ಮಡಿಕೇರಿ ಜು.9 NEWS DESK : ಕೊಡಗು ಜಿಲ್ಲೆಯನ್ನು ಕಾಡುತ್ತಿರುವ ಕಾಡಾನೆಗಳ ಉಪಟಳ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ರ್ಯಾಪಿಡ್ ರ್ಯಾಸ್ಪನ್ಸ್ ತಂಡಕ್ಕೆ ಮತ್ತಷ್ಟು ಬಲ ತುಂಬಲಾಗುವುದು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಭರವಸೆ ನೀಡಿದ್ದಾರೆ. ತಮ್ಮ 50ನೇ ಜನ್ಮ ದಿನದ ಪ್ರಯುಕ್ತ ಇಂದು ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಡಾನೆ ಮತ್ತು ಮಾನವ ಸಂಘರ್ಷ ತಪ್ಪಿಸುವಲ್ಲಿ ಹಲವು ಕಾರ್ಯಕ್ರಮ ರೂಪಿಸಲಾಗಿದೆ. ಆ ನಿಟ್ಟಿನಲ್ಲಿ ರೈಲ್ವೆ ಬ್ಯಾರಿಕೇಡ್ಗಳ ನಿರ್ಮಾಣ ಮಾಡಲಾಗುವುದು. ರ್ಯಾಪಿಡ್ ರ್ಯಾಸ್ಪನ್ಸ್ ತಂಡವನ್ನು ಮತ್ತಷ್ಟು ಬಲಪಡಿಸಲಾಗುವುದು, ಈ ಸಂಬಂಧ ಅರಣ್ಯ ಸಚಿವರ ಜತೆಗೂ ಚರ್ಚಿಸಲಾಗಿದೆ ಎಂದು ಪೊನ್ನಣ್ಣ ಹೇಳಿದರು. ನಾಡಿನಲ್ಲಿ ಉತ್ತಮ ಮಳೆ ಆಗುತ್ತಿದ್ದು, ಎಲ್ಲರಲ್ಲಿ ಸಂತಸ, ಸಮೃದ್ಧಿ ತರುವಂತಾಗಲಿ ಎಂದು ಪ್ರಾರ್ಥಿಸಲಾಗಿದೆ. ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದ ಮನೆ, ರಸ್ತೆ, ಸೇತುವೆ ಹಾನಿ ಬಗ್ಗೆ ಮುಖ್ಯಮಂತ್ರಿ ಅವರು, ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಲ್ಲಿ ಗಮನ ಸೆಳೆಯಲಾಗಿದ್ದು, ಹೆಚ್ಚಿನ ಅನುದಾನ ಬಿಡುಗಡೆಗೆ ಮನವಿ ಮಾಡಲಾಗಿದೆ ಎಂದರು. ಭಾಗಮಂಡಲ ಬಳಿಯ ಚೇರಂಬಾಣೆ ವ್ಯಾಪ್ತಿಯಲ್ಲಿನ ಸೇತುವೆ ಸರಿಪಡಿಸಲಾಗುವುದು, ಜಿಲ್ಲೆಯಲ್ಲಿ ವಿದ್ಯುತ್ ಪೂರೈಕೆಯನ್ನು ಹೆಚ್ಚಿಸುವಲ್ಲಿ 66/11 ಸಾಮರ್ಥ್ಯದ 7 ವಿದ್ಯುತ್ ಉಪ ಘಟಕ ನಿರ್ಮಾಣ ಮಾಡಲು ಮುಂದಾಗಲಾಗಿತ್ತು, ಆದರೆ ಭವಿಷ್ಯದಲ್ಲಿ ಮತ್ತಷ್ಟು ವಿದ್ಯುತ್ ಬೇಡಿಕೆ ಹೆಚ್ಚಾಗುವುದರಿಂದ ಹೆಚ್ಚಿನ ಸಾಮರ್ಥ್ಯದ ವಿದ್ಯುತ್ ಉಪ ಘಟಕ ನಿರ್ಮಾಣ ಮಾಡಲಾಗುವುದು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಹುಗ್ರಾಮ ಯೋಜನೆಯಡಿ ಗ್ರಾಮೀಣ ಪ್ರದೇಶದಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಒತ್ತು ನೀಡಲಾಗಿದೆ. ಈ ಸಂಬಂಧ ಡಿಪಿಆರ್ ಸಿದ್ಧವಾಗಿದೆ ಎಂದು ಎ.ಎಸ್.ಪೊನ್ನಣ್ಣ ಹೇಳಿದರು. