ಮಡಿಕೇರಿ ಜೂ.19 NEWS DESK : ಜನಸಾಮಾನ್ಯರಿಗೆ ಹೊರೆಯಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸರಕಾರ ತಕ್ಷಣ ಇಳಿಕೆ ಮಾಡಬೇಕು. ಸಾಧ್ಯವಾಗದಿದ್ದಲ್ಲಿ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿ ಬಿಜೆಪಿಯ 2ನೇ ಹಂತದ ಹೋರಾಟವಾಗಿ ಜೂ.20ರಂದು ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವಂತೆ ಒತ್ತಾಯಿಸಿ ಜನಪರವಾಗಿ ಇತ್ತೀಚೆಗೆ ರಾಜ್ಯವ್ಯಾಪಿ ತೀವ್ರ ಹೋರಾಟವನ್ನು ನಡೆಸಲಾಗಿದೆ. ಆದರೆ ಸರಕಾರ ಇದಕ್ಕೆ ಸ್ಪಂದನೆ ನೀಡದೆ ನಿರ್ಲಕ್ಷ್ಯ ವಹಿಸಿದೆ. ಎರಡನೇ ಹಂತದ ಪ್ರತಿಭಟನೆಗೂ ಸ್ಪಂದನೆ ದೊರೆಯದಿದ್ದಲ್ಲ್ಲಿ ಗ್ರಾಮ ಮಟ್ಟದಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕುವಲ್ಲಿಯವರೆಗೆ ಹೋರಾಟವನ್ನು ರೂಪಿಸಲಾಗುವುದು ಎಂದರು.
ಜನಪರ ಕಾಳಜಿಯಿಂದ ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ ಗುರುವಾರ ನಡೆಸುತ್ತಿರುವ ಪ್ರತಿಭಟನೆಗೆ ಸಾರ್ವಜನಿಕರು, ಆಟೋ, ಟ್ಯಾಕ್ಸಿ ಮತ್ತಿತರ ವಾಹನ ಚಾಲಕರುಗಳು ಕೂಡ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
ಬಿಜೆಪಿಯ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ ಮಾತನಾಡಿ ರಾಜ್ಯ ಕಾಂಗ್ರೆಸ್ ಸರಕಾರ ಮಹಿಳೆಯರಿಗೆ ರೂ.2 ಸಾವಿರ ನೀಡಿದಂತೆ ಮಾಡಿ ತೆರಿಗೆ ಹೊರೆ ಮತ್ತು ಬೆಲೆ ಏರಿಕೆ ಮೂಲಕ ಮತ್ತೆ ಕಸಿದುಕೊಳ್ಳುತ್ತಿದೆ ಎಂದು ಟೀಕಿಸಿದರು.
ಗುರುವಾರ 10.30 ಗಂಟೆಗೆ ವಿರಾಜಪೇಟೆ ಬಿಜೆಪಿ ಕಚೇರಿಯಿಂದ ಮೆರವಣಿಗೆ ಮೂಲಕ ತೆರಳಿ ಪಟ್ಟಣದ ಮುಖ್ಯ ರಸ್ತೆಗಳನ್ನು ಬಂದ್ ಮಾಡಿ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲಾಗುವುದು. ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದರು.
ಸೋಮವಾರಪೇಟೆ ಮಂಡಲದ ಅಧ್ಯಕ್ಷ ಗೌತಮ್ ಗೌಡ ಮಾತನಾಡಿ ಬೆಳಿಗ್ಗೆ 10.30 ಗಂಟೆಗೆ ಬಿಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ಪುಟ್ಟಪ್ಪ ವೃತ್ತಕ್ಕೆ ತೆರಳಿ ಮೂರು ಮುಖ್ಯ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಮಡಿಕೇರಿ ಮಂಡಲ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಹಾಗೂ ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ ಉಪಸ್ಥಿತರಿದ್ದರು.









