
ಮಡಿಕೇರಿ ಜೂ.1 NEWS DESK : ನಾವು ಪ್ರಾಕೃತಿಕ ಸಂಪನ್ಮೂಲಗಳನ್ನು ಸಂರಕ್ಷಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡಬೇಕಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಹೇಳಿದರು.
ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪ್ರಾದೇಶಿಕ ಕಚೇರಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯಲ್ಲಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ಪರಿಸರ ಸಂರಕ್ಷಣೆ ಕುರಿತು ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾವು ನೆಲ- ಜಲ, ಅರಣ್ಯ, ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪರಿಸರ ಮಾಲಿನ್ಯ ಉಂಟಾಗದ ರೀತಿಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ. ಪ್ರಾಕೃತಿಕ ಸಂಪನ್ಮೂಲ ಸಂರಕ್ಷಣೆಗೆ ಎಲ್ಲರೂ ಪಣ ತೊಡಬೇಕಿದೆ ಎಂದರು.
ವಿಶ್ವ ಪರಿಸರ ದಿನಾಚರಣೆಯ ಮಹತ್ವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಪರಿಸರ ಅಧಿಕಾರಿ ಎಂ.ಜಿ.ರಘುರಾಮ್, ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಗಿಡಮರ, ನೆಲ- ಜಲ, ಪರಿಸರ, ಪ್ರಕೃತಿಯ ಮೇಲೆ ಪ್ರೇಮ ಮೂಡಿಸಿದರೆ ಭವಿಷ್ಯದಲ್ಲಿ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ ಎಂದ ಅವರು, ಜೂ.5 ರಂದು ನಡೆಯಲಿರುವ ಪರಿಸರ ದಿನಾಚರಣೆಯ ರೂಪುರೇಷೆ ಕುರಿತು ಮಾಹಿತಿ ನೀಡಿದರು.
ಪರಿಸರ ಸಂರಕ್ಷಣೆ ಮತ್ತು ಪರಿಸರ ಜಾಗತಿ ಆಂದೋಲನದ ಕುರಿತು ಮಾತನಾಡಿದ ಇಕೋ-ಕ್ಲಬ್ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮ ಕುಮಾರ್, ವಿದ್ಯಾರ್ಥಿಗಳು ಶಾಲಾ ಪರಿಸರದಲ್ಲಿ ಹೆಚ್ಚು ಸಸಿನೆಟ್ಟು ಬೆಳೆಸುವ ಮೂಲಕ ನೆಲ-ಜಲ ಸಂರಕ್ಷಣೆ, ಜೀವಿ-ವೈವಿಧ್ಯ ಹಾಗೂ ನೀರಿನ ಸಂರಕ್ಷಣೆಯಂತಹ ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ದಿಸೆಯಲ್ಲಿ ಶಾಲೆಯಲ್ಲಿ ಪರಿಸರ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದರು.
ಪರಿಸರ ಸ್ಪರ್ಧೆಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ ಬಿ.ಸಿ.ದೊಡ್ಡೇಗೌಡ ಮಾತನಾಡಿ, ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕ್ರೆಸೆಂಟ್ ಶಾಲೆಯ ಪ್ರಭಾರ ಪ್ರಾಂಶುಪಾಲರಾದ ಸುಲ್ಹತ್, ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಸಂಸ್ಥೆಯ ಪ್ರಮುಖ ತರಬೇತುದಾರರಾದ ಕೆ.ಯು.ರಂಜಿತ್, ಮೈಥಿಲಿರಾವ್, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಸಿ.ಆರ್.ಪಿ.ಗಳಾದ ಸಿ.ಡಿ.ಶೃತಿಶ್ರೀ, ಕಲ್ಪನಾ, ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಮಕ್ಕಳ ಕುಂಚದಿಂದ ಮೂಡಿಬಂದ ಪರಿಸರ ಚಿತ್ರಗಳು : ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಸುಮಾರು 160 ಕ್ಕಿಂತಲೂ ಹೆಚ್ಚಿನ ಮಕ್ಕಳು ಚಿತ್ರಕಲೆ ಸ್ಪರ್ಧೆ ಮತ್ತು 30 ಮಕ್ಕಳು, 30 ಮಕ್ಕಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮಕ್ಕಳ ಪರಿಸರ ಜಾಗೃತಿ ಮೂಡಿಸುವ ಚಿತ್ರ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.
ಸ್ಪರ್ಧೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳೊಂದಿಗೆ ಅಂಗನವಾಡಿ ಮಕ್ಕಳು, ಎಲ್.ಕೆ.ಜಿ. ಮತ್ತು ಯು.ಕೆ.ಜಿ.ಮಕ್ಕಳು ಕೂಡ ಅತಿ ಉತ್ಸಾಹದಿಂದ ಪಾಲ್ಗೊಂಡು ಪರಿಸರ ಸಂರಕ್ಷಣೆ ಕುರಿತು ವೈವಿಧ್ಯಮಯ ಚಿತ್ರಗಳನ್ನು ರಚಿಸಿದ್ದರು.
ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ಹಾಳು ಮಾಡುತ್ತಿರುವುದನ್ನು ಪರಿಸರ ನಾಶ, ಬರಗಾಲಕ್ಕೆ ಆಹ್ವಾನ ನಿರೂಪಿಸುವ ಚಿತ್ರ, ಅರಣ್ಯ ನಾಶ, ಮನುಷ್ಯನಿಂದ ಜೀವ ಭಿಕ್ಷೆ ಬೇಡುತ್ತಿರುವ ವೃಕ್ಷ ದೇವತೆ, ಸುಂದರ ಪರಿಸರದ ರಮಣೀಯ ಚಿತ್ರಗಳು, ನೆಲ- ಜಲ, ಅರಣ್ಯ, ಜೀವ ವೈವಿಧ್ಯ ಹಾಗೂ ಪರಿಸರದ ವಿವಿಧ ಪ್ರಕಾರಗಳ ಕುರಿತು ಮಕ್ಕಳ ಕುಂಚಗಳಲ್ಲಿ ಮೂಡಿ ಬಂದಿದ್ದು ಪರಿಸರ ಪ್ರಿಯರ ಗಮನ ಸೆಳೆಯಿತು.