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು, ಆದ್ಯತೆ ಮೇಲೆ ಯೋಜನೆ ರೂಪಿಸಲಾಗುವುದು ಎಂದರು. ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿಗಳು ವಿವಿಧ ಕಾರ್ಯಕ್ರಮ ಆಯೋಜಿಸಿದ್ದಾರೆ. ಆ ನಿಟ್ಟಿನಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 59 ಗ್ರಾ.ಪಂ.ಗಳಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಗೆಯೇ ಬಡ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ, ಗೋಣಿಕೊಪ್ಪದ ಕೀರೆಹೋಳೆ ಬದಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು. ::: ವಿದ್ಯಾರ್ಥಿಗಳೊಂದಿಗೆ ಹುಟ್ಟು ಹಬ್ಬ ::: ನಂತರ ಭಾಗಮಂಡಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತೆರಳಿದ ಶಾಸಕ ಪೊನ್ನಣ್ಣ ಅವರು ಅಲ್ಲಿನ ವಿದ್ಯಾರ್ಥಿಗಳ ಜೊತೆಗೂಡಿ ಕೇಕ್ ವಿತರಿಸುವ ಮೂಲಕ ಜನ್ಮ ದಿನ ಆಚರಿಸಿದರು. ಇದೇ ಸಂದರ್ಭ ಅವರು ಮಕ್ಕಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ಲಭ್ಯವಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ವಿದ್ಯಾಭ್ಯಾಸ ಮುಂದುವರೆಸಬೇಕು. ಈ ಭಾಗದಲ್ಲಿ ಹಲವು ಸವಾಲುಗಳ ನಡುವೆ ವಿದ್ಯಾರ್ಥಿಗಳು ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು. ಪ್ರಕೃತಿಯ ಮಡಿಲಲ್ಲಿ ಇರುವ ತಾವು ಪರಿಸರ ಸ್ವಚ್ಚತೆಗೆ ಹೆಚ್ಚಿನ ಗಮನಹರಿಸಬೇಕು. ಸುಂದರ ಕೊಡಗು ಉಳಿಯಲು ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಬಳಿಕ ಭಾಗಮಂಡಲದ ಮಾರುಕಟ್ಟೆ ಆವರಣದಲ್ಲಿ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿದರು. ಅಲ್ಲಿನ ಅಂಗಡಿಗಳಿಗೆ ತೆರಳಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದರು. ದೇವಾಲಯ ಸಮಿತಿ ಮಾಜಿ ಅಧ್ಯಕ್ಷರಾದ ಬಿದ್ದಾಟಂಡ ತಮ್ಮಯ್ಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಲೋಕೇಶ್, ಎಸ್ಡಿಎಂಸಿ ಅಧ್ಯಕ್ಷರಾದ ಉಸ್ಮಾನ್, ಹೊಸೂರು