, ಗರಿಗಳು ಈಗ ಸಂಗ್ರಹಿಸಿದ್ದಲ್ಲ, ಅದು ತಲೆ ತಲಾಂತರಗಳಿಂದ ಬಂದಿರುವ ವಸ್ತುಗಳಾಗಿದ್ದು, ಅವುಗಳನ್ನು ತಮ್ಮ ಬಳಿಯೇ ಇರಿಸಿಕೊಳ್ಳಲು ಅವಕಾಶ ಕಲ್ಪಿಸಲೇಬೇಕೆಂದು ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ಜಿಲ್ಲೆಯ ಬೆಳೆಗಾರರು ತಮ್ಮ ಜಾಗಗಳಲ್ಲಿನ ಮರಗಳನ್ನು ತಲೆ ತಲಾಂತರಗಳಿಂದ ಸಂರಕ್ಷಿಸಿಕೊಂಡು ಬಂದಿದ್ದಾರೆ. ಇದೀಗ ಇಂತಹ ಮರಗಳ ಸರ್ವೇ ಕಾರ್ಯ ಮಾಡುವುದೇಕೆಂದು ಪ್ರಶ್ನಿಸಿ, ಕೇರಳದ ಗಡಿ ಭಾಗದಲ್ಲಿರುವ ಅರಣ್ಯದ ಸುಮಾರು ಒಂದು ಕಿ.ಮೀ.ನಷ್ಟು ಭಾಗದಲ್ಲಿ ವ್ಯಾಪಕ ಮರಹನನವಾಗಿ ಜಾಗ ಖಾಲಿಯಾಗಿದೆ. ಅಂತಹ ಪ್ರದೇಶಗಳಲ್ಲಿನ ಮರಗಳ ಸಂರಕ್ಷಣೆಗೆ ಮುಂದಾಗದ ಅರಣ್ಯ ಇಲಾಖೆ ಖಾಸಗಿ ಜಾಗದ ಮರಗಳ ಸರ್ವೇಗೆ ಮುಂದಾದಲ್ಲಿ ಅವರನ್ನು ಹಿಂದಕ್ಕೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯರಾದ ಸುನಿಲ್ ಸುಬ್ರಮಣಿ, ಎಸ್.ಜಿ.ಮೇದಪ್ಪ, ಪ್ರಮುಖರಾದ ಕೋಡಿ ಪೊನ್ನಪ್ಪ, ರೀನಾ ಪ್ರಕಾಶ್, ಡಾ.ಬಿ.ಸಿ.ನವೀನ್ ಕುಮಾರ್ ಮಾತನಾಡಿ ಸರ್ಕಾರದ ಧೋರಣೆಯನ್ನು ಖಂಡಿಸಿದರು.
ಅರಣ್ಯ ಇಲಾಖಾ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಮೂಲಕ ರಾಜ್ಯಪಾಲರಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮನವಿ ಸಲ್ಲಿಸಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರರಾದ ಸುಬ್ರಮಣ್ಯ ಉಪಾಧ್ಯಾಯ, ಬಿ.ಕೆ.ಅರುಣ್ ಕುಮಾರ್, ತಳೂರು ಕಿಶೋರ್ ಕುಮಾರ್, ಶಾಂತೆಯಂಡ ರವಿ ಕುಶಾಲಪ್ಪ, ನಾಗೇಶ್ ಕುಂದಲ್ಪಾಡಿ, ಬಲ್ಲಾರಂಡ ಮಣಿ ಉತ್ತಪ್ಪ, ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.









