
ಮಡಿಕೇರಿ ಜೂ.24 NEWS DESK : ಕೊಡಗು ಜಿಲ್ಲೆಯ ಕುಶಾಲನಗರ ಸಮುದಾಯ ಆರೋಗ್ಯ ಆಸ್ಪತ್ರೆಗೆ ಮತ್ತು ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಗೆ ತಲಾ 1.75 ಕೋಟಿ ರೂ. ಮತ್ತು ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಗೆ 2 ಕೋಟಿ ರೂ. ಒಟ್ಟು ಸುಮಾರು 5 ಕೋಟಿಯಷ್ಟು ಆಸ್ಪತ್ರೆ ಅಭಿವೃದ್ಧಿಗೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್ ಹೇಳಿದರು.
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ವತಿಯಿಂದ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ಆರಂಬಿಸಲಾಗಿರುವ `ಡಯಾಲಿಸಿಸ್ ಘಟಕ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳನ್ನು ಆರಂಭಿಸಿ ಸುಮಾರು 800 ಯಂತ್ರಗಳನ್ನು ಅಳವಡಿಸಲಾಗಿದೆ. ಹೊಸ ತಾಲ್ಲೂಕು ಕೇಂದ್ರಗಳಲ್ಲಿಯೂ ಸಹ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೊಸ ಹೊಸ ಪ್ರಯೋಗಗಳನ್ನು ಮಾಡಿ ಸುಲಭವಾಗಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗಿದೆ ಎಂದು ಸಚಿವರು ಹೇಳಿದರು.
ಈಗಾಗಲೇ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ 3 ಡಯಾಲಿಸಸ್ ಯಂತ್ರವನ್ನು ಅಳವಡಿಸಲಾಗಿದ್ದು, ಇನ್ನು ಒಂದು ಅಳವಡಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದರು.
`ಕುಶಾಲನಗರ ತಾಲ್ಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಸಕ್ತ ಬಜೆಟ್ನಲ್ಲಿ ಸೇರ್ಪಡೆ ಮಾಡಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.’
ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ ಇದ್ದು, ವೈದ್ಯರು, ಸಿಬ್ಬಂದಿಗಳನ್ನು ನಿಯೋಜಿಸಲು ಹಂತ ಹಂತವಾಗಿ ಕ್ರಮವಹಿಸಲಾಗುವುದು. ಗುತ್ತಿಗೆ ಆಧಾರದಲ್ಲಿಯೂ ಸಹ ನೇಮಕ ಮಾಡಿಕೊಳ್ಳಲು ಮುಂದಾಗಲಾಗುವುದು ಎಂದು ತಿಳಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲಿಯೇ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ ಒದಗಿಸಬೇಕು. ಆ ನಿಟ್ಟಿನಲ್ಲಿ ಔಷಧಿಗಳು ಸೇರಿದಂತೆ ಶೇ.100 ರಷ್ಟು ಔಷಧಿಗಳು ದೊರೆಯುವಂತಾಗಲು ಪ್ರಯತ್ನಿಸಲಾಗಿದೆ. ಇನ್ನು ಮೂರು ನಾಲ್ಕು ತಿಂಗಳಲ್ಲಿ ಶೇ.100 ರಷ್ಟು ಗುರಿ ತಲುಪಲಾಗುವುದು ಎಂದು ದಿನೇಶ್ ಗುಂಡುರಾವ್ ಹೇಳಿದರು.
ಇರುವ ವೈದ್ಯರು ಮತ್ತು ಸಿಬ್ಬಂದಿಗಳು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು. ರೋಗಿಗಳಿಗೆ ಉಪಚರಿಸುವುದು, ಅಗತ್ಯ ಆರೋಗ್ಯ ಸೇವೆ ಕಲ್ಪಿಸುವುದು ಅತೀ ಮುಖ್ಯವಾಗಿದೆ ಎಂದು ದಿನೇಶ್ ಗುಂಡುರಾವ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ವೈದ್ಯರು ಕಡ್ಡಾಯವಾಗಿ ಗ್ರಾಮೀಣ ಸೇವೆ ಸಲ್ಲಿಸಬೇಕು. ಕಳೆದ ಐದು ಆರು ವರ್ಷಗಳಿಂದ ಯಾವುದೇ ಹುದ್ದೆಗಳು ನೇಮಕಾತಿ ನಡೆದಿಲ್ಲ. ಆದ್ದರಿಂದ ವೈದ್ಯರು, ಶ್ರುಶ್ರೂಷಕರು ಮತ್ತು ತಂತ್ರಜ್ಞರ ನೇಮಕಾತಿ ಮಾಡಲಾಗುವುದು ಎಂದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ರಕ್ತದೊತ್ತಡ ಹಾಗೂ ಮಧುಮೇಹ ಮತ್ತಿತರ ರೋಗಗಳಿಗೆ ಡಯಾಲಿಸಿಸ್ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಘಟಕ ಆರಂಭಿಸುವ ಮೂಲಕ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದರು.