ಸೂರಜ್, ಇಸ್ಮಾಯಿಲ್, ಕರಿಕೆ ರಾಮನಾಥ್, ಲವಚಿಣ್ಣಪ್ಪ, ಕೋಳಿಬೈಲು ವೆಂಕಟೇಶ್, ಸುನಿಲ್ ಪತ್ರವೋ, ಇಸ್ಮಾಯಿಲ್ ಮತ್ತಿತರರು ಇದ್ದರು. ಇದಕ್ಕೂ ಮೊದಲು ಶಾಸಕರು ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು. ಬಳಿಕ ಮಹಾ ಗಣಪತಿ ದೇವಾಲಯದಲ್ಲಿ ಪೂಜೆ, ನಂತರ ಶ್ರೀಭಗಂಡೇಶ್ವರ ದೇವಾಲಯದ ಆವರಣದಲ್ಲಿ ವಿಶೇಷ ಪ್ರಾರ್ಥನೆ, ನಂತರ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಾಡಿನಲ್ಲಿ ಮತ್ತಷ್ಟು ಮಳೆ ಬೆಳೆಯಾಗಿ ಕೃಷಿಕರು ಸೇರಿದಂತೆ ಎಲ್ಲರಲ್ಲಿ ಸಮೃದ್ಧಿ, ಸಂತಸ ತರುವಂತಾಗಲಿ ಎಂದು ಪ್ರಾರ್ಥಿಸಿದರು. ಬಳಿಕ ಶ್ರೀಮಹಾವಿಷ್ಣು ದೇವರಲ್ಲಿ ಪೂಜೆ ಸಲ್ಲಿಸಿದ ನಂತರ ಸುಬ್ರಮಣ್ಯ ದೇವರಲ್ಲಿ ಪ್ರಾರ್ಥಿಸಿ ಕಲ್ಲುಸಕ್ಕರೆಯ ತುಲಾಭಾರ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದೇವಂಗೋಡಿ ಹರ್ಷ ಅವರು ಬಡವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕರು ಕೈಲಾದ ಸಹಾಯ ಹಾಗೂ ಸಹಕಾರ ನಿಡುತ್ತಿದ್ದು, ದೇವರು ಒಳ್ಳೆಯದು ಮಾಡಿ ಮತ್ತಷ್ಟು ಉಜ್ವಲ ಭವಿಷ್ಯ ನೀಡಲಿ ಎಂದು ಪ್ರಾರ್ಥಿಸಿದರು. ಪ್ರಮುಖರಾದ ನೆರವಂಡ ಉಮೇಶ್ ಅವರು ಮಾತನಾಡಿ ಶಾಸಕರ ನೇತೃತ್ವದಲ್ಲಿ ಮುಂದಿನ ದಿನದಲ್ಲಿ ಭಗಂಡೇಶ್ವರ ಸನ್ನಿಧಿಯಲ್ಲಿ ಅಷ್ಟಮಂಗಳ ಪೂಜೆಯೊಂದಿಗೆ ಬ್ರಹ್ಮಕಳಸ ಉತ್ಸವ ನೆರವೇರಿಸಿ, ಜೀರ್ಣೋದ್ಧಾರವಾಗಲಿ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಅರ್ಚಕರಾದ ಹರೀಶ್ ಭಟ್ ಅವರು ವಿಶೇಷ ಪೂಜೆ ಕಾರ್ಯ ನೆರವೇರಿಸಿದರು. ಈ ಸಂದರ್ಭ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ತಕ್ಕ ಮುಖ್ಯಸ್ಥ ಬೊಳ್ಳಡ್ಕ ಅಪ್ಪಾಜಿ, ದೇವಾಲಯ ಸಮಿತಿ ಮಾಜಿ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ, ಇಸ್ಮಾಯಿಲ್, ಕರಿಕೆ ರಾಮನಾಥ್, ಲವಚಿಣ್ಣಪ್ಪ ಇತರರು ಇದ್ದರು. ಬಳಿಕ ತಲಕಾವೇರಿಗೆ ತೆರಳಿ ಸಂಕಲ್ಪ ಪೂಜೆ ಮಾಡಿ, ತುಲಾಭಾರ ನೆರವೇರಿಸಿ ವಿಶೇಷ ಪ್ರಾರ್ಥನೆಯನ್ನು ಶಾಸಕರಾದ ಪೊನ್ನಣ್ಣ ಅವರು ಸಲ್ಲಿಸಿದರು.










