
ಮಡಿಕೇರಿ ಜು.9 NEWS DESK : ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿ ಹಾಗೂ ಪವಿತ್ರ ಕ್ಷೇತ್ರ ಶ್ರೀಭಗಂಡೇಶ್ವರ ದೇವಾಲಯಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಮತ್ತು ಕುಟುಂಬದವರು ಮಂಗಳವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಎ.ಎಸ್.ಪೊನ್ನಣ್ಣ ಅವರ 50 ನೇ ಜನ್ಮ ದಿನದ ಪ್ರಯುಕ್ತ ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು. ಬಳಿಕ ಮಹಾ ಗಣಪತಿ ದೇವಾಲಯದಲ್ಲಿ ಪೂಜೆ, ನಂತರ ಶ್ರೀಭಗಂಡೇಶ್ವರ ದೇವಾಲಯದ ಆವರಣದಲ್ಲಿ ವಿಶೇಷ ಪ್ರಾರ್ಥನೆ, ನಂತರ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಾಡಿನಲ್ಲಿ ಮತ್ತಷ್ಟು ಮಳೆ ಬೆಳೆಯಾಗಿ ಕೃಷಿಕರು ಸೇರಿದಂತೆ ಎಲ್ಲರಲ್ಲಿ ಸಮೃದ್ಧಿ, ಸಂತಸ ತರುವಂತಾಗಲಿ ಎಂದು ಪ್ರಾರ್ಥಿಸಿದರು. ಬಳಿಕ ಶ್ರೀಮಹಾವಿಷ್ಣು ದೇವರಲ್ಲಿ ಪೂಜೆ ಸಲ್ಲಿಸಿದ ನಂತರ ಸುಬ್ರಮಣ್ಯ ದೇವರಲ್ಲಿ ಪ್ರಾರ್ಥಿಸಿ ಕಲ್ಲುಸಕ್ಕರೆಯ ತುಲಾಭಾರ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ದೇವಂಗೋಡಿ ಹರ್ಷ ಅವರು ಬಡವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕರು ಕೈಲಾದ ಸಹಾಯ ಹಾಗೂ ಸಹಕಾರ ನಿಡುತ್ತಿದ್ದು, ದೇವರು ಒಳ್ಳೆಯದು ಮಾಡಿ ಮತ್ತಷ್ಟು ಉಜ್ವಲ ಭವಿಷ್ಯ ನೀಡಲಿ ಎಂದು ಪ್ರಾರ್ಥಿಸಿದರು.
ಪ್ರಮುಖರಾದ ನೆರವಂಡ ಉಮೇಶ್ ಅವರು ಮಾತನಾಡಿ ಶಾಸಕರ ನೇತೃತ್ವದಲ್ಲಿ ಮುಂದಿನ ದಿನದಲ್ಲಿ ಭಗಂಡೇಶ್ವರ ಸನ್ನಿಧಿಯಲ್ಲಿ ಅಷ್ಟಮಂಗಳ ಪೂಜೆಯೊಂದಿಗೆ ಬ್ರಹ್ಮಕಳಸ ಉತ್ಸವ ನೆರವೇರಿಸಿ, ಜೀರ್ಣೋದ್ಧಾರವಾಗಲಿ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಅರ್ಚಕರಾದ ಹರೀಶ್ ಭಟ್ ಅವರು ವಿಶೇಷ ಪೂಜೆ ಕಾರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ತಕ್ಕ ಮುಖ್ಯಸ್ಥರಾದ ಬೊಳ್ಳಡ್ಕ ಅಪ್ಪಾಜಿ, ದೇವಾಲಯ ಸಮಿತಿ ಮಾಜಿ ಅಧ್ಯಕ್ಷರಾದ ಬಿದ್ದಾಟಂಡ ತಮ್ಮಯ್ಯ, ಇಸ್ಮಾಯಿಲ್, ಕರಿಕೆ ರಾಮನಾಥ್, ಲವಚಿಣ್ಣಪ್ಪ ಇತರರು ಇದ್ದರು.