ರಕ್ತದೊತ್ತಡ, ಮಧುಮೇಹದಿಂದ ಹಲವು ರೋಗಗಳಿಗೆ ಸಿಲುಕಬೇಕಾಗುತ್ತದೆ. ಆದ್ದರಿಂದ ರೋಗಗಳನ್ನು ತಡೆಯಲು ಡಯಾಲಿಸಿಸ್ ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲರಿಗೂ ಎಲ್ಲೆಡೆ ಆರೋಗ್ಯ ಸೇವೆ ಕಲ್ಪಿಸಲು ಡಯಾಲಿಸಿಸ್ ಘಟಕವನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದಲ್ಲಿಯೂ ಆರಂಭಿಸುವಂತಾಗಬೇಕು ಎಂದು ಶಾಸಕರು ಮನವಿ ಮಾಡಿದರು.
ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದೆ. ಕೊಡಗು ಬೆಟ್ಟಗುಡ್ಡ ಪ್ರದೇಶವಾಗಿರುವುದರಿಂದ ಹೆಚ್ಚಿನ ವೇತನ ನೀಡುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ಡಾ.ಮಂತರ್ ಗೌಡ ಕೋರಿದರು.
ಕೂಡಿಗೆ ಕೈಗಾರಿಕಾ ಪ್ರದೇಶಕ್ಕೆ ಮಾಜಿ ಮುಖ್ಯಮಂತ್ರಿ ಗುಂಡುರಾವ್ ಅವರ ಹೆಸರು ಇಡಲು ಚಿಂತಿಸಲಾಗಿದ್ದು, ಗುಂಡುರಾವ್ ಅವರ ಹೆಸರು ಕುಶಾಲನಗರ ಹಾಗೂ ಕೊಡಗು ಜಿಲ್ಲೆಯಲ್ಲಿ ಶಾಶ್ವತವಾಗಿ ಉಳಿಯಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗುವುದು ಎಂದರು.
ಹೆಬ್ಬಾಲೆ ಮತ್ತು ಸುಂಟಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಅವಕಾಶ ಮಾಡುವಂತೆ ಆರೋಗ್ಯ ಸಚಿವರಲ್ಲಿ ಶಾಸಕರು ಕೋರಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ತಜ್ಞವೈದ್ಯರು ಕೆಲಸ ನಿರ್ವಹಿಸಲು ಆಸಕ್ತಿ ತೋರಬೇಕು ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಕುಶಾಲನಗರ ತಾಲ್ಲೂಕು ಅನುಷ್ಠಾನ ಅಧ್ಯಕ್ಷ ವಿ.ಪಿ.ಶಶಿಧರ ಮಾತನಾಡಿ, ಡಯಾಲಿಸಿಸ್ ಘಟಕ ಆರಂಭಿಸಿ ಬಹಳ ದಿನಗಳ ಬೇಡಿಕೆ ಈಡೇರಿದೆ. ಕುಶಾಲನಗರ ತಾಲ್ಲೂಕು ಅಭಿವೃದ್ಧಿಯ ಪರ್ವ ಆರಂಭವಾಗಿದೆ ಎಂದು ತಿಳಿಸಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ಕೆ.ಪಿ.ಚಂದ್ರಕಲಾ, ಚಂದ್ರಮೌಳಿ, ಮಂಜುನಾಥ್, ಕೆಡಿಪಿ ಸಭೆಯ ಸದಸ್ಯರಾದ ಸುನಿತಾ, ತಹಶೀಲ್ದಾರರಾದ ಕಿರಣ್ ಗೌರಯ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಭಾಗೀಯ ಜಂಟಿ ನಿರ್ದೇಶಕರಾದ ಡಾ.ಪ್ರಸಾದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾದಿಕಾರಿ ಡಾ.ಸತೀಶ್ ಕುಮಾರ್, ತಾಲ್ಲೂಕು ವೈದ್ಯಾಧಿಕಾರಿಗಳು ಇತರರು ಇದ್ದರು.








