
ಸೋಮವಾರಪೇಟೆ ಮೇ 29 NEWS DESK : ಮಂಡಲ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಕೊಡವ ಸಮಾಜ ಸಭಾಂಗಣದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆ ನಡೆಯಿತು.
ಸಭೆಯಲ್ಲಿ ಭಾಗವಹಿಸಿದ್ದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು, ಕೊಡಗಿನ ಪದವೀಧರರ ಧ್ವನಿಯಾಗಿ ವಿಧಾನ ಪರಿಷತ್ನಲ್ಲಿ ಕಾರ್ಯನಿರ್ವಹಿಸುವೆ ಎಂದು ಹೇಳಿದರು.
ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿಯಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಎನ್ಡಿಓ ಮೂಲಕ ಚುನಾವಣೆಗೆ ಸ್ಪರ್ಧಿಸಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದರು.
ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ, ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರ ಸಂಖ್ಯೆ ಕಡಿಮೆಯಿದ್ದು, ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗುವಂತೆ ನೋಡಿಕೊಳ್ಳಬೇಕು. ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ನ ಭೋಜೇಗೌಡ ಹಾಗೂ ಪದವೀಧರರ ಕ್ಷೇತ್ರದಿಂದ ಬಿಜೆಪಿಯ ಧನಂಜಯ ಸರ್ಜಿ ಅವರನ್ನು ಗೆಲ್ಲಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಮತ್ತೋರ್ವ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರವನ್ನು ಎನ್ಡಿಎ ಗೆಲ್ಲಬೇಕು. ಕಾರ್ಯಕರ್ತರು ಹೆಚ್ಚಿನ ಜವಾಬ್ದಾರಿ ತೆಗೆದುಕೊಂಡು ಚುನಾವಣೆಯಲ್ಲಿ ಕೆಲಸ ಮಾಡಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಹಾಗೂ ಕೊಡಗು ಜಿಲ್ಲಾ ಚುನಾವಣಾ ಉಸ್ತುವಾರಿ ಅರುಣ್ಕುಮಾರ್ ಮಾತನಾಡಿ, 1988ರಿಂದಲೂ ಈ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಅಭ್ಯರ್ಥಿಗಳ ಜೊತೆಗೆ ಕಾರ್ಯಕರ್ತರೂ ಗೆದ್ದಿದ್ದಾರೆ. ಈ ಬಾರಿಯೂ ಅದೇ ಫಲಿತಾಂಶ ಬರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ಮಾಜಿ ಎಂಎಲ್ಸಿ ಎಸ್.ಜಿ. ಮೇದಪ್ಪ, ಬಿಜೆಪಿ ಪ್ರಮುಖರಾದ ಮನುಕುಮಾರ್ ರೈ, ವಿ.ಕೆ.ಲೋಕೇಶ್, ಡಾ. ಬಿ.ಸಿ.ನವೀನ್ಕುಮಾರ್, ಗೌತಮ್, ಅನಿತಾ ಪೂವಯ್ಯ, ಚಲನ್, ಜೆಡಿಎಸ್ ಪ್ರಮುಖರಾದ ನಾಗರಾಜ್, ಪ್ರವೀಣ್ ಸೇರಿದಂತೆ ಇತರರು ಹಾಜರಿದ್ದರು. 