ಬಳಿಕ ತಲಕಾವೇರಿಗೆ ತೆರಳಿ ಸಂಕಲ್ಪ ಪೂಜೆ ಮಾಡಿ, ತುಲಾಭಾರ ನೆರವೇರಿಸಿ ವಿಶೇಷ ಪ್ರಾರ್ಥನೆಯನ್ನು ಶಾಸಕರಾದ ಪೊನ್ನಣ್ಣ ಅವರು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು ಅದಿದೇವತೆ ತಾಯಿ ಕಾವೇರಿ ಮಾತೆ ಹಾಗೂ ಇಗ್ಗುತಪ್ಪ ದೇವರು ಶಾಸಕರಿಗೆ ಉಜ್ವಲ ಭವಿಷ್ಯ ಕಲ್ಪಿಸಲಿ ಎಂದು ಎಂದು ಪ್ರಾರ್ಥಿಸಿದರು. ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಅವರು ತಾಯಿ ಕಾವೇರಿ ಮಾತೆ ಶಾಸಕರಿಗೆ ಒಳಿತು ಉಂಟುಮಾಡಲಿ ಎಂದರು.
ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಜನ್ಮ ದಿನದ ಪ್ರಯುಕ್ತ ಲೋಕ ಕಲ್ಯಾಣಕ್ಕಾಗಿ ಕುಟುಂಬ ಸದಸ್ಯರ ಜತೆಗೂಡಿ ತಾಯಿ ಕಾವೇರಿ ಮಾತೆ ಹಾಗೂ ಶ್ರೀ ಭಗಂಡೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.
ನಾಡಿನಲ್ಲಿ ಉತ್ತಮ ಮಳೆ ಆಗುತ್ತಿದ್ದು, ಎಲ್ಲರಲ್ಲಿ ಸಂತಸ, ಸಮೃದ್ಧಿ ತರುವಂತಾಗಲಿ ಎಂದು ಪ್ರಾರ್ಥಿಸಲಾಗಿದೆ. ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದ ಮನೆ, ರಸ್ತೆ, ಸೇತುವೆ ಹಾನಿ ಬಗ್ಗೆ ಮುಖ್ಯಮಂತ್ರಿ ಅವರು, ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಲ್ಲಿ ಗಮನ ಸೆಳೆಯಲಾಗಿದ್ದು, ಹೆಚ್ಚಿನ ಅನುದಾನ ಬಿಡುಗಡೆಗೆ ಮನವಿ ಮಾಡಲಾಗಿದೆ ಎಂದರು.
ಕಾಡಾನೆ ಮತ್ತು ಮಾನವ ಸಂಘರ್ಷ ತಪ್ಪಿಸುವಲ್ಲಿ ಹಲವು ಕಾರ್ಯಕ್ರಮ ರೂಪಿಸಲಾಗಿದೆ. ಆ ನಿಟ್ಟಿನಲ್ಲಿ ರೈಲ್ವೆ ಬ್ಯಾರಿಕೇಡ್ಗಳ ನಿರ್ಮಾಣ ಮಾಡಲಾಗುವುದು. ರ್ಯಾಪಿಡ್ ರ್ಯಾಸ್ಪನ್ಸ್ ತಂಡವನ್ನು ಮತ್ತಷ್ಟು ಬಲಪಡಿಸಲಾಗುವುದು, ಈ ಸಂಬಂಧ ಅರಣ್ಯ ಸಚಿವರ ಜತೆಗೂ ಚರ್ಚಿಸಲಾಗಿದೆ ಎಂದು ಪೊನ್ನಣ್ಣ ಅವರು ಮಾಹಿತಿ ನೀಡಿದರು.
ಭಾಗಮಂಡಲ ಬಳಿಯ ಚೇರಂಬಾಣೆ ವ್ಯಾಪ್ತಿಯಲ್ಲಿನ ಸೇತುವೆ ಸರಿಪಡಿಸಲಾಗುವುದು, ಜಿಲ್ಲೆಯಲ್ಲಿ ವಿದ್ಯುತ್ ಪೂರೈಕೆಯನ್ನು ಹೆಚ್ಚಿಸುವಲ್ಲಿ 66/11 ಸಾಮಥ್ರ್ಯದ 7 ವಿದ್ಯುತ್ ಉಪ ಘಟಕ ನಿರ್ಮಾಣ ಮಾಡಲು ಮುಂದಾಗಲಾಗಿತ್ತು, ಆದರೆ ಭವಿಷ್ಯದಲ್ಲಿ ಮತ್ತಷ್ಟು ವಿದ್ಯುತ್ ಬೇಡಿಕೆ ಹೆಚ್ಚಾಗುವುದರಿಂದ ಹೆಚ್ಚಿನ ಸಾಮಥ್ರ್ಯದ ವಿದ್ಯುತ್ ಉಪ ಘಟಕ ನಿರ್ಮಾಣ ಮಾಡಲಾಗುವುದು, ಆ ನಿಟ್ಟಿನಲ್ಲಿ ಪ್ರಯತ್ನಿಸಲಾಗಿದೆ ಎಂದರು.
ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಹುಗ್ರಾಮ ಯೋಜನೆಯಡಿ ಗ್ರಾಮೀಣ ಪ್ರದೇಶದಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಒತ್ತು ನೀಡಲಾಗಿದೆ. ಈ ಸಂಬಂಧ ಡಿಪಿಆರ್ ಸಿದ್ಧವಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.
ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು, ಆದ್ಯತೆ ಮೇಲೆ ಯೋಜನೆ ರೂಪಿಸಲಾಗುವುದು ಎಂದರು.
ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿಗಳು ವಿವಿಧ ಕಾರ್ಯಕ್ರಮ ಆಯೋಜಿಸಿದ್ದಾರೆ. ಆ ನಿಟ್ಟಿನಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 59 ಗ್ರಾ.ಪಂ.ಗಳಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಗೆಯೇ ಬಡ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ, ಗೋಣಿಕೊಪ್ಪದ ಕೀರೆಹೋಳೆ ಬದಿ ಗಿಡ ನೇಡುವ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದು ಮಾಹಿತಿ ನೀಡಿದರು.
ವಿದ್ಯಾರ್ಥಿಗಳ ಜೊತೆ ಹುಟ್ಟು ಹಬ್ಬ ಆಚರಿಸಿದ ಪೊನ್ನಣ್ಣ: ಬಳಿಕ ಭಾಗಮಂಡಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತೆರಳಿ ಅಲ್ಲಿನ ವಿದ್ಯಾರ್ಥಿಗಳ ಜೊತೆಗೂಡಿ ಕೇಕ್ ವಿತರಿಸುವ ಮೂಲಕ ಜನ್ಮ ದಿನ ಆಚರಿಸಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಮಕ್ಕಳಿಗೆ ಪೆನ್ನು, ಪೆನ್ಸಿಲ್ ನೀಡುವ ಮೂಲಕ ಹುಟ್ಟುಹಬ್ಬ ಆಚರಣೆ ಗಮನ ಸೆಳೆಯಿತು. ಮಕ್ಕಳು ಈ ಸಂದರ್ಭದಲ್ಲಿ ಉಲ್ಲಾಸದಿಂದ ಸಂಭ್ರಮಿಸಿದರು.
ನಂತರ ಮಾತನಾಡಿದ ಎ.ಎಸ್.ಪೊನ್ನಣ್ಣ ಅವರು ವಿದ್ಯಾರ್ಥಿಗಳು ಲಭ್ಯವಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ವಿದ್ಯಾಭ್ಯಾಸ ಮುಂದುವರೆಸಬೇಕು. ಈ ಭಾಗದಲ್ಲಿ ಹಲವು ಸವಾಲುಗಳ ನಡುವೆ ವಿದ್ಯಾರ್ಥಿಗಳು ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು.
ಪ್ರಕೃತಿಯ ಮಡಿಲಲ್ಲಿ ಇರುವ ತಾವು ಪರಿಸರ ಸ್ವಚ್ಚತೆಗೆ ಹೆಚ್ಚಿನ ಗಮನಹರಿಸಬೇಕು. ಸುಂದರ ಕೊಡಗು ಉಳಿಯಲು ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಬಳಿಕ ಭಾಗಮಂಡಲದ ಮಾರುಕಟ್ಟೆ ಆವರಣದಲ್ಲಿ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಗಮನ ಸೆಳೆದರು. ಅಲ್ಲಿನ ಅಂಗಡಿಗೆ ತೆರಳಿ ಸ್ವಚ್ಚತೆ ಬಗ್ಗೆ ಅರಿವು ಮೂಡಿದರು.
ದೇವಾಲಯ ಸಮಿತಿ ಮಾಜಿ ಅಧ್ಯಕ್ಷರಾದ ಬಿದ್ದಾಟಂಡ ತಮ್ಮಯ್ಯ, ಇಸ್ಮಾಯಿಲ್, ಕರಿಕೆ ರಾಮನಾಥ್, ಲವಚಿಣ್ಣಪ್ಪ, ಕೋಳಿಬೈಲು ವೆಂಕಟೇಶ್, ಸುನಿಲ್ ಪತ್ರವೋ, ಇಸ್ಮಾಯಿಲ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಲೋಕೇಶ್, ಎಸ್ಡಿಎಂಸಿ ಅಧ್ಯಕ್ಷರಾದ ಉಸ್ಮಾನ್, ಹೊಸೂರು ಸೂರಜ್ ಇತರರು ಇದ್ದರು.










