ಮಡಿಕೇರಿ ಜು.1 NEWS DESK : ವಿರಾಜಪೇಟೆ ತಾಲ್ಲೂಕಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಾಲ್ಲೂಕು ಆಡಳಿತಾಧಿಕಾರಿಯಾಗಿರುವ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಧನರಾಜ್ ಸೂಚನೆ ನೀಡಿದ್ದಾರೆ.
ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯಸೌಧದಲ್ಲಿ ನಡೆದ ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆಗಳ ಮಾಹಿತಿ ಪಡೆದು ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ಡೆಂಗ್ಯೂ ಪ್ರಕಣಗಳು ಹೆಚ್ಚಾಗುತ್ತಿದ್ದು, ವಿರಾಜಪೇಟೆಯಲ್ಲಿ 15, ಪೊನ್ನಂಪೇಟೆಯಲ್ಲಿ 35 ಪ್ರಕಣಗಳು ಕಂಡು ಬಂದಿದೆ. ಡೆಂಗ್ಯೂ ವ್ಯಾಪಿಸದಂತೆ ತಡೆಕಟ್ಟಲು ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಡೆಂಗ್ಯೂ ನಿಂತ ನೀರಿನಿಂದ ಬರುತ್ತದೆ, ಸೊಳ್ಳೆಗಳು ಉತ್ಪತ್ತಿಯಾಗದಂತೆ ಸಾರ್ವಜನಿಕರು ಎಚ್ಚರವಹಿಸಬೇಕು. ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಕೃಷಿ ಇಲಾಖೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹಲವು ಸೌಲಭ್ಯಗಳಿದ್ದು, ಈ ಕುರಿತು ಅಭಿವೃದ್ಧಿ ಸಾಧಿಸುವಂತೆ ಕೃಷಿ ಅಧಿಕಾರಿಗಳಿಗೆ ತಿಳಿಸಿದರು.
ಪಶುಪಾಲನ ಇಲಾಖೆಯಿಂದ ಈಗಾಗಲೇ ಹಸುಗಳಿಗೆ ಕಾಲು-ಬಾಯಿ ಜ್ವರದ ಲಸಿಕೆಯನ್ನು ಶೇ.93ರಷ್ಟು ನೀಡಲಾಗಿದ್ದು, ಪ್ರಸ್ತುತ ಚರ್ಮಗಂಟು ರೋಗದ ಲಸಿಕೆ ನೀಡಲಾಗುತ್ತಿದೆ ಎಂದು ವಿರಾಜಪೇಟೆ ಪಶುಪಾಲನ ಸಹಾಯಕ ನಿರ್ದೇಶಕ ಡಾ.ನವೀನ್ ಮಾಹಿತಿ ನೀಡಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಕುರಿತು ಚರ್ಚಿಸಿದ ಧನರಾಜ್ ಅವರು ಅಭಿವೃದ್ಧಿಗೆ ಶ್ರಮಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಸಿ.ಅಪ್ಪಣ್ಣ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ತಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು. 









