
ಸೋಮವಾರಪೇಟೆ ಜೂ.12 NEWS DESK : ಸೋಮವಾರಪೇಟೆ ತಾಲ್ಲೂಕು ಮೊಗೇರ ಸೇವಾ ಸಮಾಜದ ವತಿಯಿಂದ ಪಟ್ಟಣದ ಪತ್ರಿಕಾ ಭವನದಲ್ಲಿ ಈಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಸಮುದಾಯದ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೊಗೇರ ಸೇವಾ ಸಮಿತಿಯ ರಾಜ್ಯ ಸಮಿತಿ ಸದಸ್ಯ ಪಿ.ಕೆ.ಚಂದ್ರು ಮಾತನಾಡಿ, ಮೊಗೇರ ಸಮಾಜದ ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು. ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕೆಂದು ಕರೆ ನೀಡಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಜನಾರ್ಧನ್ ಮಾತನಾಡಿ, ಮೊಗೇರ ಸಮಾಜದ ವತಿಯಿಂದ ಸಮುದಾಯದ ಅಭಿವೃದ್ಧಿಗೆ ಹಲವಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಸಮುದಾಯದವರು ಸಂಘಟನೆಯಾದಲ್ಲಿ ಮಾತ್ರ ಎಲ್ಲಾ ರೀತಿಯ ಸವಲತ್ತು ಪಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಸಂಘವನ್ನು ಇನ್ನಷ್ಟು ಬಲಪಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಬಿ.ಎಂ. ದಾಮೋಧರ್, ಕಾರ್ಯದರ್ಶಿ ಹರೀಶ್, ತಾಲೂಕು ಅಧ್ಯಕ್ಷ ವಸಂತ್, ಕಾರ್ಯದರ್ಶಿ ಕೆ.ಕೆ. ಗಣೇಶ್, ಉಪಾಧ್ಯಕ್ಷ ಹರೀಶ್, ಖಜಾಂಚಿ ಜಯಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.









